ಉಡುಪಿ: ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರ ಪ್ರತಿ ಕ್ವಿಂಟಲ್ ಭತ್ತಕ್ಕೆ ನಿಗಧಿಪಡಿಸಿರುವ ₹ 1780 ದರದಲ್ಲಿ ರೈತರಿಂದ ಭತ್ತ ಖರೀದಿ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ. ಈ ಸಂಬಂಧ ಜಿಲ್ಲೆಯಲ್ಲಿ ಭತ್ತ ಖರೀದಿ ಕೇಂದ್ರ ತೆರೆಯಲು ಅನುಮತಿ ಕೋರಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.
ಸೋಮವರ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ಜಿಲ್ಲೆಯಲ್ಲಿ ಪ್ರಸ್ತುತ ಮುಂಗಾರು ಹಂಗಾಮಿನ ಭತ್ತ ಕಟಾವು ಪ್ರಕ್ರಿಯೆ ಪ್ರಾರಂಭವಾಗಿದ್ದು, ಮಾರುಕಟ್ಟೆಗೆ ಹಂತಹಂತವಾಗಿ ಭತ್ತದ ಆವಕ ಹೆಚ್ಚಾಗುತ್ತಿದೆ. ಸಧ್ಯ ಸರಾಸರಿ ಕ್ವಿಂಟಲ್ಗೆ ₹ 1,650ರ ದರದಲ್ಲಿ ಭತ್ತ ಮಾರಾಟ ನಡೆಯುತ್ತಿದೆ. ಮುಂದೆ, ಕಟಾವು ಬಿರುಸುಗೊಂಡು ಮಾರುಕಟ್ಟೆಗೆ ಆವಕ ಹೆಚ್ಚಾಗಿ, ಭತ್ತದ ದರ ಕುಸಿಯುವ ಸಂಭವವಿದೆ. ಈ ನಿಟ್ಟಿನಲ್ಲಿ ರೈತರ ಹಿತದೃಷ್ಟಿಯಿಂದ ಭತ್ತ ಖರೀದಿ ಕೇಂದ್ರ ತೆರೆಯಲು ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.
ರೈತರು ಭತ್ತವನ್ನು ಸರ್ಕಾರದ ಭತ್ತ ಖರೀದಿ ಕೇಂದ್ರಕ್ಕೆ ಮಾರಾಟ ಮಾಡಬೇಕು. ಜಿಲ್ಲೆಯಲ್ಲಿ ಅಗತ್ಯವಿರುವ ಭತ್ತ ಖರೀದಿ ಕೇಂದ್ರಗಳನ್ನು ಗುರುತಿಸಬೇಕು. ಸರ್ಕಾರಕ್ಕೆ ಅನುಮತಿ ಕೋರಿ ತಕ್ಷಣ ಪತ್ರ ಬರೆಯಬೇಕು ಎಂದು ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಬೆಂಬಲ ಬೆಲೆಯಲ್ಲಿ ಭತ್ತ ಮಾರಾಟ ಮಾಡುವ ರೈತರು, ಬೆಳೆದ ಭತ್ತವನ್ನು ಸೂಕ್ತ ರೀತಿಯಲ್ಲಿ ದಾಸ್ತಾನು ಮಾಡಬೇಕು. ನಿಗಧಿತ ಗುಣಮಟ್ಟ ಕಾಯ್ದುಕೊಂಡು ಭತ್ತ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸಭೆಯಲ್ಲಿ ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕ ರಾಮಚಂದ್ರ ಕೆ.ನಾಯ್ಕ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ, ಸಹಾಯಕ ನಿರ್ದೇಶಕ ಚಂದ್ರಶೇಖರ್ ನಾಯಕ್, ತೋಟಗಾರಿಕಾ ಇಲಾಖೆ ಉಪ ನಿರ್ದೇಶಕಿ ಭುವನೇಶ್ವರಿ, ಸಹಕಾರ ಇಲಾಖೆಯ ಉಪ ನಿಬಂಧಕ ಪ್ರವೀಣ್ ನಾಯಕ್ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.