
ಉಡುಪಿ: ಜಿಲ್ಲೆಯ ಕಡಲ ತೀರಗಳು ಸೇರಿದಂತೆ ಪ್ರವಾಸಿ ತಾಣಗಳ ಸೌಂದರ್ಯ ಸವಿಯಲು ಬರುವ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವುದರೊಂದಿಗೆ ಯಾವುದೇ ಪ್ರಾಣಾಪಾಯ ಸಂಭವಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ತಿಳಿಸಿದರು.
ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಗೆ ಬರುವ ಪ್ರವಾಸಿಗರು ಕಡಲಲ್ಲಿ ವಿಹರಿಸಿ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿ ಬೋಟ್ಗಳ ಮೊರೆ ಹೋಗುತ್ತಾರೆ. ಆದ್ದರಿಂದ ಜಿಲ್ಲೆಯ ಎಲ್ಲಾ ಪ್ರವಾಸಿ ಬೋಟ್ಗಳು ಬಂದರು, ಪೊಲೀಸ್, ಕರಾವಳಿ ಕಾವಲು ಪಡೆ, ಸ್ಥಳೀಯ ಪ್ರಾಧಿಕಾರ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಅನುಮತಿ ಪಡೆದೇ ಕಡಲಿಗೆ ಇಳಿಯಬೇಕು ಎಂದರು.
ಜಿಲ್ಲೆಯಲ್ಲಿರುವ ಎಲ್ಲಾ ಪ್ರವಾಸಿ ಬೋಟ್ಗಳು ಅಗತ್ಯ ದಾಖಲಾತಿಗಳನ್ನು ಸಲ್ಲಿಸಿ, 45 ದಿನಗಳ ಒಳಗಾಗಿ ಕಡ್ಡಾಯವಾಗಿ ಪ್ರವಾಸೋದ್ಯಮ ಇಲಾಖೆಯಿಂದ ನೋಂದಣಿ ಮಾಡಿಕೊಂಡು ಅನುಮತಿ ಪಡೆದುಕೊಳ್ಳಬೇಕು. ಅನುಮತಿ ಪಡೆಯದೇ ಇರುವ ಪ್ರವಾಸಿ ಬೋಟ್ಗಳ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ. ಅನುಮತಿ ಪಡೆದ ಪ್ರವಾಸಿ ಬೋಟ್ಗಳು ಪ್ರತಿ ವರ್ಷ ತಮ್ಮ ಪರವಾನಗಿಯನ್ನು ನವೀಕರಿಸಿಕೊಳ್ಳಬೇಕು ಎಂದರು.
ಲೈಫ್ ಜಾಕೆಟ್ ಬಳಸುವ ಕುರಿತು ಕರಪತ್ರಗಳನ್ನು ಸಮುದ್ರ ತೀರ ಸೇರಿದಂತೆ ಪ್ರವಾಸಿಗರು ಹೆಚ್ಚಾಗಿ ಸೇರುವಲ್ಲಿ ಪ್ರದರ್ಶಿಸಬೇಕು. ಪ್ರವಾಸಿ ಬೋಟ್ಗಳಲ್ಲಿ ಎಲ್ಲರೂ ಲೈಫ್ ಜಾಕೆಟ್ ಧರಿಸಿದ್ದಲ್ಲಿ ಮಾತ್ರ ಬೋಟ್ ಮುಂದೆ ಸಾಗಲಿದೆ ಎಂಬ ಪ್ರೀ ರೆಕಾರ್ಡೆಡ್ ಆಡಿಯೋವನ್ನು ಪ್ರಸಾರಮಾಡಬೇಕು ಎಂದರು.
ಜಿಲ್ಲೆಯ ಪ್ರವಾಸಿ ಬೋಟ್ಗಳ ಮಾಲೀಕರುಗಳು ಹಾಗೂ ಅದನ್ನು ಚಲಾಯಿಸುವವರಿಗೆ ಕಾರ್ಯಾಗಾರ ಆಯೋಜಿಸಿ, ಸುರಕ್ಷತಾ ವಿಧಾನ ಅನುಸರಿಸುವ ಬಗ್ಗೆ, ವಿಮೆ ಸೌಲಭ್ಯ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ನೀಡಬೇಕು. ಜೀವ ರಕ್ಷಕ ಸಿಬ್ಬಂದಿ ಸಹ ಜೀವ ರಕ್ಷಣಾ ವಿಧಾನಗಳ ಬಗ್ಗೆ ಮಾಹಿತಿ ಹೊಂದಿರುವಂತೆ ನೋಡಿಕೊಳ್ಳಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ವಿಂಧ್ಯಾ ಎನ್.ಎಂ. ಉಪಸ್ಥಿತರಿದ್ದರು.
ಪ್ರವಾಸಿ ಬೋಟ್ಗಳಲ್ಲಿ ಪ್ರವಾಸಿಗರ ಹಿತದೃಷ್ಟಿಯಿಂದ ಲೈಫ್ ಜಾಕೆಟ್ ಧರಿಸುವುದನ್ನು ಗಂಭೀರವಾಗಿ ಪರಿಗಣಿಸಬೇಕು. ಪ್ರತಿಯೊಬ್ಬ ಪ್ರವಾಸಿಗರು ಕಡಲಿಗೆ ಇಳಿಯುವ ಮುನ್ನ ಲೈಫ್ ಜಾಕೆಟ್ ಧರಿಸುವಂತೆ ನೋಡಿಕೊಳ್ಳಬೇಕು–ಸ್ವರೂಪಾ ಟಿ.ಕೆ., ಜಿಲ್ಲಾಧಿಕಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.