ಉಡುಪಿ: ಕೌಶಲ ತರಬೇತಿ ನೀಡುವ ಮೂಲಕ ಮಹಿಳೆಯರು ಎತ್ತರಕ್ಕೆ ಬೆಳೆಯಬೇಕು. ಮಹಿಳೆಯರ ಸಂಘಟನೆಗೆ ಸ್ತ್ರೀ ಶಕ್ತಿ ಯೋಜನೆಗಳು ಸಹಕಾರಿ ಎಂದು ಹಿರಿಯ ನ್ಯಾಯಾಧೀಶೆ ಕಾವೇರಿ ಹೇಳಿದರು.
ನಗರದ ಶಿಶು ಅಭಿವೃದ್ಧಿ ಯೋಜನೆ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ಸ್ತ್ರೀ ಶಕ್ತಿ ಒಕ್ಕೂಟದ ಆಶ್ರಯದಲ್ಲಿ ನಡೆದ ಪರಿಶಿಷ್ಟ ಪಂಗಡಗಳ ಸ್ತ್ರೀ ಶಕ್ತಿ ಗುಂಪುಗಳ ಸದಸ್ಯರಿಗೆ ಕೌಶಲಾಭಿವೃದ್ಧಿ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರು ಕೌಶಲ ತರಬೇತಿ ಪಡೆದು ಡಿಜಿಟಲ್ ಮಾರ್ಕೆಟಿಂಗ್ ಕೌಶಲ ಪಡೆಯಬೇಕು. ಜಾಲತಾಣದಲ್ಲಿ ಡಿಜಿಟಲ್ ಮಾರುಕಟ್ಟೆ ವ್ಯಾಪಕವಾಗಿ ಬೆಳೆಯುತ್ತಿದ್ದು, ಮೊಬೈಲ್ ಮೂಲಕ ಮನೆಯಲ್ಲಿ ಕುಳಿತು ಕೆಲಸ ಮಾಡುವ ಮೂಲಕ ಆದಾಯಗಳಿಸಬಹುದು. ಉತ್ತಮ ಗುಣಮಟ್ಟದ ಉತ್ಪನ್ನಗಳನ್ನು ತಯಾರಿಸುವ ಮೂಲಕ ಉದ್ಯಮವನ್ನು ಬೆಳೆಸಬೇಕು. ಆನ್ಲೈನ್ ವ್ಯವಹಾರ ಮಾಡುವಾಗ ಹೆಚ್ಚು ಜಾಗರೂಕತೆಯಿಂದ ಇರಬೇಕು.
ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ ಮಾತನಾಡಿ, ಮಹಿಳೆ ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಲ್ಲಳು. ಮಹಿಳೆ ನಿಂತ ನೀರಂತಾಗದೆ ಕೌಶಲ ತರಬೇತಿ ಪಡೆದು ಹೊಸ ವಿಷಯಗಳನ್ನು ಕಲಿಯಬೇಕು. ಈ ಮೂಲಕ ಜೀವನದಲ್ಲಿ ಸಾಧನೆ ಮಾಡಬೇಕು. ಪರಿಶಿಷ್ಟ ಜಾತಿ-ಪಂಗಡದ ಮಹಿಳೆಯರು ಹಿಂಜರಿಕೆ ಬಿಟ್ಟು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.
ಉಡುಪಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಾಗಾರದಲ್ಲಿ ತಾಲ್ಲೂಕು ಸ್ತ್ರೀ ಶಕ್ತಿ ಒಕ್ಕೂಟದ ಅಧ್ಯಕ್ಷೆ ಜಯಂತಿ ಹಾಗೂ ