ADVERTISEMENT

ರಾಜ್ಯ, ಕೇಂದ್ರ ಬಜೆಟ್ ಹೊತ್ತಲ್ಲಿ ಉಡುಪಿ ಜಿಲ್ಲೆಯಲ್ಲಿ ಹಲವು ನಿರೀಕ್ಷೆ

ನವೀನ್ ಕುಮಾರ್ ಜಿ.
Published 3 ಜನವರಿ 2026, 6:28 IST
Last Updated 3 ಜನವರಿ 2026, 6:28 IST
ಉಡುಪಿ ಜಿಲ್ಲಾಸ್ಪತ್ರೆಯ ನೂತನ ಕಟ್ಟಡ
ಉಡುಪಿ ಜಿಲ್ಲಾಸ್ಪತ್ರೆಯ ನೂತನ ಕಟ್ಟಡ   

ಉಡುಪಿ: 2025–26ನೇ ಸಾಲಿನ ಕೇಂದ್ರ ಹಾಗೂ ರಾಜ್ಯ ಬಜೆಟ್‌ಗಳು ಸನಿಹದಲ್ಲಿದ್ದು, ಮತ್ತೆ ಹಲವು ನಿರೀಕ್ಷೆಗಳು ಜಿಲ್ಲೆಯ ಜನರಲ್ಲಿ ಮನೆ ಮಾಡಿದೆ.

ಹಿಂದಿನ ಬಜೆಟ್‌ಗಳಲ್ಲಿ ಘೋಷಣೆಯಾದ ಕೆಲವು ಯೋಜನೆಗಳು ಕಾರ್ಯರೂಪಕ್ಕೆ ಬಂದರೆ ಇನ್ನು ಕೆಲವು ಕಡತದಲ್ಲೇ ಉಳಿದಿವೆ. ಜಿಲ್ಲೆಯ ಜನರ ಹಲವು ವರ್ಷಗಳಿಂದ ಮುಂದಿಡುವ ಹಲವು ಬೇಡಿಕೆಗಳು ಇನ್ನೂ ಈಡೇರಿಲ್ಲ.

ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕೆಂಬುದು ಇಲ್ಲಿನ ಜನರ ಹಲವು ವರ್ಷಗಳ ಪ್ರಮುಖ ಬೇಡಿಕೆಗಳಲ್ಲೊಂದಾಗಿತ್ತು. ಅದಕ್ಕಾಗಿ ಕಳೆದ ವರ್ಷ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನವೂ ನಡೆದಿತ್ತು. ಆದರೆ ಯಾವುದೇ ಪ್ರಯೋಜನವಾಗಿರಲಿಲ್ಲ.

ADVERTISEMENT

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಹೊಸ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವುದಾಗಿ ಕೆಲ ತಿಂಗಳ ಹಿಂದೆ ಮುಖ್ಯಮಂತ್ರಿಗಳು ಘೋಷಿಸಿದ್ದರು. ಈ ಮೂಲಕ ಜಿಲ್ಲೆಯಲ್ಲಿ ಸರ್ಕಾರಿ ಕಾಲೇಜು ಸ್ಥಾಪನೆಯ ಸಾಧ್ಯತೆಗಳು ಕ್ಷೀಣಿಸಿದೆ ಎನ್ನುತ್ತಾರೆ ಜನರು. 

ಸರ್ಕಾರಿ ವೈದ್ಯಕೀಯ ಕಾಲೇಜಿಗಾಗಿ ಈ ಹಿಂದೆ ಜಿಲ್ಲೆಯಲ್ಲಿ ನಿವೇಶನ ಗುರುತಿಸಲಾಗಿದ್ದರೂ ಕಾಲೇಜು ಮಾತ್ರ ಕಾರ್ಯರೂಪಕ್ಕೆ ಬಂದಿರಲಿಲ್ಲ. ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾದರೆ ಬಡ, ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಪಡೆಯಲು ಅನುಕೂಲವಾಗಲಿದೆ ಎಂಬುದು ಜನರ ಅಭಿಪ್ರಾಯವಾಗಿದೆ.

