ADVERTISEMENT

ಉಡುಪಿ: 207 ಜಂಕ್ಷನ್‌ಗಳಲ್ಲಿ ಸಿ.ಸಿ.ಟಿ.ವಿ. ಕ್ಯಾಮೆರಾ– ಹರಿರಾಮ್‌ ಶಂಕರ್‌

ಕಳ್ಳತನಕ್ಕೆ ಕಡಿವಾಣ ಹಾಕಲು ಕ್ರಮ: ಖಾಸಗಿ ಸಹಭಾಗಿತ್ವದಲ್ಲಿ ಅನುಷ್ಠಾನ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2025, 7:26 IST
Last Updated 12 ಆಗಸ್ಟ್ 2025, 7:26 IST
<div class="paragraphs"><p>ಹರಿರಾಮ್‌ ಶಂಕರ್‌</p></div>

ಹರಿರಾಮ್‌ ಶಂಕರ್‌

   

ಉಡುಪಿ: ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕುವ ಸಲುವಾಗಿ ಅಂತರ ಜಿಲ್ಲಾ ಗಡಿ ರಸ್ತೆಗಳು ಸೇರಿದಂತೆ ಜಿಲ್ಲೆಯ 207 ಜಂಕ್ಷನ್‌ಗಳಲ್ಲಿ 601 ಸಿ.ಸಿ.ಟಿ.ವಿ. ಕ್ಯಾಮೆರಾಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಅಳವಡಿಸಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಮ್‌ ಶಂಕರ್‌ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ಸಿ.ಸಿ.ಟಿ.ವಿ. ಕ್ಯಾಮೆರಾ ಅಳವಡಿಸುವ ಯೋಜನೆಗೆ ‘ಸೇನಾ ದೃಷ್ಟಿ’ ಯೋಜನೆ ಎಂಬುದಾಗಿ ಹೆಸರಿಟ್ಟಿದ್ದು, ಪ್ರಮುಖ ಜಂಕ್ಷನ್‌ಗಳಲ್ಲಿ ವಾಹನಗಳ ನಂಬರ್‌ ಪ್ಲೇಟ್‌ ಗುರುತಿಸುವ ಕ್ಯಾಮೆರಾಗಳನ್ನು ಕೂಡ ಅಳವಡಿಸಲಾಗುವುದು ಎಂದು ಹೇಳಿದರು.

ADVERTISEMENT

ಉಡುಪಿ ಚೇಂಬರ್‌ ಆಫ್‌ ಕಾಮರ್ಸ್‌ ಆ್ಯಂಡ್‌ ಇಂಡಸ್ಟ್ರಿ ಸಹಯೋಗದಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಸಿ.ಸಿ.ಟಿ.ವಿ. ಕ್ಯಾಮೆರಾಗಳ ನಿಯಂತ್ರಣ ಕೊಠಡಿಯು ಸ್ಥಳೀಯ ಪೊಲೀಸ್‌ ಠಾಣೆಗಳಲ್ಲಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಯಲ್ಲಿ ಇರಲಿದೆ ಎಂದು ವಿವರಿಸಿದರು.

ಸಿ.ಸಿ.ಟಿ.ವಿ. ಕ್ಯಾಮೆರಾ ಅಳವಡಿಕೆ ಯೋಜನೆಗೆ ಇದೇ 15ರಂದು ಚಾಲನೆ ಸಿಗಲಿದ್ದು, ನವೆಂಬರ್‌ 1ರೊಳಗೆ ಅಳವಡಿಕೆ ಕಾರ್ಯವನ್ನು ಪೂರ್ಣಗೊಳಿಸಲಾಗುವುದು. ಕೋಮು ಸೂಕ್ಷ್ಮ ಪ್ರದೇಶಗಳಲ್ಲೂ ವಾಹನಗಳ ನಂಬರ್‌ ಪ್ಲೇಟ್‌ ಗುರುತಿಸುವ ಕ್ಯಾಮೆರಾಗಳನ್ನು ಅಳವಡಿಸಲಾಗುವುದು ಎಂದರು.

ಉಡುಪಿ ನಗರಸಭೆಯ ವ್ಯಾಪ್ತಿಯಲ್ಲಿ 10 ಕಡೆ ಸಿ.ಸಿ.ಟಿ.ವಿ. ಕ್ಯಾಮೆರಾ ಅಳವಡಿಸಲಾಗುತ್ತಿದ್ದು, ಎಲ್ಲವನ್ನೂ ಉಡುಪಿ ಚೇಂಬರ್‌ ಆಫ್‌ ಕಾಮರ್ಸ್‌ ಆ್ಯಂಡ್‌ ಇಂಡಸ್ಟ್ರಿಯವರೇ ಅಳವಡಿಸಲಿದ್ದಾರೆ ಮತ್ತು 5 ವರ್ಷ ನಿರ್ವಹಣೆ ಕೂಡ ಮಾಡಲಿದ್ದಾರೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಜುಲೈ 11 ರಿಂದ ಮನೆ ಮನೆಗೆ ಪೊಲೀಸ್‌ ಕಾರ್ಯಕ್ರಮವನ್ನು ಆರಂಭಿಸಿದ್ದು, ಈಗಾಗಲೇ 22 ಸಾವಿರ ಮನೆಗಳಿಗೆ ಪೊಲೀಸರು ಭೇಟಿ ನೀಡಿದ್ದಾರೆ. ಇದರಡಿಯಲ್ಲಿ ಜಿಲ್ಲೆಯಲ್ಲಿ ಹೆಚ್ಚು ಕಳ್ಳತನ ಪ್ರಕರಣಗಳು ನಡೆಯುವ ಪ್ರದೇಶಗಳಲ್ಲಿ 50ರಿಂದ 100 ಜನರ ಗುಂಪುಗಳನ್ನು ರಚಿಸಿದ್ದೇವೆ. ಅಇವರು ಅಲ್ಲಿ ನಡೆಯುವ ಸಂಶಯಾಸ್ಪದ ವಿಚಾರಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಿದ್ದಾರೆ. ಅಲ್ಲದೆ ಭದ್ರತೆಗಾಗಿ ಖಾಸಗಿ ಭದ್ರತಾ ಸಿಬ್ಬಂದಿಯನ್ನು ನೇಮಿಸಲಾಗುತ್ತಿದೆ ಎಂದರು.

