ಕುಂದಾಪುರ: ಆಂತರಿಕ ಸಮಸ್ಯೆಯಿಂದ ನಲುಗಿ ಹೋಗಿರುವ ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಗುರಿಯಾಗಿಸಿ ಮಾಡುತ್ತಿರುವ ಹಿಂಸೆ, ಅತ್ಯಾಚಾರ, ಆಸ್ತಿಪಾಸ್ತಿ ಹಾನಿ ಹೇಯ ಕೃತ್ಯ. ಅಲ್ಲಿ ನಡೆಯುತ್ತಿರುವ ನಿರ್ದಿಷ್ಟ ಗುರಿ ಕೇಂದ್ರಿಕೃತ ಹಿಂಸೆ ತಡೆಯಲು ಭಾರತ ಸರ್ಕಾರ ಬಾಂಗ್ಲಾದೇಶದ ಸರ್ಕಾರದ ಮೇಲೆ ಒತ್ತಡ ಹೇರಬೇಕು. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಕೇಂದ್ರ ಸರ್ಕಾರದ ಗಮನ ಸೆಳೆಯಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ಹಿಂದೆ ಪಾಕಿಸ್ತಾನದ ಕಪಿಮುಷ್ಟಿಗೆ ಸಿಲುಕಿ ನಲುಗಿ ಹೋಗಿದ್ದ ಜನರಿಗೆ ಬಾಂಗ್ಲಾ ವಿಮೋಚನೆ ಮಾಡಿ ಪುನರ್ಜನ್ಮ ನೀಡಿದ್ದು ಅಂದಿನ ಭಾರತದ ಪ್ರಧಾನಮಂತ್ರಿ ಇಂದಿರಾ ಗಾಂಧಿ. ಕಾಂಗ್ರೆಸ್ ನಾಯಕಿ ಪ್ರಿಯಾಂಕ ವಾದ್ರಾ ಅವರು ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಕುರಿತು ನೋವು ವ್ಯಕ್ತಪಡಿಸಿ, ಅಲ್ಲಿನ ಅಲ್ಪಸಂಖ್ಯಾತರಿಗೆ ರಕ್ಷಣೆ ನೀಡುವಂತೆ ಸರ್ಕಾರವನ್ನು ಒತ್ತಾಯಿಸಿರುವುದು ಸ್ವಾಗತಾರ್ಹ ಎಂದು ತಿಳಿಸಿದ್ದಾರೆ.
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಆಗುತ್ತಿರುವ ದೌರ್ಜನ್ಯದ ವಿರುದ್ಧ ಜಿಲ್ಲೆಯಲ್ಲಿ ಬಿಜೆಪಿ ಮಾಡುತ್ತಿರುವ ಧರಣಿ ಮತಬ್ಯಾಂಕ್ ರಾಜಕಾರಣದ ಒಂದು ಭಾಗ. ನಮ್ಮ ದೇಶದ ಮಣಿಪುರದಲ್ಲಿ ಆಗುತ್ತಿರುವ ನರಮೇಧವನ್ನು ಖಂಡಿಸಲು ಆಗದ ಇವರು ಬಾಂಗ್ಲಾ ವಿಚಾರದ ಬಗ್ಗೆ ಧ್ವನಿಯೆತ್ತಿರುವುದು ಇವರ ದ್ವಂದ್ವ ನಿಲುವನ್ನು ಪ್ರದರ್ಶಿಸುತ್ತಿದೆ ಎಂದು ವಿಕಾಸ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.