ADVERTISEMENT

ಉಡುಪಿ: ಘೋಷಣೆ ಹಲವು, ಕಾರ್ಯರೂಪ ಕೆಲವು

ರಾಜ್ಯ ಬಜೆಟ್‌: ಜಿಲ್ಲೆಯ ಜನರಲ್ಲಿ ನಿರೀಕ್ಷೆಗಳಿವೆ ಬೆಟ್ಟದಷ್ಟು

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2025, 7:09 IST
Last Updated 10 ಫೆಬ್ರುವರಿ 2025, 7:09 IST
<div class="paragraphs"><p>ಬ್ರಹ್ಮಾವರ ಸಕ್ಕರೆ ಕಾರ್ಖಾನೆ</p></div>

ಬ್ರಹ್ಮಾವರ ಸಕ್ಕರೆ ಕಾರ್ಖಾನೆ

   

ಉಡುಪಿ: 2025–26ನೇ ಸಾಲಿನ ರಾಜ್ಯ ಬಜೆಟ್‌ ಕೆಲ ದಿನಗಳಲ್ಲೆ ಮಂಡನೆಯಾಗುವ ಸಾಧ್ಯತೆ ಇದ್ದು, ಜಿಲ್ಲೆಯ ಜನರಲ್ಲಿ ಹಲವು ನಿರೀಕ್ಷೆಗಳು ಗರಿಗೆದರಿವೆ.

ಈ ಹಿಂದಿನ ಬಜೆಟ್‌ಗಳಲ್ಲಿ ಘೋಷಿಸಿರುವ ಹಲವು ಯೋಜನೆಗಳು ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಪ್ರಮುಖ ಬೇಡಿಕೆಗಳಿಗೂ ಮನ್ನಣೆ ಸಿಕ್ಕಿಲ್ಲ ಎಂಬ ಅಳಲಿನ ನಡುವೆಯೂ ಹೊಸ ನಿರೀಕ್ಷೆಗಳು ಜನರಲ್ಲಿ ಚಿಗುರೊಡೆದಿವೆ.

ADVERTISEMENT

ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಬೇಕೆಂಬುದು ಇಲ್ಲಿನ ಜನರ ಬಹುಕಾಲದ ಬೇಡಿಕೆಯಾಗಿದೆ. ವೈದ್ಯಕೀಯ ಕಾಲೇಜಿಗಾಗಿ ಈ ಹಿಂದೆ ನಿವೇಶನವನ್ನು ಕೂಡ ಗುರುತಿಸಲಾಗಿತ್ತಾದರೂ ವೈದ್ಯಕೀಯ ಕಾಲೇಜು ಮಾತ್ರ ಸಾಕಾರವಾಗಿಲ್ಲ.

ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಯಾದರೆ ವೈದ್ಯಕೀಯ ಶಿಕ್ಷಣವು ಬಡ, ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಸುಲಭವಾಗಿ ಕೈಗೆಟುಕಬಹುದು ಎನ್ನುವುದು ಹಲವರ ಅಭಿಪ್ರಾಯವಾಗಿದೆ.

ಉಡುಪಿ ನಗರಕ್ಕೆ ದಿನದ 24 ಗಂಟೆಯೂ ಕುಡಿಯುವ ನೀರು ಒದಗಿಸುವ ಗುರಿಯನ್ನು ಹೊಂದಿರುವ ವಾರಾಹಿ ಕುಡಿಯುವ ನೀರಿನ ಯೋಜನೆಯು ಕುಂಟುತ್ತಾ ಸಾಗಿ ಈಗ ಅಂತಿಮ ಹಂತಕ್ಕೆ ತಲುಪಿದೆ. ವಾರಾಹಿ ಯೋಜನೆಯ ಮೂಲಕ ಕೇವಲ ಕುಡಿಯುವ ನೀರು ಒದಗಿಸಿದರೆ ಸಾಲದು. ವಾರಾಹಿ ಬಲದಂಡೆಯನ್ನು ಬಳಸಿಕೊಂಡು ಕೃಷಿಗೆ ನೀರುಣಿಸುವ ಯೋಜನೆಯನ್ನು ಕೂಡ ಕಾರ್ಯರೂಪಕ್ಕೆ ತರಬೇಕು ಎನ್ನುವ ಕೂಗು ಜನರಿಂದ ಬಹು ಹಿಂದಿನಿಂದಲೂ ಕೇಳಿ ಬರುತ್ತಿದೆ.