ಈಗಾಗಲೇ ಸುಬ್ರಹ್ಮಣ್ಯ ನಗರದಲ್ಲಿ ಈ ಕಾರ್ಯಕ್ರಮವನ್ನು ಆರಂಭಿಸಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದೂ ಹೇಳಿದರು.

ಕಲ್ಸಂಕ ಜಂಕ್ಷನ್‌ನಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ಶನಿವಾರ, ಭಾನುವಾರಗಳಂದು ಬ್ಯಾರಿಕೇಡ್‌ ಅಳವಡಿಸುತ್ತಿದ್ದು, ಅದನ್ನು ತೆರವುಗೊಳಿಸುವ ಕುರಿತು ಸಭೆ ನಡೆಸಿ ಚರ್ಚಿಸಲಾಗುವುದು. ಪ್ರಮುಖ ಜಂಕ್ಷನ್‌ಗಳಲ್ಲಿ ಟ್ರಾಫಿಕ್‌ ಸಿಗ್ನಲ್‌ಗಳನ್ನು ಅಳವಡಿಸುವ ಬಗ್ಗೆಯೂ ಚರ್ಚಿಸುತ್ತೇವೆ ಎಂದರು.

ಸುಗಮ ಸಂಚಾರಕ್ಕಾಗಿ ಸ್ಥಳೀಯರ ಅಭಿಪ್ರಾಯ ಪಡೆದು ಬನ್ನಂಜೆಯಲ್ಲಿ ರಾಷ್ಟ್ರೀಯ ಹೆದ್ದಾರಿಯ ರಸ್ತೆ ವಿಭಜಕ ತೆರವುಗೊಳಿಸಲು ಸೂಚಿಸಿದ್ದೆವು. ಲೋಕೋಪಯೋಗಿ ಇಲಾಖೆಯವರು ಸಂಬಂಧಪಟ್ಟ ಇಲಾಖೆಗಳ ಸಭೆಯಲ್ಲಿ ಅನುಮೋದನೆ ಪಡೆಯುವ ಮೊದಲೇ ತೆರವುಗೊಳಿಸಿದ್ದಾರೆ ಎಂದು ಹೆಳಿದರು.

ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಸುಧಾಕರ ನಾಯಕ್‌, ಚೇಂಬರ್‌ ಆಫ್‌ ಕಾಮರ್ಸ್‌ ಆ್ಯಂಡ್‌ ಇಂಡಸ್ಟ್ರಿಯ ಡಾ. ವಿಜಯೇಂದ್ರ ಭಾಗವಹಿಸಿದ್ದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯವರನ್ನು ಭೇಟಿಯಾದಾಗ ಅವರು ಸಿ.ಸಿ.ಟಿ.ವಿ. ಕ್ಯಾಮೆರಾ ಅಳವಡಿಸುವ ವಿಚಾರ ಪ್ರಸ್ತಾಪಿಸಿದರು. ನಾವು ಒಪ್ಪಿಕೊಂಡೆವು . ಅದಕ್ಕೆ ₹2.90 ಕೋಟಿ ವೆಚ್ಚವಾಗಲಿದ್ದು ಅದನ್ನು ನಾವೇ ಭರಿಸುತ್ತೇವೆ

–ಅಮ್ಮುಂಜೆ ಪ್ರಭಾಕರ್ ನಾಯಕ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಅಧ್ಯಕ್ಷ

‘167 ಕಾಲೇಜುಗಳಲ್ಲಿ ಡ್ರಗ್ಸ್ ವಿರೋಧಿ ಸಮಿತಿ’ ಮಾದಕ ವಸ್ತುಗಳ ನಿಯಂತ್ರಣಕ್ಕಾಗಿ ಜಿಲ್ಲೆಯ ಪಿಯು ಹಾಗೂ ಅದಕ್ಕಿಂತ ಮೇಲಿನ 167 ಕಾಲೇಜುಗಳಲ್ಲಿ ಮಾದಕ ದ್ರವ್ಯ ವಿರೋಧಿ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಗಳು ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿವೆ ಎಂದು ಹರಿರಾಮ್‌ ಶಂಕರ್‌ ಹೇಳಿದರು. ಪಿ.ಯು. ಮತ್ತು ಅದಕ್ಕಿಂತ ಮೇಲಿನ ವಿದ್ಯಾರ್ಥಿಗಳ ರಕ್ತ ಪರೀಕ್ಷೆಯನ್ನು ಮೂರು ತಿಂಗಳಿಗೊಮ್ಮೆ ನಡೆಸಲು ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಲಾಗಿದೆ. ರಕ್ತ ಪರೀಕ್ಷೆಯಲ್ಲಿ ಯಾವುದೇ ವಿದ್ಯಾರ್ಥಿ ಡ್ರಗ್ಸ್ ಸೇವನೆ ಮಾಡಿರುವುದು ತಿಳಿದು ಬಂದರೆ ಅವರನ್ನು ಆಪ್ತ ಸಮಾಲೋಚನೆಗೆ ಒಳಪಡಿಸಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.