ಉಡುಪಿ: ನಗರದ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಶನಿವಾರ ಪ್ರಸಿದ್ಧ ಯಕ್ಷಗಾನ ಸ್ತ್ರೀವೇಷಧಾರಿ ಕೋಳ್ಯೂರು ರಾಮಚಂದ್ರ ರಾವ್ ಅವರಿಗೆ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.
ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ, ಮಾಹೆ, ಎಂಜಿಎಂ ಕಾಲೇಜು, ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಸಮಿತಿಯಿಂದ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಕೋಳ್ಯೂರು ರಾಮಚಂದ್ರ ರಾವ್ ಮುಳಿಯ ಪರಂಪರೆಯ ವಿದ್ವತ್ತು ವೈಯಕ್ತಿಕವಾಗಿ ಹಾಗೂ ಯಕ್ಷಗಾನ ಪಾತ್ರಗಳಲ್ಲಿ ಬಹಳಷ್ಟು ಪ್ರಭಾವ ಬೀರಿದೆ ಎಂದರು.
ಮಾಹೆ ವಿಶ್ವವಿದ್ಯಾಲಯ ಕುಲಸಚಿವ ಡಾ.ನಾರಾಯಣ ಸಭಾಹಿತ್ ಮಾತನಾಡಿ, ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಂತೆ ಮಣಿಪಾಲದ ಮಾಹೆ ವಿವಿಯಲ್ಲಿ ವಿಜ್ಞಾನ, ಕಲೆ, ವಾಣಿಜ್ಯ ವಿಭಾಗಗಳ ನಡುವಿನ ಅಂತರ ಕಡಿಮೆ ಮಾಡಲು ಯಕ್ಷಗಾನ, ಕೋಲ, ಕಂಬಳ ಇತ್ಯಾದಿ ಕಲಾ ಚಟುವಟಿಕೆಗಳ ಸರ್ಟಿಫಿಕೇಟ್ ಕೋರ್ಸ್ಗಳನ್ನು ತೆರೆಯಲಾಗಿದೆ ಎಂದರು.
ಕರಾವಳಿ ಸಂಸ್ಕೃತಿಯ ಪ್ರಚಾರಕ್ಕಾಗಿ ಪ್ರಾದೇಶಿಕ ಸಂಶೋಧನಾ ಕೇಂದ್ರದ ವೆಬ್ ಸೈಟ್ ರೂಪುಗೊಳ್ಳುತ್ತಿದೆ. ಮ್ಯೂಸಿಯಂನ ಪುನಶ್ಚೇತನ ಕಾರ್ಯವೂ ನಡೆಯುತ್ತಿದೆ ಎಂದರು.
ಪ್ರೊ.ಎಂ.ಎಲ್.ಸಾಮಗ, ಎಂಜಿಎಂ ಕಾಲೇಜು ಪ್ರಾಂಶುಪಾಲ ಡಾ.ದೇವಿದಾಸ್ ಎಸ್. ನಾಯ್ಕ್, ಪ್ರಶಸ್ತಿ ಸಮಿತಿ ಸದಸ್ಯ ಡಾ.ನರಸಿಂಹಮೂರ್ತಿ ಮಾತನಾಡಿದರು.
ಸಮಿತಿ ಕಾರ್ಯದರ್ಶಿ ಮನೋರಮಾ ಎಂ. ಭಟ್, ಸದಸ್ಯರಾದ ಮುಳಿಯ ರಾಘವಯ್ಯ ಇದ್ದರು. ಜಯಲಕ್ಷ್ಮಿ ಸ್ವಾಗತಿಸಿದರು. ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ.ಜಗದೀಶ್ ಶೆಟ್ಟಿ ಸ್ವಾಗತಿಸಿದರು. ನವ್ಯಶ್ರೀ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.