ADVERTISEMENT

ಹಕ್ಕುಪತ್ರ ದೊರೆತ ವಾರದೊಳಗೆ ಆರ್‌ಟಿಸಿ: ಸಚಿವ ವಿ. ಸುನಿಲ್ ಕುಮಾರ್

ಕಾರ್ಕಳದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2022, 9:34 IST
Last Updated 9 ನವೆಂಬರ್ 2022, 9:34 IST
ಕಾರ್ಕಳ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಫಲಾನುಭವಿಗಳಿಗೆ ಸಚಿವ ವಿ.ಸುನಿಲ್ ಕುಮಾರ್ ಹಕ್ಕುಪತ್ರ ವಿತರಿಸಿದರು.
ಕಾರ್ಕಳ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಫಲಾನುಭವಿಗಳಿಗೆ ಸಚಿವ ವಿ.ಸುನಿಲ್ ಕುಮಾರ್ ಹಕ್ಕುಪತ್ರ ವಿತರಿಸಿದರು.   

ಕಾರ್ಕಳ: ಫಲಾನುಭವಿಗಳಿಗೆ ಹಕ್ಕುಪತ್ರ ದೊರೆತ ಒಂದು ವಾರದಲ್ಲಿ ಆರ್‌ಟಿಸಿ (ಪಹಣಿ ಪತ್ರ) ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು.

2015ರಿಂದ ಸರ್ಕಾರಿ ಜಾಗದಲ್ಲಿ ಮನೆ ಮಾಡಿಕೊಂಡಿರುವ 14 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಫಲಾನು ಭವಿಗಳಿಗೆ ಮಂಗಳವಾರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಕ್ಕುಪತ್ರ ವಿತರಿಸಿ ಅವರು ಮಾತನಾಡಿದರು.

‘ಸರ್ಕಾರಿ ಜಾಗದಲ್ಲಿ ಯಾರು ಮನೆ ಮಾಡಿಕೊಂಡಿದ್ದರೂ ಅಂತಹ ಅರ್ಹ ಕುಟುಂಬಕ್ಕೆ ಹಕ್ಕುಪತ್ರವನ್ನು ಕೊಟ್ಟೆಕೊಡುತ್ತೇವೆ. ತಮ್ಮ ಜೀವನದ ಆಸರೆಗಾಗಿ ಮನೆ ಮಾಡಿಕೊಂಡಿರುವ ಕಾರ್ಮಿಕರು ಹಾಗೂ ಬಡವರಿಗೆ ಬಿಜೆಪಿ ಸರ್ಕಾರ ಹಕ್ಕುಪತ್ರ ನೀಡಲು ಬದ್ಧವಾಗಿದೆ. ಹೊಸಮನೆ ಕಟ್ಟಿಕೊಳ್ಳುವವರು ಪಂಚಾಯಿತಿಗೆ ಅರ್ಜಿ ಸಲ್ಲಿಸಿ ವಸತಿ ಯೋಜನೆಯಲ್ಲಿ ಅನುದಾನ ಪಡೆಯಬೇಕು’ ಎಂದರು.

ADVERTISEMENT

ತಾಲ್ಲೂಕು ವ್ಯಾಪ್ತಿಯ ಸರ್ಕಾರಿ ಜಾಗದಲ್ಲಿ ಮನೆ ಮಾಡಿರುವ ಕುಟುಂಬದ ಕುರಿತು ಕಂದಾಯ ಇಲಾಖೆ ಪರಿಶೀಲನೆ ನಡೆಸಿ ಕಾನೂನು ತೊಡಕುಗಳನ್ನು ನಿವಾರಿಸಿ ನೂರು ಮಂದಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಗಿದೆ. ಇದು ಮುಂದುವರಿಯಲಿದೆ. ಮುಂದಿನ ದಿನಗಳಲ್ಲಿ ಆಯಾ ಗ್ರಾಮ ಪಂಚಾಯಿತಿಗಳಿಗೆ ತೆರಳಿ ಹಕ್ಕು ಪತ್ರ ವಿತರಿಸಲಾಗುವುದು ಎಂದರು.

ಕೋವಿಡ್ ಸೋಂಕಿನಿಂದ ಮೃತಪಟ್ಟ ಎರಡು ಕುಟುಂಬಗಳಿಗೆ ತಲಾ ₹ 1 ಲಕ್ಷ ಪರಿಹಾರದ ಚೆಕ್ ನೀಡಲಾಯಿತು. ಕಾರ್ಕಳದ ಶರೀಫ್, ಮರ್ಣೆಯ ಸುಚಿತ್ರಾ ಚೆಕ್ ಸ್ವೀಕರಿಸಿದರು.

ತಹಶೀಲ್ದಾರ್ ಪ್ರದೀಪ್ ಕುರುಡೇಕರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗುರುದತ್ ಎಂ.ಎನ್., ಕುಕ್ಕುಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಶಿಮಣಿ ಸಂಪತ್, ಮಿಯ್ಯಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ಗಿರೀಶ್ ಅಮೀನ್, ರೆಂಜಾಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ದೀಪಿಕಾ, ನಲ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕವಿತಾ ಸಂತೋಷ್, ಹಿರ್ಗಾನ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂತೋಷ್ ಕುಮಾರ್, ಶಿರ್ಲಾಲು ಗ್ರಾಮ ಪಂಚಾಯಿತಿ ಅಧ್ಯಕ್ಷ ರಮಾನಂದ ಪೂಜಾರಿ ಇದ್ದರು.

ಕಂದಾಯ ಇಲಾಖೆ ಪ್ರಥಮ ದರ್ಜೆ ಸಹಾಯಕ ಮಹಮ್ಮದ್ ರಿಯಾಜ್ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.