ADVERTISEMENT

ಜನರ ಅರ್ಜಿಗೆ ಸಕಾಲದಲ್ಲಿ ಸ್ಪಂದಿಸಿ: ರಾಜ್ಯ ಮಾಹಿತಿ ಆಯುಕ್ತೆ ಮಮತಾ ಗೌಡ

ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಮಾಹಿತಿ ಹಕ್ಕು ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2025, 4:21 IST
Last Updated 11 ನವೆಂಬರ್ 2025, 4:21 IST
ಸಭೆಯಲ್ಲಿ ರಾಜ್ಯ ಮಾಹಿತಿ ಆಯುಕ್ತೆ ಮಮತಾ ಗೌಡ ಮಾತನಾಡಿದರು
ಸಭೆಯಲ್ಲಿ ರಾಜ್ಯ ಮಾಹಿತಿ ಆಯುಕ್ತೆ ಮಮತಾ ಗೌಡ ಮಾತನಾಡಿದರು   

ಉಡುಪಿ: ಸರ್ಕಾರಿ ಕಾರ್ಯಗಳಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಮಾಹಿತಿ ಹಕ್ಕು ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ನಾಗರಿಕರು ಸರ್ಕಾರಿ ಕಾರ್ಯಗಳ ಬಗ್ಗೆ ಮಾಹಿತಿಯನ್ನು ಕೋರಿ ಅರ್ಜಿ ಸಲ್ಲಿಸಿದಾಗ ಮಾಹಿತಿಯನ್ನು ತಪ್ಪದೇ ನೀಡಬೇಕು ಎಂದು ರಾಜ್ಯ ಮಾಹಿತಿ ಆಯುಕ್ತೆ ಮಮತಾ ಗೌಡ ಹೇಳಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾ ಪಂಚಾಯಿತಿಯ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಆಯೋಜಿಸಿದ್ದ ಮಾಹಿತಿ ಹಕ್ಕು ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕತೆ ಉಳಿಸಿಕೊಳ್ಳುವ ದೃಷ್ಟಿಯಿಂದ 2005 ರಲ್ಲಿ ಮಾಹಿತಿ ಹಕ್ಕು ಕಾಯ್ದೆಯನ್ನು (ಆರ್.ಟಿ.ಐ) ಜಾರಿಗೊಳಿಸಿದ್ದು, ಪ್ರತಿಯೊಬ್ಬ ನಾಗರಿಕನೂ ಸರ್ಕಾರಿ ಅಧಿಕಾರಿಗಳಿಂದ ಸರ್ಕಾರದ ಕೆಲಸ ಕಾರ್ಯಗಳ ಬಗ್ಗೆ ಮಾಹಿತಿ ಪಡೆಯುವ ಹಕ್ಕನ್ನು ಹೊಂದಿರುತ್ತಾರೆ. ಅವರು ಮಾಹಿತಿ ಕೋರಿ ಅರ್ಜಿ ಸಲ್ಲಿಸಿದಾಗ ನಿಗದಿತ ಕಾಲಾವಧಿಯಲ್ಲಿ ಶುಲ್ಕವನ್ನು ಪಡೆದು ನಿಯಮಾನುಸಾರ ದಾಖಲಾತಿಗಳನ್ನು ನೀಡಬೇಕು ಎಂದರು.

ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಮಾಹಿತಿಯ ಪಾಲಕರಾಗಿದ್ದು, ಮಾಹಿತಿ ಹಕ್ಕು ಅಡಿ ಅರ್ಜಿಗಳು ಬಂದಾಗ ಕ್ಷುಲ್ಲಕ ಕಾರಣ ನೀಡದೇ, ಕಚೇರಿಗೆ ಸಂಬಂಧಿಸಿದ ಯಾವುದೇ ಸಾರ್ವಜನಿಕ ಕಡತಗಳು, ಮಾಹಿತಿಗಳು, ಫೋಟೋಗಳು, ಡಿಜಿಟಲ್ ಮಾಹಿತಿಗಳು ಸೇರಿದಂತೆ ಮತ್ತಿತರ ದಾಖಲೆಗಳನ್ನು ಯಥಾವತ್ತಾಗಿ ನೀಡಬೇಕು ಎಂದು ಸೂಚಿಸಿದರು.

ADVERTISEMENT

ಸಂಪೂರ್ಣವಾಗಿ ಖಾಸಗಿಯಾಗಿರುವ ಸಂಸ್ಥೆಗಳ ವಿವರ, ವ್ಯಕ್ತಿಯ ಪಾನ್, ಆಧಾರ್, ಮಾರ್ಕ್ಸ್ ಕಾರ್ಡ್‌ಗಳು ಅಥವಾ ಇನ್ನಿತರ ಯಾವುದೇ ವೈಯಕ್ತಿಕ ಮಾಹಿತಿಗಳನ್ನು ನೀಡುವಂತಿಲ್ಲ. ಮಾಹಿತಿಯು ಅತಿ ಹೆಚ್ಚಿನ ಸಾರ್ವಜನಿಕ ಹಿತಾಸಕ್ತಿಯನ್ನು ಹೊಂದಿದ್ದಾಗ ಸೆಕ್ಷನ್ 11 ರ ಅಡಿಯಲ್ಲಿ ವೈಯಕ್ತಿಕ ಮಾಹಿತಿಗಳ ಬಗ್ಗೆ ಸಂಬಂಧಪಟ್ಟವರಿಗೆ ನೋಟೀಸ್ ನೀಡಿ, ಅವರಿಂದ ಮಾಹಿತಿಯನ್ನು ಹಂಚಿಕೊಳ್ಳುವ ಬಗ್ಗೆ ಅನುಮತಿ ಪಡೆದು ಅವರು ಒಪ್ಪಿದರೆ ನೀಡಬಹುದಾಗಿದೆ ಎಂದರು.

