ಉಡುಪಿ: ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ಪ್ರಕೃತಿ ಪ್ರೇಮ ಹಾಗೂ ದಿಟ್ಟ ನಾಯಕತ್ವದ ಗುಣಗಳು ಮೈಗೂಡಲು ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಕೌಟ್ಸ್ ಗೈಡ್ಸ್ ತತ್ವಗಳನ್ನು ಕಲಿಸಬೇಕು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಹೇಳಿದರು.
ಈಚೆಗೆ ನಗರದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಜಿಲ್ಲಾ ಸಂಸ್ಥೆಯಿಂದ ಜಿಲ್ಲೆಯ ಶೈಕ್ಷಣಿಕ ವಲಯದ ಬಿಇಒ, ಟಿಪಿಇಒ, ಬಿಆರ್ಪಿ ಮತ್ತು ಸಿಆರ್ಪಿಗಳಿಗೆ ನಡೆದ ಮಾಹಿತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಕಷ್ಟದ ಸಮಯದಲ್ಲಿ ಸ್ಪಂದಿಸಿ ಸೇವಾ ಮನೋಭಾವದಿಂದ ಕರ್ತವ್ಯ ಮಾಡುವ ಸದ್ಗುಣಗಳನ್ನು ಹಾಗೂ ಹೃದಯವಂತಿಕೆಯನ್ನು ಸ್ಕೌಟ್ಸ್ ಹಾಗೂ ಗೈಡ್ಸ್ ಸಂಸ್ಥೆಯು ಕಲಿಸುತ್ತದೆ. ಈ ಬಾರಿಯ ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮವಾಗಿದ್ದು, ವಿಶೇಷವಾಗಿ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಅಪ್ರತಿಮ ಸಾಧನೆ ಮಾಡಿರುವುದು ಸಂತಸದ ವಿಚಾರ ಎಂದರು.
ಡಿಡಿಪಿಐ ಗೋವಿಂದ ಮಡಿವಾಳ ಮಾತನಾಡಿ ವಿದ್ಯಾರ್ಥಿಗಳು ಉತ್ತಮ ನಾಯಕತ್ವ ಹಾಗೂ ದೇಶಸೇವಾ ಮನೋಭಾವ ಬೆಳೆಸಿಕೊಂಡು ಸತ್ಪ್ರಜೆಯಾಗಿ ರೂಪುಗೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ರಾಜ್ಯ ಸಂಘಟನಾ ಆಯುಕ್ತ ಪ್ರಭಾಕರ ಭಟ್, ಜಿಲ್ಲಾ ಗೈಡ್ ಆಯುಕ್ತೆ ಜ್ಯೋತಿ ಜೆ.ಪೈ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಅಶೋಕ್ ಕಾಮತ್, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಮುಂದಿನಮನಿ, ಉಡುಪಿ ದೈಹಿಕ ಶಿಕ್ಷಣ ಅಧಿಕಾರಿ ರಘುನಾಥ್, ಉಡುಪಿ ಜಿಲ್ಲಾ ಸಂಸ್ಥೆ ಕಾರ್ಯದರ್ಶಿ ಕೊಗ್ಗ ಗಾಣಿಗ, ಸಾವಿತ್ರಿ ಮನೋಹರ್, ಜಿಲ್ಲಾ ಸಂಸ್ಥೆ ಉಪಾಧ್ಯಕ್ಷ ಎಡ್ವಿನ್ ಆಳ್ವ, ಸಮಾಜ ಕಲ್ಯಾಣ ಇಲಾಖೆಯ ಪದಾಧಿಕಾರಿಗಳು ಇದ್ದರು.
ಜಿಲ್ಲಾ ಸ್ಕೌಟ್ ಆಯುಕ್ತ ಡಾ.ವಿಜಯೇಂದ್ರ ವಸಂತರಾವ್ ಸ್ವಾಗತಿಸಿದರು, ಜಿಲ್ಲಾ ಕಾರ್ಯದರ್ಶಿ ವಂದಿಸಿದರು. ಕಾರ್ಕಳ ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಗಣೇಶ್ ಜಾಲ್ಸೂರು ಕಾರ್ಯಕ್ರಮ ನಿರೂಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.