ನೀಟ್‌ನಲ್ಲಿ ಉತ್ತಮ ಅಂಕ ಪಡೆಯುವ ಜಿಲ್ಲೆಯ ಬಡ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪಡೆಯಲು ಬೇರೆ ಜಿಲ್ಲೆಗಳಿಗೆ ಹೋಗಬೇಕಾದ ಅನಿವಾರ್ಯತೆ ಇದೆ. ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾದರೆ, ಜಿಲ್ಲೆಯ ಬಡ ಮತ್ತು ಮಧ್ಯಮ ವರ್ಗದವರಿಗೆ ಉತ್ತಮ ವೈದ್ಯಕೀಯ ಸೇವೆ ಕೂಡ ಸಿಗಬಹುದೆಂಬ ನಿರೀಕ್ಷೆಯು ಜನರದ್ದಾಗಿದೆ.

ಕುಂಟುತ್ತಿದೆ ಜಿಲ್ಲಾಸ್ಪತ್ರೆ ಕಾಮಗಾರಿ: ಉಡುಪಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಜಿಲ್ಲಾಸ್ಪತ್ರೆಯ ಕಟ್ಟಡ ಕಾಮಗಾರಿ ಇನ್ನೂ ಕುಂಟುತ್ತಾ ಸಾಗುತ್ತಿರುವುದು ಜನರಲ್ಲಿ ಆಕ್ರೋಶ ಮೂಡಿಸಿದೆ.

ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ಜಿಲ್ಲಾಸ್ಪತ್ರೆಗೆ ಬಜೆಟ್‌ನಲ್ಲಿ ಅಗತ್ಯ ಅನುದಾನ ಮಂಜೂರು ಮಾಡಿ, ಆದಷ್ಟು ಶೀಘ್ರ ಅದರ ಕಾಮಗಾರಿ ಮುಗಿದರೆ ಜಿಲ್ಲೆಯ ಜನತೆಗೆ ಅನುಕೂಲವಾಗಬಹುದು ಎನ್ನುತ್ತಾರೆ ಸಾರ್ವಜನಿಕರು.

ನೂತನ ಜಿಲ್ಲಾಸ್ಪತ್ರೆಯ ಸಿವಿಲ್‌ ಕಾಮಗಾರಿ ಪೂರ್ಣಗೊಂಡಿದ್ದು, ಪಾರ್ಕಿಂಗ್‌ ವ್ಯವಸ್ಥೆ ಸೇರಿದಂತೆ ಇನ್ನೂ ಹಲವು ಕಾಮಗಾರಿಗಳು ಬಾಕಿ ಇವೆ ಎಂದು ಮೂಲಗಳು ತಿಳಿಸಿವೆ.

ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಜಿಲ್ಲೆಯ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಮಂಜೂರು ಮಾಡಬೇಕು ಎಂದೂ ಜನರು ಆಗ್ರಹಿಸಿದ್ದಾರೆ.

‘ಜಿಲ್ಲೆಯಲ್ಲೂ ನಿರ್ಮಾಣವಾಗಲಿ’

‘ಸರ್ಕಾರಿ ವೈದ್ಯಕೀಯ ಕಾಲೇಜು ಬೇಕೆಂದು ಜಿಲ್ಲೆಯ ಜನರು ಹಲವು ವರ್ಷಗಳಿಂದ ಬೇಡಿಕೆ ಮುಂದಿರಿಸಿದ್ದರೂ ಬೇಡಿಕೆಗೆ ಬಲ ತುಂಬುವ ಪ್ರಯತ್ನ ಜನಪ್ರತಿನಿಧಿಗಳಿಂದ ನಡೆಯಲಿಲ್ಲ. ಇದರಿಂದ ಇನ್ನೂ ಅದು ಕಾರ್ಯರೂಪಕ್ಕೆ ಬಂದಿಲ್ಲ. ಪುತ್ತೂರಿನಲ್ಲಿ ನಿರ್ಮಿಸುವುದಾಗಿ ಘೋಷಿಸಿದ್ದರೂ ಜಿಲ್ಲೆಯಲ್ಲೂ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಿಸಬೇಕು. ಅದರಿಂದ ಇಲ್ಲಿನ ಬಡ ವಿದ್ಯಾರ್ಥಿಗಳಿಗೆ ಜನರಿಗೆ ಅನುಕೂಲವಾಗಲಿದೆ ’ ಎಂದು ಎಂಜಿಎಂ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ನಿವೃತ್ತ ಮುಖ್ಯಸ್ಥ ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.