ಕಾರ್ಕಳ: ‘ಗ್ರಾಮೀಣ ಭಾಗಗಳಲ್ಲಿ ಪರಿಶುದ್ಧ ಗಾಳಿ, ಪರಿಶುದ್ಧ ನೀರು ದೊರೆಯುತ್ತಿದೆ. ಅದನ್ನು ನಾವು ರಕ್ಷಿಸಿಕೊಳ್ಳಬೇಕಾಗಿದೆ. ನಮ್ಮ ಮುಂದಿನ ಪೀಳಿಗೆಗೆ ಪರಿಸರವನ್ನು ರಕ್ಷಿಸಬೇಕಾಗಿದೆ’ ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದರು.
ತಾಲ್ಲೂಕಿನ ಮಿಯಾರು ಗ್ರಾಮದ ಲವಕುಶ ಕಂಬಳ ಕ್ಷೇತ್ರದಲ್ಲಿ ಭಾನುವಾರ ಆಯೋಜಿಸಿದ್ದ ಪರಿಸರ ಉತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ರಸ್ತೆ ಬದಿ ಗಿಡಗಳನ್ನು ನೆಟ್ಟರೆ ಅವುಗಳನ್ನು ಬೆಳೆಸುವ ಜವಾಬ್ದಾರಿ ನಾಗರಿಕರದ್ದು. ಪ್ರಧಾನಿ ಮೋದಿಯವರ ಸ್ವಚ್ಛ ಭಾರತ ಕಲ್ಪನೆ ಸಾಕಾರವಾಗಲು ಪರಿಸರವನ್ನು ಚೆನ್ನಾಗಿಟ್ಟುಕೊಳ್ಳಬೇಕು. ಅರಣ್ಯ ಹಾಳಾದ ಕಡೆಗಳಲ್ಲಿ ಮರಗಳನ್ನು ಬೆಳೆಸಬೇಕು. ಅಕೇಶಿಯಾ, ನೀಲಗಿರಿ ಗಿಡಗಳನ್ನು ನೆಟ್ಟರೆ ಯಾರಿಗೂ ಉಪಯೋಗವಿಲ್ಲ ಮಾತ್ರವಲ್ಲ, ಕಾಡಿನಲ್ಲಿ ಪ್ರಾಣಿಗಳಿಗೂ ಸರಿಯಾದ ಆಹಾರ ಸಿಗದೆ ಪ್ರಾಣಿಗಳು ನಾಡಿಗೆ ಬಂದು ನಾವು ಬೆಳೆದ ಬೆಳೆಗಳನ್ನು ತಿನ್ನತೊಡಗುತ್ತವೆ. ನಮ್ಮ ಬೆಳೆ ರಕ್ಷಣೆಯಾಗಬೇಕಾದರೆ ನಾವು ಗಿಡಗಳನ್ನು ರಕ್ಷಿಸಬೇಕು. ಮರಗಳನ್ನು ಉಳಿಸಬೇಕು’ ಎಂದರು.
ಶಾಸಕ ವಿ.ಸುನೀಲ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕಿನ 34 ಗ್ರಾಮ ಪಂಚಾಯಿತಿಗಳಿಗೆ ಸಾಂಕೇತಿಕವಾಗಿ ಗಿಡಗಳನ್ನು ವಿತರಿಸಲಾಯಿತು. ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಅರಣ್ಯ ಪರಿಸರ ಇಲಾಖೆ ಪ್ರಧಾನ ಕಾರ್ಯದರ್ಶಿ ಸಂಜಯ್ ಬಿಜೂರು, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಿಲ್ಲೋ ಟ್ಯಾಗೋ, ಮಂಗಳೂರು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ಎಸ್ ನೆತಲ್ಕರ್, ಕುಂದಾಪುರ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶಿಶ್ ರೆಡ್ಡಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಪ್ರಶಾಂತ್ ಪಿಕೆಎಂ, ಹಿರಿಯ ವಕೀಲ ಎಂ.ಕೆ. ವಿಜಯಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಗಿರೀಶ ಅಮೀನ್, ಎಪಿಎಂಸಿ ಅಧ್ಯಕ್ಷ ರತ್ನಾಕರ ಅಮೀನ್, ಮಹಾವೀರ ಹೆಗ್ಡೆ, ಸುಮಿತ್ ಶೆಟ್ಟಿ, ಉದಯ ಎಸ್.ಕೋಟ್ಯಾನ್ ಇದ್ದರು.
ದಿವ್ಯಾ ಗಿರೀಶ ಅಮೀನ್ ಸ್ವಾಗತಿಸಿದರು. ಕರುಣಾಕರ ಕೋಟ್ಯಾನ್ ನಿರೂಪಿಸಿದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರೇವತಿ ನಾಯ್ಕ್ ವಂದಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.