ಉಡುಪಿ: ಬೆಂಗಳೂರಿನಲ್ಲಿ 18 ಟಿಎಂಸಿ ಅಡಿಯಷ್ಟು ನೀರು ಚರಂಡಿಯ ಮೂಲಕ ವ್ಯರ್ಥವಾಗಿ ಹರಿದು ಹೋಗುತ್ತಿದ್ದು, ಇದನ್ನು ಸದ್ಬಳಕೆ ಮಾಡಿಕೊಂಡು ಕೈಗಾರಿಕೆಗಳಿಗೆ ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಣ್ಣ ನೀರಾವರಿ ಇಲಾಖೆ ಸಚಿವ ಮಾಧುಸ್ವಾಮಿ ಹೇಳಿದರು.
ಬೈಂದೂರಿನಲ್ಲಿ ಮಂಗಳವಾರ ಮಾತನಾಡಿದ ಅವರು, ‘ಬೆಂಗಳೂರಿನಲ್ಲಿ ವ್ಯರ್ಥವಾಗಿ ವೃಷಭಾವತಿ ನದಿ ಸೇರುತ್ತಿದ್ದ ಚರಂಡಿ ನೀರನ್ನು ಶುದ್ಧೀಕರಿಸಿ ನೆಲಮಂಗಲ, ದೇವನಹಳ್ಳಿ, ದೊಡ್ಡಬಳ್ಳಾಪುರ, ತುಮಕೂರಿಗೆ 300 ಎಂಎಲ್ಡಿ ನೀರು ಪೂರೈಸುವ ಆಲೋಚನೆ ಇದೆ. ಇದರಿಂದ ಈ ಭಾಗದ ಕೈಗಾರಿಕೆಗಳಿಗೆ ಹೆಚ್ಚು ಅನುಕೂಲವಾಗಲಿದೆ’ ಎಂದರು.
3 ಟಿಎಂಸಿ ಅಡಿಯಷ್ಟು ಚರಂಡಿ ನೀರು ತಮಿಳುನಾಡಿಗೆ ಹರಿದು ಹೋಗುತ್ತಿದ್ದು, ಇದನ್ನು ಶುದ್ಧೀಕರಿಸಿದರೆ ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಿಗೆ ನೀರು ಪೂರೈಸಬಹುದು ಎಂದು ಸಚಿವರು ಅಭಿಪ್ರಾಯಪಟ್ಟರು.
ಎತ್ತಿನಹೊಳೆ ಯೋಜನೆಯಲ್ಲಿ ಕರಾವಳಿಯಿಂದ 24 ಟಿಎಂಸಿ ನೀರು ತೆಗೆದುಕೊಂಡು ಹೋಗಲು ₹ 24,000 ಕೋಟಿ ವ್ಯಯ ಮಾಡಲಾಗುತ್ತಿದೆ. ಆದರೆ, ಕರಾವಳಿಯಲ್ಲಿ 1 ₹ ರಿಂದ ₹ 2 ಕೋಟಿ ವ್ಯಯಿಸಿ ಕಿಂಡಿ ಅಣೆಕಟ್ಟೆ ಕಟ್ಟಿದರೆ ಅರ್ಧ ಟಿಎಂಸಿ ಅಡಿಯಷ್ಟು ನೀರು ಸಂಗ್ರಹಿಸಬಹುದು. ಬೃಹತ್ ನೀರಾವರಿ ಯೋಜನೆಗಳಿಗಿಂತಹ ಇಂತಹ ಸಣ್ಣ ನೀರಾವರಿ ಯೋಜನೆಗಳು ಹೆಚ್ಚು ಉಪಯುಕ್ತ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.