ADVERTISEMENT

ನಮ್ಮ ಪರ್ಯಾಯ ಯಶಸ್ಸಿ‌ಗೆ ಸಹಕರಿಸಿ: ಡಿ. ವೀರೇಂದ್ರ ಹೆಗ್ಗಡೆ

ಶಿರೂರು ಪರ್ಯಾಯದ ಪೂರ್ವಭಾವಿ ಸಮಾಲೋಚನಾ ಸಭೆ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2025, 5:43 IST
Last Updated 8 ನವೆಂಬರ್ 2025, 5:43 IST
ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಕಾರ್ಯಕ್ರಮ ಉದ್ಘಾಟಿಸಿದರು
ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಕಾರ್ಯಕ್ರಮ ಉದ್ಘಾಟಿಸಿದರು   

ಉಡುಪಿ: ಉಡುಪಿಯಲ್ಲಿ ನಡೆಯುವ ಪರ್ಯಾಯ ಮಹೋತ್ಸವವನ್ನು ಇಲ್ಲಿನ ಜನರು ‘ನಮ್ಮ ಪರ್ಯಾಯ’ ಎಂದೇ ಪರಿಗಣಿಸುತ್ತಾರೆ. ಶಿರೂರು ಪರ್ಯಾಯವನ್ನು ಯಶಸ್ವಿಗೊಳಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ಇಲ್ಲಿನ ವಿದ್ಯೋದಯ ಪಿಯು ಕಾಲೇಜಿನಲ್ಲಿ ಶಿರೂರು ಮಠದ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಶಿರೂರು ಪರ್ಯಾಯದ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.

ಪರ್ಯಾಯ ಸಂದರ್ಭದಲ್ಲಿ ಬರುವ ಜನರಿಗೆ ವಸತಿ ವ್ಯವಸ್ಥೆ ಮಾಡಬೇಕಾಗುತ್ತದೆ. ನಮ್ಮ ಆಯುರ್ವೇದ ಕಾಲೇಜಿನ ಉತ್ತಮ ಕೊಠಡಿಗಳನ್ನು ಅದಕ್ಕಾಗಿ ಮೀಸಲಿರಿಸಲಾಗುವುದು ಎಂದರು.

ADVERTISEMENT

ಪ್ರತಿಯೊಬ್ಬರೂ ತಮ್ಮ ಶಕ್ತಿಗನುಸಾರವಾಗಿ ಕ್ಷೇತ್ರಕ್ಕೆ ಸೇವೆ ಮಾಡಬೇಕು. ಪರ್ಯಾಯದ ವೇಳೆ ಶ್ರೀಕ್ಷೇತ್ರ ಧರ್ಮಸ್ಥಳದ ವತಿಯಿಂದ ಅಲಂಕಾರದ ವ್ಯವಸ್ಥೆಯನ್ನೂ ಮಾಡುತ್ತೇವೆ ಎಂದು ಹೇಳಿದರು.

ಶಿರೂರು ಮಠದ ದಿವಾನ ಉದಯ ಕುಮಾರ್ ಸರಳತ್ತಾಯ ಮಾತನಾಡಿ, ಪರ್ಯಾಯದ ಅಂಗವಾಗಿ ಡಿಸೆಂಬರ್‌ 14ರಂದು ಧಾನ್ಯ ಮುಹೂರ್ತ ನಡೆಯಲಿದೆ. ಅನಂತರ ಚಪ್ಪರ ಮುಹೂರ್ತ ನಡೆಯಲಿದ್ದು, ಕೃಷ್ಣ ಭಕ್ತರೆಲ್ಲರೂ ಸಹಕರಿಸಬೇಕು ಎಂದರು.

ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ ಕಾರ್ಯಾಧ್ಯಕ್ಷ ಎಂ.ಬಿ. ಪುರಾಣಿಕ್ ಮಾತನಾಡಿ, ಇಂದು ಸನಾತನ ಧರ್ಮವನ್ನು ಭೇದಿಸುವ ಪ್ರಯತ್ನಗಳು ನಡೆಯುತ್ತಿವೆ. ಪರ್ಯಾಯದಂತಹ ಕಾರ್ಯಕ್ರಮಗಳ ಮೂಲಕ ಹಿಂದೂ ಸಮಾಜವನ್ನು ಒಗ್ಗೂಡಿಸುವ ಕೆಲಸವಾಗಬೇಕು ಎಂದು ತಿಳಿಸಿದರು.

ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ಬಿಜೆಪಿ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ, ಮಾತನಾಡಿದರು. ಶಾಸಕರಾದ ಸುನಿಲ್ ಕುಮಾರ್, ಕಿರಣ್‌ಕುಮಾರ್ ಕೊಡ್ಗಿ, ಗುರುರಾಜ್‌ ಗಂಟಿಹೊಳೆ, ಮಾಜಿ ಶಾಸಕ ರಘುಪತಿ ಭಟ್, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಆನುವಂಶಿಕ ಅರ್ಚಕ ಲಕ್ಷ್ಮಿನಾರಾಯಣ ಅಸ್ರಣ್ಣ, ಧನಂಜಯ ಶೆಟ್ಟಿ, ಹರಿಕೃಷ್ಣ ಪುನರೂರು, ಪ್ರದೀಪ್ ಕುಮಾರ್ ಕಲ್ಕೂರ, ರಮೇಶ್ ವೈದ್ಯ ಭಾಗವಹಿಸಿದ್ದರು.

ಮಟ್ಟಾರು ರತ್ನಾಕರ ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಪ್ರಸಾದ್ ಶೆಟ್ಟಿ ಬೈಕಾಡಿ ಸ್ವಾಗತಿಸಿದರು. ದಾಮೋದರ ಶರ್ಮ ಬಾರ್ಕೂರು ನಿರೂಪಿಸಿದರು.

ಶಿರೂರು ಮಠಾಧೀಶ ವೇದವರ್ಧನತೀರ್ಥ ಸ್ವಾಮೀಜಿ ಅವರ ಪರ್ಯಾಯವು ಇತಿಹಾಸ ಸೃಷ್ಟಿಸಬೇಕು. ಅದಕ್ಕಾಗಿ ಎಲ್ಲರ ಸಹಕಾರ ಅಗತ್ಯ. ಈಗಾಗಲೇ 2 ಲಕ್ಷ ಆಮಂತ್ರಣ ಪತ್ರಿಕೆ ಮುದ್ರಿಸಲಾಗಿದೆ
ಯಶ್‌ಪಾಲ್‌ ಸುವರ್ಣ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.