ADVERTISEMENT

ಸಂಪತ್ತಿಗೆ ಸಮಾಜ, ದೇವರು ಪಾಲುದಾರರು: ವಿಶ್ವೇಶ ತೀರ್ಥ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2018, 11:30 IST
Last Updated 9 ಡಿಸೆಂಬರ್ 2018, 11:30 IST
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಆನಂದ ಸಿ. ಕುಂದರ್ ಅವರನ್ನು ಪೇಜಾವರ ಶ್ರೀಗಳು ಗೌರವಿಸಿದರು.ಪ್ರಜಾವಾಣಿ ಚಿತ್ರ
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಆನಂದ ಸಿ. ಕುಂದರ್ ಅವರನ್ನು ಪೇಜಾವರ ಶ್ರೀಗಳು ಗೌರವಿಸಿದರು.ಪ್ರಜಾವಾಣಿ ಚಿತ್ರ   

ಉಡುಪಿ: ‘ಮನುಷ್ಯ ಗಳಿಸಿದ ಸಂಪತ್ತನ್ನು ತಾನು ಮಾತ್ರ ಭೋಗಿಸದೇ ಸಾಮಾಜಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ವಿನಿಯೋಗಿಸಬೇಕು’ ಎಂದು ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ತಿಳಿಸಿದರು.

ನಗರದ ಯಕ್ಷಗಾನ ಕಲಾರಂಗ ವತಿಯಿಂದ ಭಾನುವಾರ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಮಾಜ ಸೇವಕ ಆನಂದ ಸಿ. ಕುಂದರ್ ಅವರನ್ನು ಗೌರವಿಸಿ ಮಾತನಾಡಿದರು.

ನಮ್ಮ ಸಂಪತ್ತಿಗೆ ನಾವು ಮಾತ್ರ ಭಾಗಿದಾರರಲ್ಲ, ದೇವರು ಮತ್ತು ಸಮಾಜವೂ ಪಾಲುದಾರರು. ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಕ್ಷೇತ್ರಗಳಿಗೆ ಬಹಳಷ್ಟು ಕೊಡುಗೆ ನೀಡುತ್ತಿರುವ ಆನಂದ ಕುಂದರ್, ತಾನು ಗಳಿಸಿದ ಸಂಪತ್ತನ್ನು ಸಮಾಜಕ್ಕೆ ನೀಡುತ್ತಿದ್ದಾರೆ. ಆ ಮೂಲಕ ಸರ್ವರ ಪ್ರೀತಿಗೆ ಪಾತ್ರರಾಗಿದ್ದಾರೆ. ಅವರ ಸಮಾಜಮುಖಿ ಸೇವೆ ಶ್ಲಾಘನೀಯ ಎಂದರು.

ADVERTISEMENT

ಯಕ್ಷಗಾನ ಕಲಾರಂಗ ಅಧ್ಯಕ್ಷ ಕೆ. ಗಣೇಶ ರಾವ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಮುರಳಿ ಕಡೆಕಾರ್ ಸ್ವಾಗತಿಸಿದರು, ಉಪಾಧ್ಯಕ್ಷರಾದ ಎಸ್. ವಿ. ಭಟ್ ಅಭಿನಂದನಾ ಭಾಷಣ ಮಾಡಿ, ಮಟ್ಟಿ ಗಂಗಾಧರ ರಾವ್ ವಂದಿಸಿದರು. ಈ ಸಂದರ್ಭದಲ್ಲಿ ಯಕ್ಷಗಾನ ಮೇಳದ ಕಲಾವಿದರಿಗೆ ನೀಡಲಾಗುವ ಶೇ. 50ರ ರಿಯಾಯಿತಿ ದರದ ಬಸ್ ಪಾಸ್ ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.