ಉಡುಪಿ: ಜಿಲ್ಲೆಯಾದ್ಯಂತ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾರ್ಯ ನಿರ್ವಹಿಸುತ್ತಿರುವ ಕಚೇರಿಗಳಿಗೆ ಮತ್ತು ಮುಖಂಡರ ಮನೆಗಳ ಮೇಲೆ ದಾಳಿ ನಡೆಸಿರುವ ಪೋಲೀಸರು ಮಾಹಿತಿ ನೀಡದೆ ಮಹಜರು ನಡೆಸಿ ಬೀಗಮುದ್ರೆ ಹಾಕಿರುವುದು ಖಂಡನೀಯ ಎಂದು ಎಸ್ಡಿಪಿಐ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎನ್.ಶಾಹಿದ್ ಅಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಸ್ಡಿಪಿಐ ಪಕ್ಷ ಚುನಾವಣಾ ಆಯೋಗದಲ್ಲಿ ನೋಂದಣಿಯಾಗಿದ್ದು ದೇಶದಾದ್ಯಂತ ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. ಹಲವು ರಾಜ್ಯಗಳಲ್ಲಿ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ಪಕ್ಷದಿಂದ ಹಲವರು ಆಯ್ಕೆಯಾಗಿದ್ದಾರೆ.
ಉಡುಪಿ ಜಿಲ್ಲೆಯಲ್ಲೂ 25ಕ್ಕೂ ಹೆಚ್ಚು ಜನ ಪ್ರತಿನಿಧಿಗಳು ಎಸ್ಡಿಪಿಐ ಪಕ್ಷದಿಂದ ಆಯ್ಕೆಯಾಗಿದ್ದಾರೆ. ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆ ಮೇಲೆ ನಿಷೇಧ ಹೇರಿದೆಯೇ ಹೊರತು ಎಸ್ಡಿಪಿಐ ಮೇಲೆ ಅಲ್ಲ. ಈ ಮಾಹಿತಿ ಇದ್ದರೂ ಹಲವು ಕಡೆಗಳಲ್ಲಿ ಅಧಿಕಾರಿಗಳು ಎಸ್ಡಿಪಿಐ ಕಚೇರಿ ಮತ್ತು ಸೇವಾಕೇಂದ್ರಗಳಿಗೆ ಬೀಗಮುದ್ರೆ ಹಾಕಿರುವುದು ಸರಿಯಲ್ಲ. ಈ ಕ್ರಮದ ವಿರುದ್ಧ ಪಕ್ಷವು ಕಾನೂನು ಹೋರಾಟ ನಡೆಸಲಿದೆ ಎಂದು ತಿಳಿಸಿದ್ದಾರೆ.
ಘಟನೆ ಸಂಬಂಧ ಜಿಲ್ಲೆಯ ಚುನಾವಣಾಧಿಕಾರಿ ಸ್ಪಷ್ಟೀಕರಣ ನೀಡಬೇಕು. ಬೀಗ ಜಡಿದ ಪಕ್ಷದ ಕಚೇರಿ ಮತ್ತು ಸೇವಾ ಕೇಂದ್ರಗಳನ್ನು ತೆರವು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.