ADVERTISEMENT

ಹದಗೆಟ್ಟಿರುವ ರಸ್ತೆ ದುರಸ್ತಿಗೊಳಿಸಿ: ರೋಹಿಣಿ ಸಿಂಧೂರಿ ಸೂಚನೆ

ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2025, 6:48 IST
Last Updated 2 ಆಗಸ್ಟ್ 2025, 6:48 IST
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಮಾತನಾಡಿದರು
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಮಾತನಾಡಿದರು   

ಉಡುಪಿ: ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಹದಗೆಟ್ಟಿರುವ ರಸ್ತೆಗಳ ದುರಸ್ತಿ ಕಾರ್ಯಗಳನ್ನು ತ್ವರಿತವಾಗಿ ಮಾಡುವುದರೊಂದಿಗೆ, ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾ ಪಂಚಾಯಿತಿಯ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಶುಕ್ರವಾರ ನಡೆದ   ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹವಾಮಾನ ಇಲಾಖೆಯಿಂದ ಪ್ರತಿದಿನ ನೀಡುವ ಹವಾಮಾನ ಮುನ್ಸೂಚನೆಯ ಮಾಹಿತಿಯನ್ನು ಸಾರ್ವಜನಿಕರಿಗೆ ಹಾಗೂ ಮೀನುಗಾರಿಕೆಗೆ ತೆರಳುವ ಮೀನುಗಾರರಿಗೆ ಒದಗಿಸಬೇಕು. ಮೀನುಗಾರರು ಮೀನುಗಾರಿಕೆಗೆ ತೆರಳುವಾಗ ಕಡ್ಡಾಯವಾಗಿ ಲೈಫ್ ಜಾಕೆಟ್‌ಗಳನ್ನು ಬಳಸುವಂತೆ ಮನವೊಲಿಸಬೇಕು. ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣವಿದ್ದಲ್ಲಿ ಮೀನುಗಾರಿಕೆಗೆ ಹೋಗದಂತೆ ಎಚ್ಚರ ವಹಿಸಬೇಕು ಎಂದರು.

ಕರಾವಳಿ ಭಾಗಗಳಲ್ಲಿ ಕಡಲ್ಕೊರೆತ ಪ್ರತಿ ವರ್ಷವೂ ಉಂಟಾಗುತ್ತಿದೆ. ಅದರ ತಡೆಗೆ ಶಾಶ್ವತ ವೈಜ್ಞಾನಿಕ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಮುಂದಾಗಬೇಕು. ಮಳೆಯಿಂದ ಭತ್ತದ ಬೆಳೆ ಹಾಗೂ ತೋಟಗಾರಿಕಾ ಬೆಳೆಗಳ ಹಾನಿಗಳನ್ನು ನಿಖರವಾಗಿ ಗುರುತಿಸಿ, ರೈತರಿಗೆ ಪರಿಹಾರವನ್ನು ಒದಗಿಸಬೇಕು ಎಂದರು.

ಈಗಾಗಲೇ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕೈಗೊಂಡಿರುವ ಕಾಲುಸಂಕ ನಿರ್ಮಾಣ ಕಾಮಗಾರಿಗಳನ್ನು ಮಳೆ ಕಡಿಮೆಯಾದ ಕೂಡಲೇ ಪುನರಾರಂಭಿಸಿ, ತ್ವರಿತವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದರು.

ಜಲಜೀವನ್ ಮಿಷನ್ ಅಡಿಯಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮನೆ ಮನೆಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ 525 ನಳ ಸಂಪರ್ಕ ಕಾಮಗಾರಿಗಳಲ್ಲಿ 487 ಪೂರ್ಣಗೊಳಿಸಲಾಗಿದೆ. ಪ್ರಗತಿಯಲ್ಲಿರುವ 38 ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ADVERTISEMENT

‘ಸರ್ಕಾರಕ್ಕೆ ಪ್ರಸ್ತಾವನೆ ಕಳಿಸಿ’

ಜಿಲ್ಲೆಯಲ್ಲಿ ಕಟ್ಟಡ ಕಾಮಗಾರಿಗಳನ್ನು ಕೈಗೊಳ್ಳಲು ಅಗತ್ಯವಿರುವ 9/11 ಎ ದಾಖಲೆಗಳನ್ನು ಪಡೆಯಲು ಕೆಲವು ನಿಯಮಾವಳಿಗಳಿಂದ ತೊಂದರೆ ಉಂಟಾಗುತ್ತಿದೆ ಎಂಬ ದೂರುಗಳು ಸಾರ್ವಜನಿಕರಿಂದ ಕೇಳಿ ಬರುತ್ತಿವೆ. ನಿಯಮಾವಳಿಯಲ್ಲಿ ಕೆಲವೊಂದು ವಿನಾಯಿತಿ ನೀಡಿದ್ದಲ್ಲಿ ಸಮಸ್ಯೆಗಳನ್ನು ಪರಿಹರಿಸಬಹುದಾಗಿದೆ. ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕೂಡಲೇ ಕಳುಹಿಸಿ ಎಂದು ರೋಹಿಣಿ ಸಿಂಧೂರಿ ಹೇಳಿದರು.

ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಚಟುವಟಿಕೆಗೆ ಅನುಕೂಲವಾಗುವಂತೆ ಬಂದರಿನ ವಿಸ್ತರಣೆಗೆ ಯೋಜನೆಯನ್ನು ರೂಪಿಸಬೇಕು. ಹೆಜಮಾಡಿ ಬಂದರಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು
-ರೋಹಿಣಿ ಸಿಂಧೂರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.