
ಉಡುಪಿ: ಬ್ರಹ್ಮಾವರ ತಾಲ್ಲೂಕಿನ ಹನೆಹಳ್ಳಿಯಲ್ಲಿ ದಿನಗೂಲಿ ಕಾರ್ಮಿಕ ಪರಿಶಿಷ್ಟ ಜಾತಿಯ ಕೃಷ್ಣ ಎಂಬುವವರನ್ನು ಗುಂಡಿಟ್ಟು ಹತ್ಯೆ ಮಾಡಿರುವ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಮತಾ ಸೈನಿಕ ದಳದ ಜಿಲ್ಲಾ ಸಮಿತಿಯ ವತಿಯಿಂದ ನಗರದ ಬ್ರಹ್ಮಗಿರಿ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.
ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಲು ಅಜ್ಜರಕಾಡಿನ ಹುತಾತ್ಮ ಸ್ಮಾರಕದ ಬಳಿಯಿಂದ ಮೆರವಣಿಯಲ್ಲಿ ಬಂದ ಪ್ರತಿಭಟನಕಾರರನ್ನು ಪೊಲೀಸರು ಬ್ರಹ್ಮಗಿರಿ ವೃತ್ತದಲ್ಲಿ ತಡೆದರು.
ಸಮತಾ ಸೈನಿಕ ದಳದ ಜಿಲ್ಲಾಧ್ಯಕ್ಷ ವಿಶ್ವನಾಥ ಪೇತ್ರಿ ಮಾತನಾಡಿ, ಹನೆಹಳ್ಳಿಯ ಕೃಷ್ಣ ಅವರ ಹತ್ಯೆ ನಡೆದು ಎರಡು ವರ್ಷಗಳು ಸಂದರೂ ಇದುವರೆಗೆ ಆರೋಪಿಗಳನ್ನು ಪತ್ತೆ ಮಾಡುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ. ಹಾಗಾಗಿ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಬೇಕು ಎಂದು ಒತ್ತಾಯಿಸಿದರು.
ರಾಜ್ಯದಾದ್ಯಂತ ಗ್ರಾಮೀಣ ಭಾಗದಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಹಲವು ಕುಟುಂಬಗಳು ಸುಸಜ್ಜಿತ ಮನೆ ಇಲ್ಲದೆ ಇನ್ನೂ ಟಾರ್ಪಾಲು, ಮುರುಕಲು ಗುಡಿಸಲಿನಲ್ಲಿ ವಾಸಿಸುತ್ತಿದ್ದಾರೆ. ಮನೆ ನಿರ್ಮಾಣ ಮಾಡಿಕೊಳ್ಳಲು ಹಂಚು, ಸಿಮೆಂಟ್, ಕಬ್ಬಿಣ ಮೊದಲಾದವುಗಳ ದರ ಈಚೆಗೆ ಆರು ಪಟ್ಟು ಹೆಚ್ಚಾಗಿದೆ. ಇಂದು ಸಣ್ಣ ಮನೆ ನಿರ್ಮಿಸಬೇಕಾದರೆ ಕನಿಷ್ಠ ₹20 ಲಕ್ಷ ಬೇಕಾಗುತ್ತದೆ. ಆದರೆ ಸರ್ಕಾರ ಇಂದಿಗೂ ₹2 ಲಕ್ಷ ನೀಡುತ್ತಿದೆ. ಇದರಿಂದ ಮನೆ ನಿರ್ಮಾಣ ಸಾಧ್ಯವಾಗುವುದಿಲ್ಲ. ಪರಿಶಿಷ್ಟ ಜಾತಿ, ಪಂಗಡದವರಿಗೆ ಅಂಬೇಡ್ಕರ್ ವಸತಿ ಯೋಜನೆಯಲ್ಲಿ ಮನೆ ನಿರ್ಮಿಸಲು ಕನಿಷ್ಠ ₹ 9 ಲಕ್ಷ ಹಾಗೂ ಬಸವ, ಇಂದಿರಾ ವಸತಿ ಯೋಜನೆಗಳಲ್ಲಿ ಮನೆ ನಿರ್ಮಾಣಕ್ಕೆ ₹5 ಲಕ್ಷ ನೀಡಲು ಪ್ರಸ್ತುತ ಬಜೆಟ್ನಲ್ಲಿ ಘೋಷಿಸಬೇಕು ಎಂದು ಅವರು ಆಗ್ರಹಿಸಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕೊಡವೂರು, ಕಾಂಗ್ರೆಸ್ ಮುಖಂಡರಾದ ಕಿಶನ್ ಹೆಗ್ಡೆ ಕೊಳ್ಕೆಬೈಲ್, ರಮೇಶ್ ಕಾಂಚನ್, ನಾಗೇಶ್ ಉದ್ಯಾವರ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಪತ್ರ ಸ್ವೀಕರಿಸಿದರು.
ಸಮತಾ ಸೈನಿಕ ದಳದ ಪ್ರಮುಖರಾದ ಗಣೇಶ್ ಸಾಲಿಯಾನ್, ವಿಘ್ನೇಶ್, ಸತೀಶ್ ಜನ್ನಾಡಿ, ಜ್ಯೋತಿ ಶಿರಿಯಾರ, ಸತೀಶ್ ಹೈಕಾಡಿ, ಅಶ್ವಿನಿ ಬೆಳ್ವೆ, ಶಾರದಾ ಮುದ್ದೂರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.