ADVERTISEMENT

ಸಮಸ್ಯೆಗಳಿಗೆ ಗಾಂಧಿ ತತ್ವದಲ್ಲಿ ಪರಿಹಾರ: ಉಸ್ತುವಾರಿ ಸಚಿವೆ ಜಯಮಾಲ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2018, 15:23 IST
Last Updated 2 ಅಕ್ಟೋಬರ್ 2018, 15:23 IST
ಕಾರ್ಯಕ್ರಮದಲ್ಲಿ ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥನ್ ಮಾತನಾಡಿದರು.ಪ್ರಜಾವಾಣಿ ಚಿತ್ರ
ಕಾರ್ಯಕ್ರಮದಲ್ಲಿ ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥನ್ ಮಾತನಾಡಿದರು.ಪ್ರಜಾವಾಣಿ ಚಿತ್ರ   

ಉಡುಪಿ: ‘ಇಡೀ ಜಗತ್ತಿಗೆ ಶಾಂತಿ ಸಂದೇಶ ಸಾರಿದ ಮಹಾತ್ಮ ಗಾಂಧೀಜಿ ಅವರನ್ನು ಕೊಂದಂತಹ ವ್ಯಕ್ತಿಯ ಬಗ್ಗೆ ಕೆಲವರು ಪ್ರೀತಿ ತೋರಿಸುತ್ತಿರುವುದು ದುಃಖದ ಸಂಗತಿ. ಇದು ಗಾಂಧೀಜಿಗೆ ಮಾಡುವ ಅವಮಾನ’ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಹೇಳಿದರು.

ಉಡುಪಿ ಕಾಂಗ್ರೆಸ್ ಭವನದಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಆಶ್ರಯದಲ್ಲಿ ಮಂಗಳವಾರ ನಡೆದ ‘ಗಾಂಧೀಜಿ 150’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಭೂಮಿ ಇರುವವರೆಗೂ ಗಾಂಧೀಜಿ ಹೆಸರು ಶಾಶ್ವತವಾಗಿ ಇರಲಿದೆ. ಅವರು ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಡಲು ಸರ್ವಸ್ವವನ್ನೂ ತ್ಯಾಗ ಮಾಡಿದ್ದಾರೆ. ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಗಾಂಧೀಜಿಯವರ ದೂರದೃಷ್ಟಿಯ ನಾಯಕತ್ವ ಕಾರಣ. ಕಾಂಗ್ರೆಸ್ ಪಕ್ಷದ ಬೇರು ಆಳವಾಗಿದ್ದು, ಅದನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಇಂದು ಕಾಂಗ್ರೆಸ್ ಮುಕ್ತ ಮಾಡುತ್ತೇವೆ ಎಂದು ಹೇಳುತ್ತಿರುವವರು ಒಂದು ಕಾಲದಲ್ಲಿ ಕಾಂಗ್ರೆಸ್‌ನಲ್ಲಿಯೇ ಇದ್ದರು’ ಎಂದರು.

ADVERTISEMENT

ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥನ್ ಮಾತನಾಡಿ, ‘ಜಗತ್ತಿನ ಅನೇಕ ಸಮಸ್ಯೆಗಳಿಗೆ ಗಾಂಧಿ ತತ್ವದಲ್ಲಿ ಪರಿಹಾರವಿದೆ. ಆದರೆ ಇಂದು ಭಾರತದಲ್ಲಿ ಜಾತ್ಯತೀತತೆ ಅಪಾಯದಲ್ಲಿದ್ದು, ಸಾಂವಿಧಾನಿಕ ಸಂಸ್ಥೆಗಳೂ ಅಭದ್ರಗೊಳ್ಳುತ್ತಿವೆ. ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಜವಾಬ್ದಾರಿ ಇದೆ’ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸ್ಪರ್ಧಿಸಿದ ಎಲ್ಲಾ ಅಭ್ಯರ್ಥಿಗಳನ್ನು ಅಭಿನಂದಿಸಲಾಯಿತು. ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಗೋಪಾಲ ಭಂಡಾರಿ, ಜಿಲ್ಲಾಧ್ಯಕ್ಷ ಜನಾರ್ದನ ತೋನ್ಸೆ, ಪಂಚಾಯತ್‌ರಾಜ್ ಸಂಘಟನೆಯ ಸಂದೀಪ್, ರಾಕೇಶ್ ಮಲ್ಲಿ, ಅಮೃತ್ ಶೆಣೈ, ಜಿ.ಎ.ಬಾವಾ, ಲಾವಣ್ಯ ಬಲ್ಲಾಳ್, ರೋಶನಿ ಒಲೊವಿರಾ, ವೆರೊನಿಕಾ ಕರ್ನೇಲಿಯೋ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.