ಉಡುಪಿ: ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಸೋಲಾರ್ ವ್ಯವಸ್ಥೆ ಅಳವಡಿಕೆಗೆ 300 ಕೋಟಿ ಖರ್ಚು ಮಾಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ನಗರದ ಮಣಿಪಾಲ್ ಇನ್ ಹೋಟೆಲ್ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಸೋಲಾರ್ ಅಳವಡಿಕೆಗೆ ಟೆಂಡರ್ ಪೂರ್ಣಗೊಂಡಿದ್ದು, 9 ಕಂಪನಿಗಳನ್ನು ಅಂತಿಮಗೊಳಿಸಲಾಗಿದೆ. ಜಿಲ್ಲಾವಾರು ಕಂಪನಿಗಳನ್ನು ಆಯ್ಕೆ ಮಾಡಲಾಗಿದೆ. ಟೆಂಡರ್ ಪಡೆದ ಕಂಪನಿಗಳಿಗೆ 5 ವರ್ಷಗಳ ನಿರ್ವಹಣೆ ಜವಾಬ್ದಾರಿ ವಹಿಸಲಾಗಿದೆ ಎಂದರು.
ಗ್ರಾಮ ಪಂಚಾಯಿತಿಗಳಲ್ಲಿ ಸೋಲಾರ್ ವ್ಯವಸ್ಥೆ ಜಾರಿಯಾದರೆ ವಿದ್ಯುತ್ ಬಿಲ್ ಪಾವತಿ ಸಮಸ್ಯೆ ನಿವಾರಣೆಯಾಗಲಿದೆ. ಪಂಚಾಯಿತಿಗಳು ಉತ್ಪಾದಿಸುವ ಹೆಚ್ಚುವರಿ ವಿದ್ಯುತ್ ಅನ್ನು ಗ್ರಿಡ್ಗಳಿಗೆ ಮಾರಾಟ ಮಾಡಬಹುದು. ಸಾರ್ವಜನಿಕರಿಗೆ ಸರ್ಕಾರದ ಸೇವೆಗಳು ತ್ವರಿತವಾಗಿ ಸಿಗಲು ಅನುಕೂಲವಾಗಲಿದೆ ಎಂದರು.
ಪಂಚಾಯಿತಿಗಳಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳುತ್ತಿದ್ದಂತೆ ಸೋಲಾರ್ ಉಪಕರಣಗಳ ಅಳವಡಿಕೆ ಆರಂಭವಾಗಲಿದೆ ಎಂದು ಈಶ್ವರಪ್ಪ, ಪಂಚಾಯಿತಿ ಸದಸ್ಯರ ಗೌರವಧನವನ್ನು 1 ಸಾವಿರದಿಂದ 2 ಸಾವಿರಕ್ಕೆ ಹೆಚ್ಚಳ ಮಾಡುವ ಸಂಬಂಧ ಪ್ರಸ್ತಾವವನ್ನು ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.