ಸ್ವಯಂ ಪ್ರೇರಿತವಾಗಿ ನೀಡುವಂತಹ ಮಾಹಿತಿಗಳನ್ನು ಮಾಹಿತಿ ಹಕ್ಕು ಅಧಿನಿಯಮದ 4(1)ಎ, 4(1)ಬಿ ಅಡಿಯಲ್ಲಿ ವೆಬ್‌ಸೈಟ್‌ನಲ್ಲಿ ಕಚೇರಿಯಲ್ಲಿ ನಿರ್ವಹಿಸುತ್ತಿರುವ ಕಡತ, ಕಚೇರಿಯ ಕಾರ್ಯ ಹಾಗೂ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ವಿವರ ಸೇರಿದಂತೆ ಮತ್ತಿತರ ವಿವರಗಳನ್ನು ಕಾಲಕಾಲಕ್ಕೆ ಕ್ಷಿಪ್ರವಾಗಿ ನವೀಕರಿಸಿ, ಅಪ್‌ಲೋಡ್ ಮಾಡಿದ್ದಲ್ಲಿ ಸಾರ್ವಜನಿಕರು ಅದರ ಲಾಭ ಪಡೆದುಕೊಳ್ಳಲು ಅನುಕೂಲವಾಗುತ್ತದೆ. ಅದರಿಂದ ಅರ್ಜಿ ಸಲ್ಲಿಸುವುದು ತಪ್ಪುತ್ತದೆ ಎಂದು ಹೇಳಿದರು.

8(1)ಜೆ ನಲ್ಲಿ ಸೂಚಿಸಲಾದ ದಾಖಲೆಗಳ ಮಾಹಿತಿ ನೀಡುವ ವಿನಾಯಿತಿ ಇದ್ದಲ್ಲಿ ಹಾಗೂ ನ್ಯಾಯಾಲಯದಿಂದ ನೀಡಬಾರದು ಎಂದು ಸ್ಪಷ್ಟ ಆದೇಶವಿದ್ದ ಸಂದರ್ಭದಲ್ಲಿ ಮಾಹಿತಿ ನೀಡಲು ನಿರಾಕರಿಸಬಹುದಾಗಿದೆ ಎಂದ ಅವರು, ಸರ್ಕಾರಿ ನೌಕರರು ಸಾರ್ವಜನಿಕರಿಗೆ ಸಹಕಾರ ನೀಡಬೇಕು ಎನ್ನುವ ಮನೋಭಾವ ಹೊಂದುವುದರೊಂದಿಗೆ ದಾಖಲೆಗಳನ್ನು ಕೋರಿ ಅರ್ಜಿ ಸಲ್ಲಿಸಿದಾಗ ನೀಡಬೇಕು ಎಂದರು.

ಕಾರ್ಯಾಗಾರದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಸ್.ಎಸ್.ಕಾದ್ರೋಳ್ಳಿ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಉಪಸ್ಥಿತರಿದ್ದರು.

ಮಾಹಿತಿ ಹಕ್ಕು ಕಾಯ್ದೆಯಲ್ಲಿ ಕಾಲಕಾಲಕ್ಕೆ ತಿದ್ದುಪಡಿಗಳನ್ನು ಮಾಡಲಾಗುತ್ತದೆ. ಅವುಗಳ ಬಗ್ಗೆ ಅಧಿಕಾರಿಗಳು ತಿಳಿದುಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಕಾರ್ಯಾಗಾರ ಆಯೋಜಿಸಲಾಗಿದೆ
ಸ್ವರೂಪ ಟಿ.ಕೆ. ಜಿಲ್ಲಾಧಿಕಾರಿ

‘ಮೂವತ್ತು ದಿನಗಳೊಳಗಾಗಿ ಮಾಹಿತಿ ನೀಡಿ’

ಅಧಿಕಾರಿಗಳು ಮೊದಲು ತಾವು ಕೂಡ ಪ್ರಜೆಗಳು ಎನ್ನುವುದನ್ನು ನೆನಪಿಟ್ಟುಕೊಳ್ಳಬೇಕು. ಮಾಹಿತಿ ಹಕ್ಕು ಕಾಯ್ದೆಯಡಿ ಕೇಳುವ ಯಾವುದೇ ಮಾಹಿತಿ ತಮ್ಮಲ್ಲಿದ್ದರೆ ಅದನ್ನು ಅರ್ಜಿದಾರರಿಗೆ ಕೂಡಲೇ ನೀಡಿ ಹಿಂಬರಹ ಪಡೆದುಕೊಂಡು ಶುಲ್ಕ ಪಾವತಿಸಿಕೊಳ್ಳಬೇಕು. ಸಾರ್ವಜನಿಕರು ಮಾಹಿತಿಗಾಗಿ ಅರ್ಜಿ ಹಾಕಿದಾಗ ಅವರನ್ನು ಅನಾವಶ್ಯಕ ಅಲೆದಾಡಿಸಿಕೊಳ್ಳದೇ ಮೂವತ್ತು ದಿನಗಳ ಒಳಗಾಗಿ ತಮ್ಮಲ್ಲಿರುವ ಮಾಹಿತಿಯನ್ನು ಅವರಿಗೆ ನೀಡಿ ಸಹಕರಿಸಬೇಕು. ತಪ್ಪಿದ್ದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಮಮತಾ ಗೌಡ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.