ADVERTISEMENT

ಉಡುಪಿ: ಇಂದಿನಿಂದ ಅಂಗನವಾಡಿಗಳಲ್ಲಿ ಚಿಣ್ಣರ ಕಲರವ

1,191 ಕೇಂದ್ರಗಳ ಸ್ಯಾನಿಟೈಸ್‌: ಸಿಹಿಯೊಂದಿಗೆ ಮಕ್ಕಳಿಗೆ ಸ್ವಾಗತ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2021, 19:30 IST
Last Updated 7 ನವೆಂಬರ್ 2021, 19:30 IST
ಅಂಗನವಾಡಿ ಕೇಂಧ್ರ
ಅಂಗನವಾಡಿ ಕೇಂಧ್ರ   

ಉಡುಪಿ: ಕೋವಿಡ್ ಕಾರಣದಿಂದ ಒಂದೂವರೆ ವರ್ಷ ಮುಚ್ಚಿದ್ದ ಅಂಗನವಾಡಿಗಳು ನ.8ರಿಂದ ತೆರೆಯುತ್ತಿದ್ದು, ಮತ್ತೆ ಪುಟ್ಟ ಮಕ್ಕಳ ನಗುವಿನ ಕಲರವ ಕೇಳಿ ಬರಲಿದೆ. ಅಂಗನವಾಡಿಗಳ ಆರಂಭಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ.

ಜಿಲ್ಲೆಯ ಉಡುಪಿ, ಬ್ರಹ್ಮಾವರ, ಕುಂದಾಪುರ ಮತ್ತು ಕಾರ್ಕಳದ 4 ಶಿಶು ಅಭಿವೃದ್ದಿ ಯೋಜನಾಧಿಕಾರಿ ವ್ಯಾಪ್ತಿಯ 1,191 ಅಂಗನವಾಡಿಗಳನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ. ಕೇಂದ್ರದಲ್ಲಿ ಮಕ್ಕಳು ಕುಳಿತುಕೊಳ್ಳುವ ಡೆಸ್ಕ್, ಕುರ್ಚಿ, ಆಟಿಕೆ ಸಾಮಾನುಗಳನ್ನು ಸಂಪೂರ್ಣವಾಗಿ ಶುಚಿಗೊಳಿಸಲಾಗಿದ್ದು, ಪೌಷ್ಟಿಕ ಆಹಾರ ತಯಾರಿಸುವ ಪಾತ್ರೆ, ಲೋಟ, ಕುಕ್ಕರ್‌ಗಳನ್ನು ಸ್ವಚ್ಛಗೊಳಿಸಲಾಗಿದೆ.

ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರು 2 ಡೋಸ್ ಕೋವಿಡ್ ಲಸಿಕೆ ಪಡೆದಿದ್ದು, ಎರಡೂ ಲಸಿಕೆ ಪಡೆದಿರುವ ಕುರಿತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪರಿಶೀಲಿಸಲಿದ್ದಾರೆ. 72 ಗಂಟೆಗಳ ಮುಂಚೆ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ADVERTISEMENT

ಅಂಗನವಾಡಿಯಲ್ಲಿ 1 ಮೀಟರ್‌ ಅಂತರದಲ್ಲಿ ಮಕ್ಕಳು ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಮಕ್ಕಳ ಸಂಖ್ಯೆ ಹೆಚ್ಚಿದ್ದರೆ ಕೇಂದ್ರದಲ್ಲಿ ಸ್ಥಳದ ಕೊರತೆಯಾದರೆ ಪ್ರತಿದಿನ ಎಷ್ಟು ಮಕ್ಕಳು ಬರಬೇಕು ಎಂಬುದನ್ನು ತೀರ್ಮಾನಿಸಲಿದ್ದಾರೆ. ಯಾವ ಮಕ್ಕಳು ಅಂಗನವಾಡಿಗೆ ಬರಬೇಕು ಎಂದು ಪೋಷಕರಿಗೆ ಮಾಹಿತಿ ನೀಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಮೊದಲ ಹಂತದಲ್ಲಿ ಬೆಳಗ್ಗೆ 10 ರಿಂದ 12ರ ವರೆಗೆ ಮಾತ್ರ ಅಂಗನವಾಡಿಯನ್ನು ತೆರೆಯಲು ನಿರ್ಧರಿಸಲಾಗಿದ್ದು, ಸದ್ಯ ಪೂರಕ ಪೌಷ್ಟಿಕ ಆಹಾರ ಹಾಗೂ ಆಹಾರ ಪದಾರ್ಥಗಳನ್ನು ಮನೆಗಳಿಗೆ ತಲುಪಿಸಲಾಗುವುದು. 15 ದಿನಗಳ ನಂತರ ಪರಿಸ್ಥಿತಿ ಅವಲೋಕಿಸಿ ಪೌಷ್ಟಿಕ ಆಹಾರವನ್ನು ಕೇಂದ್ರದಲ್ಲಿಯೇ ನೀಡಲಾಗುವುದು. ಆಹಾರ ತಯಾರಿಸುವವರು ಮುಖಗವಸು, ಕ್ಯಾಪ್ ಮತ್ತು ಏಪ್ರನ್ ಧರಿಸುವಂತೆ ಸೂಚನೆ ನೀಡಲಾಗಿದೆ.

ಅಂಗನವಾಡಿ ಆರಂಭದ ದಿನ ಹಬ್ಬದ ವಾತಾವರಣ ಇರುವಂತೆ ವ್ಯವಸ್ಥೆ ಮಾಡಿಕೊಳ್ಳಲು ಸೂಚನೆ ನೀಡಲಾಗಿದ್ದು, ತಳಿರು ತೋರಣಗಳಿಂದ ಸಿಂಗರಿಸುವುದು, ಬಲೂನುಗಳಿಂದ ಅಲಂಕಾರ ಮಾಡುವುದು, ಪ್ರತಿ ಮಗುವನ್ನು ಗುಲಾಬಿ ಹೂ ನೀಡಿ, ಸಿಹಿ ತಿನಿಸು ನೀಡಿ ಸ್ವಾಗತಿಸುವಂತೆ ಸೂಚನೆ ನೀಡಲಾಗಿದೆ ಎಂದು ಪ್ರಭಾರ ಜಿಲ್ಲಾಧಿಕಾರಿ ಡಾ.ವೈ.ನವೀನ್ ಭಟ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.