ADVERTISEMENT

ಐಎಲ್‌ಐ, ಸಾರಿ ನಿರ್ವಹಿಸದ ಆಸ್ಪತ್ರೆಗಳ ಮಾನ್ಯತೆ ರದ್ದು: ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2021, 13:16 IST
Last Updated 5 ಫೆಬ್ರುವರಿ 2021, 13:16 IST
ಜಿ. ಜಗದೀಶ್‌
ಜಿ. ಜಗದೀಶ್‌   

ಉಡುಪಿ: ಆಸ್ಪತ್ರೆಗಳಲ್ಲಿ ಕೋವಿಡ್‌ ಪರೀಕ್ಷೆ ಕಡಿಮೆಯಾಗುತ್ತಿದ್ದು ಐಎಲ್‌ಐ ಹಾಗೂ ಸಾರಿ ವರದಿ ಸರಿಯಾಗಿ ನಿರ್ವಹಿಸದಿರುವ, ಹೊರರೋಗಿ ವಿಭಾಗದ ನೋಂದಣಿ ನಿರ್ವಹಿಸದ, ದರಪಟ್ಟಿ ಪ್ರದರ್ಶಿಸದ ಖಾಸಗಿ ಆಸ್ಪತ್ರೆಗಳ ಮಾನ್ಯತೆ ರದ್ದು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಖಾಸಗಿ ವೈದ್ಯಕೀಯ ನೋಂದಣಾ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಅವರು, ಖಾಸಗಿ ಕ್ಲಿನಿಕ್‌ಗಳು ಕೋವಿಡ್‌ಗೆ ಸಂಬಂಧಿಸಿದ ಐಎಲ್‌ಐ ಹಾಗೂ ಸಾರಿ ವರದಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಸೋಂಕಿನ ಲಕ್ಷಣಗಳು ಇರುವವರು ಆಸ್ಪತ್ರೆಗೆ ಬಂದರೆ ಸ್ವಾಬ್ ಪರೀಕ್ಷೆಗೆ ಒಳಪಡಿಸದಿದ್ದರೆ ಅಂತವರ ಕ್ಲಿನಿಕ್ ನೋಂದಣಿ ರದ್ದುಗೊಳಿಸಲಾಗುವುದು ಎಂದರು.

ಕೋವಿಡ್ ಲಸಿಕೆಯನ್ನು ಎಲ್ಲ ಆರೋಗ್ಯ ಕಾರ್ಯಕರ್ತರು ಕಡ್ಡಾಯವಾಗಿ ತೆಗೆದುಕೊಳ್ಳಬೇಕು. ಜಿಲ್ಲೆಯು ಎಲ್ಲ ವಿಚಾರದಲ್ಲಿ ಮುಂಚೂಣಿಯಲ್ಲಿದ್ದು, ಲಸಿಕಾ ಕಾರ್ಯಕ್ರಮದಲ್ಲಿ ಕೂಡ ಹಿಂದೆ ಬೀಳದೆ ಮುಂಚೂಣಿ ಸ್ಥಾನ ಕಾಯ್ದುಕೊಳ್ಳಬೇಕು ಎಂದು ಸಲಹೆ ನೀಡಿದರು.

ADVERTISEMENT

ಸಭೆಯಲ್ಲಿ ಡಿಎಚ್‌ಒ ಡಾ.ಸುಧೀರ್ ಚಂದ್ರ ಸೂಡ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ರಾಮರಾವ್, ತಾಲ್ಲೂಕು ಆರೋಗ್ಯಾಧಿಕಾರಿ ಮತ್ತು ಖಾಸಗಿ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.