ಬ್ರಹ್ಮಾವರ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಬೇಕು ಎಂಬುದು ಕೂಡ ಈ ಭಾಗದ ಜನರ ಪ್ರಮುಖ ಬೇಡಿಕೆಯಾಗಿದೆ. ಈ ಕುರಿತು ಈ ಹಿಂದೆ ಸರ್ಕಾರಗಳು ಆಶ್ವಾಸನೆಗಳನ್ನು ನೀಡಿತ್ತಾದರೂ ಅದು ಜಾರಿಗೆ ಬಂದಿಲ್ಲ ಎನ್ನುತ್ತಾರೆ ಜನರು.

ಈ ಕಾರ್ಖಾನೆಯ 110 ಎಕರೆ ಪ್ರದೇಶದಲ್ಲಿ ಕರಾವಳಿಯ ಮೂರು ಜಿಲ್ಲೆಗಳ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಕ್ಕರೆ ಜೊತೆಗೆ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಉದ್ದಿಮೆಗಳನ್ನು ಸ್ಥಾಪಿಸಬೇಕು ಎಂದು ಜನರು ಒತ್ತಾಯಿಸುತ್ತಿದ್ದಾರೆ.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಸಹಕಾರಿ ಸಕ್ಕರೆ ಕಾರ್ಖಾನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಬೇಕೆಂಬ ಪ್ರಯತ್ನಗಳು ಎರಡು ದಶಕಗಳಿಂದಲೂ ನಡೆಯುತ್ತಿವೆ. ಆದರೆ ಅದು ಸಫಲವಾಗಿಲ್ಲ.

ಜಿಲ್ಲೆಯಲ್ಲಿ ಕೃಷಿ ಕಾಲೇಜು ಪ್ರಾರಂಭಿಸಬೇಕೆಂಬ ಆಗ್ರಹಗಳು ಕೂಡ ರೈತಾಪಿ ವರ್ಗದಿಂದ ಹಲವು ವರ್ಷಗಳಿಂದಲೇ ಕೇಳಿಬರುತ್ತಿವೆ. ಬ್ರಹ್ಮಾವರ ಪ್ರದೇಶದಲ್ಲಿ ಕೃಷಿ ಕಾಲೇಜು ಆರಂಭವಾದರೆ ಹೆಚ್ಚಿನ ಅನುಕೂಲವಾಗಲಿದೆ. ಯುವಜನರನ್ನೂ ಕೃಷಿಯತ್ತ ಆಕರ್ಷಿಸಲು ಸಾಧ್ಯವಿದೆ ಎಂಬ ವಾದಗಳೂ ಕೇಳಿ ಬಂದಿವೆ.

ಜಿಲ್ಲಾಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ನಿವಾರಿಸಿ ಜನರಿಗೆ ಅತ್ಯುತ್ತಮ ವೈದ್ಯಕೀಯ ಸೇವೆ ಒದಗಿಸಬೇಕೆಂಬ ಒತ್ತಾಯಗಳೂ ಕೇಳಿ ಬಂದಿವೆ. ಅತ್ಯಾಧುನಿಕ ಸೌಲಭ್ಯಗಳುಳ್ಳ ನೂತನ ಜಿಲ್ಲಾಸ್ಪತ್ರೆಯ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ.

ಮರವಂತೆ ಮತ್ತು ಗಂಗೊಳ್ಳಿ ಪ್ರದೇಶಗಳಲ್ಲಿ ಸಾಕಷ್ಟು ಮೀನುಗಾರಿಗೆ ಚಟುವಟಿಕೆಗಳು ನಡೆಯುತ್ತಿದ್ದರೂ. ಈ ಎರಡು ಪ್ರದೇಶಗಳಲ್ಲಿ ಸುಸಜ್ಜಿತ ಬಂದರು ಇನ್ನೂ ಸಾಕಾರವಾಗಿಲ್ಲ ಎಂಬುದು ಮೀನುಗಾರರ ಅಳಲಾಗಿದೆ.

