ADVERTISEMENT

ಅಕ್ರಮ ಮರಳುಗಾರಿಕೆ ತಡೆಗೆ ಕ್ರಮ: ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2021, 16:02 IST
Last Updated 25 ನವೆಂಬರ್ 2021, 16:02 IST
ಎಂ.ಕೂರ್ಮಾರಾವ್, ಜಿಲ್ಲಾಧಿಕಾರಿ 
ಎಂ.ಕೂರ್ಮಾರಾವ್, ಜಿಲ್ಲಾಧಿಕಾರಿ    

ಉಡುಪಿ: ಜಿಲ್ಲೆಯ ಕರಾವಳಿ ನಿಯಂತ್ರಣ ವಲಯದಲ್ಲಿ ಗುರುತಿಸಲಾಗಿರುವ ಮರಳು ದಿಬ್ಬಗಳನ್ನು ತೆರವುಗೊಳಿಸುವ ದೋಣಿಗಳಿಗೆ ಹಾಗೂ ಮರಳು ಸಾಗಾಟ ವಾಹನಗಳಿಗೆ ಜಿಪಿಎಸ್ ತಂತ್ರಾಂಶ ಅಳವಡಿಸಲಾಗಿದ್ದು, ನಿಯಮ ಉಲ್ಲಂಘನೆ ಪರಿಶೀಲನೆಗೆ ಜಿಪಿಎಸ್‌ ಮಾನಿಟರಿಂಗ್ ಕೇಂದ್ರ ಹಾಗೂ ದಿನದ 24 ಗಂಟೆ ಕಾರ್ಯ ನಿರ್ವಹಿಸುವ ದೂರವಾಣಿ ದೂರು ಸೇವೆ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌ ತಿಳಿಸಿದ್ದಾರೆ.

ಜಿಲ್ಲಾ ವ್ಯಾಪ್ತಿಯಲ್ಲಿ ನಡೆಯುವ ಅನಧಿಕೃತ ಮರಳು ಗಣಿಗಾರಿಕೆ, ಸಾಗಾಟ ಹಾಗೂ ದಾಸ್ತಾನು ಸಂಬಂಧ ಎನ್‌ಐಸಿ ಇ ಗವರ್ನೆನ್ಸ್‌ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಿಬ್ಬಂದಿಯ ತಾಂತ್ರಿಕ ಸಹಾಯದಿಂದ ಕಂಟ್ರೋಲ್ ರೂಂ ತೆರೆಯಲಾಗಿದ್ದು, ಸಾರ್ವಜನಿಕರು 0820-2950088 ಕರೆಮಾಡಿ ಮಾಹಿತಿ ನೀಡಬಹುದು.

ಅಕ್ರಮ ಮರಳು ಅಕ್ರಮ ತಡೆಗೆ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನೊಳಗೊಂಡ ದಳವನ್ನು ರಚಿಸಿದ್ದು, ಅಕ್ರಮ ಮರಳುಗಾರಿಕೆ ತಡೆಗೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ADVERTISEMENT

ಕುಂದಾಪುರ, ಬ್ರಹ್ಮಾವರ ಮತ್ತು ಉಡುಪಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿನ ವಾರಾಹಿ, ಸೌಪರ್ಣಿಕಾ, ಸ್ವರ್ಣಾ ಮತ್ತು ಸೀತಾ ನದಿ ಪಾತ್ರಗಳಲ್ಲಿ ಮರಳು ದಿಬ್ಬ ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ. ಜಿಲ್ಲಾ ಕರಾವಳಿ ನಿಯಂತ್ರಣ ವಲಯ ಹೊರತುಪಡಿಸಿದ ಪ್ರದೇಶದಲ್ಲಿ ಮರಳು ಗಣಿಗಾರಿಕೆ ತೆಗೆಯಲಾಗುತ್ತಿದ್ದು ಸಾರ್ವಜನಿಕರಿಗೆ, ಅಭಿವೃದ್ಧಿ ಕಾಮಗಾರಿಗಳಿಗೆ ಮರಳು ಪಡೆಯಲು ಅವಕಾಶವಿದ್ದು, ಉಡುಪಿ ಇ ಸ್ಯಾಂಡ್ ಆ್ಯಪ್ ಮೂಲಕ ಸಾರ್ವಜನಿಕರು ಮರಳು ಪಡೆಯಬಹುದು.

ಉಡುಪಿ ಇ ಸ್ಯಾಂಡ್ ಆ್ಯಪ್ ಮೂಲಕ ಸರಳ ಹಾಗೂ ಪಾರದರ್ಶಕವಾಗಿ ಮರಳು ಪೂರೈಕೆ ಮಾಡಲಾಗುತ್ತಿದ್ದು, ಸಾರ್ವಜನಿಕರು ಇದರ ಉಪಯೋಗ ಪಡೆಯಬಹುದು. ಹೆಚ್ಚಿನ ಮಾಹಿತಿಗೆ 6366745888, 6364024555, 6366871888 ಸಂಪರ್ಕಿಸಹುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.