ವಿ. ಸುನಿಲ್ ಕುಮಾರ್
ಕಾರ್ಕಳ: ಶಾಸಕ ವಿ. ಸುನಿಲ್ ಕುಮಾರ್ ನೇತೃತ್ವದಲ್ಲಿ ಶಾಸಕರಾದ ಯಶ್ಪಾಲ್ ಎ. ಸುವರ್ಣ, ಸುರೇಶ್ ಶೆಟ್ಟಿ ಗುರ್ಮೆ, ಕಿರಣ್ ಕುಮಾರ್ ಕೊಡ್ಗಿ ಸಹಿತ ಶಾಸಕರ ನಿಯೋಗವು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಗಂಭೀರ ಚಿಂತೆ ವ್ಯಕ್ತಪಡಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅವರನ್ನು ಸೋಮವಾರ ಭೇಟಿ ಮಾಡಿತು.
ಕಾನೂನಿಗೆ ಸಂಬಂಧಿಸಿ ಜಿಲ್ಲಾಡಳಿತ ತೆಗೆದುಕೊಳ್ಳುತ್ತಿರುವ ಕ್ರಮದ ಕುರಿತು ನಿಯೋಗ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ ಎನ್ನಲಾಗಿದೆ. ಜಿಲ್ಲೆಯಲ್ಲಿ ರಾತ್ರೋ ರಾತ್ರಿ ಹಿಂದೂ ಮುಖಂಡರ ಮನೆಗಳಿಗೆ ತೆರಳಿ ಬಂಧಿಸುತ್ತಿರುವ ಪೊಲೀಸರ ಏಕಪಕ್ಷೀಯ ಕ್ರಮ ಸರಿಯಲ್ಲ. ಇದು ಸಮಾಜದಲ್ಲಿ ಪ್ರಚೋದನೆ ಉಂಟುಮಾಡುವ ಸಾಧ್ಯತೆ ಇದೆ ಎಂದು ನಿಯೋಗ ಎಸ್ಪಿ ಗಮನಕ್ಕೆ ತಂದಿತು.
ಜಿಲ್ಲೆಯಲ್ಲಿ ಮಟ್ಕಾ ದಂಧೆ, ಜುಗಾರಿ ಇನ್ನಿತರ ಕಾನೂನು ಬಾಹಿರ ಚಟುವಟಿಕೆ ಮಿತಿಮೀರಿ ನಡೆಯುತ್ತಿದ್ದು, ಅವರ ವಿರುದ್ಧ ಅಗತ್ಯ ಕ್ರಮ ಜರಗಿಸುವಂತೆ ಆಗ್ರಹಿಸಿತು. ಪೊಲೀಸರು ಪಕ್ಷಪಾತ ನಡೆ ತಾಳಿದರೆ, ಸಾರ್ವಜನಿಕರ ನಂಬಿಕೆಗೆ ಧಕ್ಕೆಯಾಗುತ್ತದೆ. ಎಲ್ಲಾ ಸಮುದಾಯಗಳಿಗೂ ಸಮಾನ ನ್ಯಾಯ ಒದಗಿಸುವ ಪ್ರಾಮಾಣಿಕತೆ ಅಗತ್ಯದಂತೆ ಕಾರ್ಯನಿರ್ವಹಿಸಲು ನಿಯೋಗ ಸಲಹೆ ನೀಡಿತು. ಒಂದು ಸಮುದಾಯವನ್ನೆ ಗುರಿಯಾಗಿಸಿ ಕ್ರಮಗಳು ಮುಂದುವರಿದರೆ ಉಗ್ರ ಹೋರಾಟ ನಡೆಸುವುದು ಅನಿವಾರ್ಯ ಎಂದು ಎಚ್ಚರಿಕೆ ನೀಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.