ಹಿಂದಿನ ಬಜೆಟ್‌ನಲ್ಲಿ ಸೀ ಆಂಬ್ಯುಲೆನ್ಸ್‌ ಘೋಷಿಸಲಾಗಿತ್ತು. ಆದರೆ ಅದು ಇದುವರೆಗೂ ಜಿಲ್ಲೆಗೆ ತಲುಪಿಲ್ಲ ಎನ್ನುತ್ತಾರೆ ಜನರು.

ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕಾಲು ಸಂಕ ನಿರ್ಮಾಣ ಮಾಡಬೇಕು ಎಂಬ ಬೇಡಿಕೆಯೂ ಇನ್ನೂ ಪೂರ್ಣರೂಪದಲ್ಲಿ ಸಾಕಾರವಾಗಿಲ್ಲ ಎಂದೂ ಹೇಳುತ್ತಾರೆ.

ಮಲ್ಪೆ ಮೀನುಗಾರಿಕಾ ಬಂದರು
‘ಮೂಲ ಸೌಕರ್ಯಕ್ಕೆ ಆದ್ಯತೆ ನೀಡಲಿ’
ರಾಜ್ಯ ಸರ್ಕಾರವು ಈ ಬಾರಿಯ ಬಜೆಟ್‌ನಲ್ಲಿ ಮೂಲ ಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕು. ಸ್ಥಳೀಯಾಡಳಿತ ಸಂಸ್ಥೆಗಳಿಗೂ ಅನುದಾನ ಬಿಡುಗಡೆ ಮಾಡಬೇಕು. ಅನುದಾನ ಕೊರತೆಯಿಂದ ಗ್ರಾಮೀಣ ಪ್ರದೇಶಗಳ ರಸ್ತೆಗಳು ದುರಸ್ತಿ ಕಾಣದೆ ಹದಗೆಟ್ಟಿವೆ. ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ನಡೆಸಬೇಕಾಗಿದೆ ಎಂದು ಎಂಜಿಎಂ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ನಿವೃತ್ತ ಮುಖ್ಯಸ್ಥ ಕೊಕ್ಕಣೆ೯ ಸುರೇಂದ್ರನಾಥ ಶೆಟ್ಟಿ ತಿಳಿಸಿದರು. ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಪ್ರವಾಸೋದ್ಯಮ ಕ್ಷೇತ್ರವು ಬೆಳೆವಣಿಗೆ ಸಾಧಿಸುತ್ತಿದ್ದರೂ ಪ್ರವಾಸಿ ತಾಣಗಳಿಗೆ ಸಮರ್ಪಕ ಮೂಲಸೌಕರ್ಯ ಒದಗಿಸುವ ಕೆಲಸವಾಗಿಲ್ಲ. ಪ್ರವಾಸಿಗರಿಗೆ ಅನುಕೂಲವಾಗುವ ರೀತಿಯಲ್ಲಿ ಪ್ರಮುಖ ಪ್ರವಾಸಿ ತಾಣಗಳಲ್ಲಿ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಅವರು ಹೇಳಿದ್ದಾರೆ.
‘₹100 ಕೋಟಿ ಪ್ಯಾಕೇಜ್‌ ಘೋಷಿಸಲಿ’
ಉಡುಪಿ ಜಿಲ್ಲೆಯ ಮಲೆಕುಡಿಯ ಸಮುದಾಯದವರ ಸಮಗ್ರ ಅಭಿವೃದ್ಧಿಗಾಗಿ ಈಗಾಗಲೇ ₹6.43 ಕೋಟಿಯ ಕ್ರಿಯಾಯೋಜನೆ ತಯಾರಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವುದಾಗಿ ತಿಳಿದುಬಂದಿದೆ. ಇಷ್ಟೇ ಸಾಲದು ಜಿಲ್ಲೆಯ ಮಲೆಕುಡಿಯರ ಸಮಗ್ರ ಅಭಿವೃದ್ಧಿಗಾಗಿ ₹100 ಕೋಟಿ ಅನುದಾನವನ್ನು ಬಜೆಟ್‌ನಲ್ಲಿ ಘೋಷಿಸಬೇಕು ಎಂದು ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಗಂಗಾಧರ ಗೌಡ ಆಗ್ರಹಿಸಿದ್ದಾರೆ. ಮಲೆಕುಡಿಯ ಸಮುದಾಯದವರ ದಶಕಗಳ ಬೇಡಿಕೆಯಾದ ಹೆಬ್ರಿ ತಾಲ್ಲೂಕಿನ ಮತ್ತಾವಿನಲ್ಲಿ ಸೇತುವೆ ನಿರ್ಮಾಣಕ್ಕೂ ಸರ್ಕಾರ ಆದ್ಯತೆ ನೀಡಬೇಕು ಎಂದು ಅವರು ಹೇಳಿದ್ದಾರೆ.
‘ಕೃಷಿ ಕ್ಷೇತ್ರಕ್ಕೆ ಆದ್ಯತೆ ಅಗತ್ಯ’
ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಿಸಬೇಕು. ಕೃಷಿಕರಿಗೆ ಶೂನ್ಯ ಬಡ್ಡಿದರದಲ್ಲಿ ನೀಡುವ ಸಾಲ ಯೋಜನೆಯನ್ನು ಇನ್ನಷ್ಟು ಸರಳಗೊಳಿಸಿ ಅದರ ಪ್ರಯೋಜನ ಎಲ್ಲಾ ಕೃಷಿಕರಿಗೂ ಸಿಗುವಂತಾಗಬೇಕು ಎಂದು ಉಡುಪಿ ಜಿಲ್ಲಾ ಕೃಷಿಕ ಸಂಘದ ಕಾರ್ಯದರ್ಶಿ ರವೀಂದ್ರ ಗುಜ್ಜರಬೆಟ್ಟು ಹೇಳಿದರು. ಹೈನುಗಾರಿಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹಾಲಿನ ಮಾರುಕಟ್ಟೆಯನ್ನು ವಿಸ್ತರಣೆಗೊಳಿಸಲು ಸರ್ಕಾರವು ಬಜೆಟ್‌ನಲ್ಲಿ ಯೋಜನೆ ಘೋಷಿಸಬೇಕು. ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ.
‘ಕೊರಗರ ಶಿಕ್ಷಣ ಆರೋಗ್ಯಕ್ಕೆ ಆದ್ಯತೆ ನೀಡಿ’
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಕೊರಗ ಸಮುದಾಯದವರಿಗೆ ಮಂಜೂರಾಗಿರುವ ಜಾಗದಲ್ಲಿ ಪುನರ್ವಸತಿ ಕಾರ್ಯಕ್ಕಾಗಿ ಸರ್ಕಾರವು ಬಜೆಟ್‌ನಲ್ಲಿ ಅನುದಾನ ಮೀಸಲಿಡಬೇಕು. ಪ್ರತ್ಯೇಕ ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ ಕೇರಳದ ಸಂಯೋಜಕ ಕೆ. ಪುತ್ರನ್‌ ಆಗ್ರಹಿಸಿದ್ದಾರೆ. ಈ ಹಿಂದೆ ಕೊರಗ ಸಮುದಾಯದವರು ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾದರೂ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸುತ್ತಿತ್ತು. ಈ ಯೋಜನೆಗೆ ಬಲ ತುಂಬಲು ಅನುದಾನ ಘೋಷಿಸಬೇಕು. ಕೊರಗ ಸಮುದಾಯದ ಮಕ್ಕಳ ಉನ್ನತ ಶಿಕ್ಷಣಕ್ಕೆ ವಿಶೇಷ ಅನುದಾನ ಮೀಸಲಿರಿಸಿ ಯೋಜನೆಯನ್ನು ಘೋಷಿಸಬೇಕು ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.