ಉಡುಪಿ: ನಗರದ ಕಿನ್ನಿಮುಲ್ಕಿ ಸ್ವಾಗತ ಗೋಪುರದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗೂಡ್ಸ್ ಲಾರಿಯಲ್ಲಿ ಸಾಗಿಸುತ್ತಿದ್ದ ಅಂದಾಜು ₹ 50 ಲಕ್ಷ ಮೌಲ್ಯದ 65 ಕೆ.ಜಿ. ಗಾಂಜಾವನ್ನು ಗುರುವಾರ ವಶಪಡಿಸಿಕೊಂಡ ಸೆನ್ ಅಪರಾಧ ಠಾಣೆಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಮೈಸೂರು ಜಿಲ್ಲೆಯ ಹುಣಸೂರಿನ ಗಣೇಶ (38), ಆಂಧ್ರಪ್ರದೇಶದ ಅನಂತಪುರಂನ ಪಿ. ಗೋಪಾಲ ರೆಡ್ಡಿ (43) ಬಂಧಿತ ಆರೋಪಿಗಳು. ಗೂಡ್ಸ್ ಲಾರಿಯನ್ನು ವಶಪಡಿಸಿಕೊಳ್ಳಲಾಗಿದೆ.
‘ಉಡುಪಿ, ಮಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ ಸರಬರಾಜು ಮಾಡುವ ಉದ್ದೇಶದಿಂದ ಆರೋಪಿಗಳು ಗಾಂಜಾ ಸಾಗಿಸಿದ್ದಾರೆ. ಆಂಧ್ರ ಪ್ರದೇಶ–ಒಡಿಶಾ ಗಡಿ ಪ್ರದೇಶದಿಂದ ಗಾಂಜಾ ತಂದಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಇದರಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ಇದ್ದು, ತನಿಖೆ ನಡೆಸುತ್ತಿದ್ದೇವೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಹರ್ಷ ಪ್ರಿಯಂವದಾ ಅವರ ನಿರ್ದೇಶನದ ಮೇರೆಗೆ ಡಿವೈಎಸ್ಪಿ ಡಿ.ಟಿ. ಪ್ರಭು, ಸೆನ್ ಅಪರಾಧ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರಾಮಚಂದ್ರ ನಾಯಕ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.