
ಸಾಲಿಗ್ರಾಮ (ಬ್ರಹ್ಮಾವರ): ಕನ್ನಡ ಶಾಲೆ ಉಳಿಸಿ–ಬೆಳೆಸುವಲ್ಲಿ ನಾವೆಲ್ಲ ಶ್ರಮಿಸಬೇಕು. ಈ ನಿಟ್ಟಿನಲ್ಲಿ ಶಿಕ್ಷಕರ ಹಾಗೂ ಪೋಷಕರ ಸಹಕಾರ ಅಗತ್ಯ ಎಂದು ಕಾರ್ಕಡ ಗೆಳೆಯರ ಬಳಗದ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ ಹೇಳಿದರು.
ಸಾಲಿಗ್ರಾಮದ ಕಾರ್ಕಡ ಹೊಸ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಕ್ಕಳ ಹಬ್ಬ ಚಿತ್ತಾರ–2026 ಕಾರ್ಯಕ್ರಮದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸರ್ಕಾರಿ ಶಾಲೆಗಳ ಉಳಿವಿಗೆ ಸರ್ಕಾರ ಹೊಸ ಯೋಜನೆಗಳನ್ನು ರೂಪಿಸಬೇಕು. ಕನ್ನಡ ಭಾಷೆಯೊಂದಿಗೆ ಕನ್ನಡ ಮಾಧ್ಯಮ ಶಾಲೆಗಳನ್ನು ದಾನಿಗಳ, ಹಿರಿಯ ವಿದ್ಯಾರ್ಥಿಗಳ ಸಹಕಾರದಿಂದ ಉಳಿಸಲು ಶ್ರಮಿಸಬೇಕು ಎಂದರು.
ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಜೇಯ್ ಭಂಡಾರ್ಕಾರ್ ಧ್ವಜಾರೋಹಣ ಮಾಡಿದರು. ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬ್ರಹ್ಮಾವರ ಕ್ಷೇತ್ರ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ ಬಹುಮಾನ ವಿತರಿಸಿದರು.
ಪಟ್ಟಣ ಪಂಚಾಯಿತಿಯ ಹಿರಿಯ ಲೆಕ್ಕಾಧಿಕಾರಿ ಚಂದ್ರಶೇಖರ ಸೋಮಯಾಜಿ, ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಕೆ.ವಿಶ್ವೇಶ್ವರ ಹೊಳ್ಳ, ಸಂಚಾಲಕ ಎನ್ ಪ್ರಭಾಕರ ಕಾಮತ್, ಎಸ್.ಡಿ.ಎಂ.ಸಿ ಅಧ್ಯಕ್ಷ ಕೆ.ಗುರುರಾಜ ಉಪಾಧ್ಯ, ಶಾಲಾ ವಿದ್ಯಾರ್ಥಿ ನಾಯಕ ಅಭಯ್ ಕೆ., ಶಿಕ್ಷಕಿ ಸ್ವರ್ಣ ಇದ್ದರು.
ಯುವ ಉದ್ಯಮಿ ಕೆ.ಅನಂತ ಕುಮಾರ್ ಕಾರ್ಕಡ ಸ್ವಸ್ತಿವಾಚನಗೈದರು. ಶಾಲಾ ಮುಖ್ಯ ಶಿಕ್ಷಕ ಬಿ.ಎನ್ ಸತ್ಯನಾರಾಯಣ ಸ್ವಾಗತಿಸಿದರು. ಸಹ ಶಿಕ್ಷಕ ಸುಧೀರ ಕಾಮತ್ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.