ADVERTISEMENT

ಮಂಗಳೂರಿನಲ್ಲಿ ರಜತ ಸಂಭ್ರಮ 19ರಂದು

ಎಂ.ಎನ್‌.ರಾಜೇಂದ್ರಕುಮಾರ್ ಎಸ್‌ಸಿಡಿಸಿಸಿ ಅಧ್ಯಕ್ಷರಾಗಿ 25 ವರ್ಷ ಪೂರೈಸಿದ ಹಿನ್ನೆಲೆ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2018, 15:34 IST
Last Updated 6 ಡಿಸೆಂಬರ್ 2018, 15:34 IST
ಸುದ್ದಿಗೋಷ್ಠಿಯಲ್ಲಿ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಮಾತನಾಡಿದರು.
ಸುದ್ದಿಗೋಷ್ಠಿಯಲ್ಲಿ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಮಾತನಾಡಿದರು.   

ಉಡುಪಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರಾಗಿ ಡಾ.ಎಂ.ಎನ್‌.ರಾಜೇಂದ್ರ ಕುಮಾರ್ ಅವರು 25 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಜ.19ರಂದು ಮಂಗಳೂರಿನ ನೆಹರೂ ಮೈದಾನದಲ್ಲಿ ರಜತ ಸಂಭ್ರಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಐಕಳಬಾವ ದೇವಿಪ್ರಸಾದ್ ಶೆಟ್ಟಿ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿದ ಅವರು, ರಜತ ಸಂಭ್ರಮವನ್ನು ಅವಿಸ್ಮರಣೀಯವಾಗಿಸಲು ಸಹಕಾರಿ ಬಂಧುಗಳೆಲ್ಲ ಸೇರಿ ಕಾರ್ಯಕ್ರಮ ಆಯೋಜಿಸಿದ್ದೇವೆ. ಅಂದಿನ ಕಾರ್ಯಕ್ರಮದಲ್ಲಿ ಶಿವಮೊಗ್ಗ, ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಂದ 2 ಲಕ್ಷ ಜನರು ಸೇರುವ ನಿರೀಕ್ಷೆಯಿದೆ. ಉಡುಪಿಯಿಂದ 23 ಸಾವಿರಕ್ಕೂ ಹೆಚ್ಚು ಮಂದಿ ತೆರಳಲಿದ್ದಾರೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮಕ್ಕೂ ಮುನ್ನ ಶೋಭಾಯಾತ್ರೆ ನಡೆಯಲಿದೆ. ಸಮಾರಂಭದ ಅಧ್ಯಕ್ಷತೆ ವಹಿಸಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಮೆರವಣಿಗೆ ಮೂಲಕ ವೇದಿಕೆಗೆ ಕರೆತರಲಾಗುವುದು. ಕಾರ್ಯಕ್ರಮದಲ್ಲಿ ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ್‌ ಸೇರಿದಂತೆ ಹಲವು ಶಾಸಕರು ಭಾಗವಹಿಸಲಿದ್ದಾರೆ ಎಂದರು.

ADVERTISEMENT

ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಸಮನಾಗಿ ಎಸ್‌ಸಿಡಿಸಿಸಿ ಬ್ಯಾಂಕ್‌ ಅನ್ನು ಬೆಳೆಸುವಲ್ಲಿ ರಾಜೇಂದ್ರ ಕುಮಾರ್ ಅವರ ಶ್ರಮ ದೊಡ್ಡದಿದೆ. ಗ್ರಾಮೀಣ ಭಾಗಕ್ಕೆ ಬ್ಯಾಂಕಿಂಗ್ ಕ್ಷೇತ್ರವನ್ನು ಪರಿಚಯಿಸುವಲ್ಲಿ, ವಿನೂತನ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಸದಾ ಮುಂದಿರುತ್ತಿದ್ದರು ಎಂದು ಶ್ಲಾಘಿಸಿದರು.

19 ವರ್ಷಗಳಿಂದ ರಾಜ್ಯದ ಅತ್ಯುತ್ತಮ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಎಂಬ ಹೆಗ್ಗಳಿಕೆ ಹಾಗೂ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ ಪ್ರಶಸ್ತಿ, 17 ವರ್ಷಗಳಿಂದ ನಬಾರ್ಡ್‌ ಪ್ರಶಸ್ತಿ ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ಲಭಿಸಿದೆ ಎಂದರು.

ಬ್ಯಾಂಕ್‌ 105 ಶಾಖೆಗಳನ್ನು ಒಳಗೊಂಡಿದ್ದು ₹3561 ಕೋಟಿ ಠೇವಣಿ ಹಾಗೂ ₹ 2778 ಕೋಟಿ ಸಾಲ ನೀಡಿದೆ. ಒಟ್ಟು ವ್ಯವಹಾರ ₹ 6748 ಕೋಟಿ ಮೀರಿದೆ ಎಂದು ಸಾಧನೆಯ ಅಂಕಿಅಂಶಗಳನ್ನು ನೀಡಿದರು.

ನವೋದಯ ಗ್ರಾಮ ವಿಕಾಸ ಚಾರಿಟಬಲ್ ಟ್ರಸ್ಟ್ ಮೂಲಕ ಗ್ರಾಮಾಂತರ ಭಾಗದ ಮಹಿಳೆಯರ ಸಬಲೀಕರಣ, ಸ್ವಸಹಾಯ ಗುಂಪುಗಳಿಗೆ ಆರ್ಥಿಕ ಬಲತುಂಬುವ ಕೆಲಸ ಮಾಡಲಾಗಿದೆ ಎಂದು ವಿವರಿಸಿದರು.

ಸಹಕಾರಿ ಕ್ಷೇತ್ರವನ್ನು ಮತ್ತಷ್ಟು ಬಲಗೊಳಿಸುವ ನಿಟ್ಟಿನಲ್ಲಿ ಸಹಕಾರಿ ಕ್ಷೇತ್ರದಲ್ಲಿ ಮಾಹಿತಿ ತಂತ್ರಜ್ಞಾನ ಉದ್ಯಮ ಆರಂಭಿಸಲಾಗುವುದು. ಈಗಾಗಲೇ ಉದ್ಯಮ ಆರಂಭ ಕುರಿತು ಚರ್ಚೆ ನಡೆದಿದೆ. ಶೀಘ್ರವೇ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.