ADVERTISEMENT

ಮನೆಗೇ ಪೌಷ್ಟಿಕ ಆಹಾರ ಪೂರೈಕೆ ಚಿಂತನೆ: ಸಚಿವೆ ಶಶಿಕಲಾ ಜೊಲ್ಲೆ

​ಪ್ರಜಾವಾಣಿ ವಾರ್ತೆ
Published 9 ಜನವರಿ 2020, 12:26 IST
Last Updated 9 ಜನವರಿ 2020, 12:26 IST
ಶಶಿಕಲಾ ಜೊಲ್ಲೆ, ಸಚಿವೆ
ಶಶಿಕಲಾ ಜೊಲ್ಲೆ, ಸಚಿವೆ   

ಉಡುಪಿ: ‘ಮಾತೃಪೂರ್ಣ’ ಯೋಜನೆಯಡಿ ಗರ್ಭಿಣಿ, ಬಾಣಂತಿಯರಿಗೆ ಅಂಗನವಾಡಿಯಲ್ಲಿ ಊಟ ಹಾಕುವ ಬದಲು, ಮನೆಗೆ ಪೌಷ್ಟಿಕ ಆಹಾರ ತಲುಪಿಸುವ ಚಿಂತನೆ ನಡೆಯುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಗುರುವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಹಿಂದಿನ ಸರ್ಕಾರ ಜಾರಿಗೊಳಿಸಿದ ‘ಮಾತೃಪೂರ್ಣ’ ಯೋಜನೆ ಅವೈಜ್ಞಾನಿಕವಾಗಿದೆ. ಊಟಕ್ಕಾಗಿ ಗರ್ಭಿಣಿ, ಬಾಣಂತಿಯರು ಅಂಗನವಾಡಿಗೆ ಬರುವುದು ಕಡಿಮೆ. ಹಾಗಾಗಿ, ಪರ್ಯಾಯ ಯೋಜನೆಯ ಬಗ್ಗೆ ಯೋಚಿಸಲಾಗುತ್ತಿದೆ ಎಂದರು.‌

ಹೆಣ್ಣುಮಕ್ಕಳಿಗೆ ಅಗತ್ಯವಾಗಿ ಬೇಕಾಗಿರುವ ಪೌಷ್ಟಿಕಾಂಶ ಯುಕ್ತ ಪೌಡರ್‌ ನೀಡುವ ಬಗ್ಗೆಯೂ ಅಭಿಪ್ರಾಯಗಳು ಕೇಳಿಬಂದಿವೆ. ಮುಖ್ಯಮಂತ್ರಿ ಬಳಿ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಶಶಿಕಲಾ ಜೊಲ್ಲೆ ತಿಳಿಸಿದರು.

ADVERTISEMENT

ಶೂನ್ಯ ಬಡ್ಡಿದರದ ಸಾಲ

ಸ್ವಸಹಾಯ ಸಂಘಗಳಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುವ ಚಿಂತನೆಯಿದ್ದು, ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಲಾಗುವುದು ಎಂದು ಹೇಳಿದರು.

ಪಡಿತರ ಚೀಟಿಯಲ್ಲಿರುವ ಕುಟುಂಬದ ಸದಸ್ಯರು ಬೆರಳಚ್ಚು ನೀಡಲು ಇದ್ದ ಗಡುವನ್ನು ಮಾರ್ಚ್‌ 31ರವರೆಗೆ ವಿಸ್ತರಿಸಲಾಗಿದೆ. ಕೊಡಗು, ಕಾರವಾರ, ಉಡುಪಿಯಲ್ಲಿ ಸರ್ವರ್‌ ಸಮಸ್ಯೆ ಹೆಚ್ಚಾಗಿದ್ದು, ತಾಂತ್ರಿಕ ಸಮಸ್ಯೆ ಬಗೆಹರಿಸುವ ಅಥವಾ ಕೆಲವು ಜಿಲ್ಲೆಗಳಿಗೆ ನಿಯಮ ಸಡಿಲಿಸುವ ಬಗ್ಗೆ ಮುಖ್ಯಮಂತ್ರಿ ಬಳಿ ಚರ್ಚಿಸಲಾಗುವುದು ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.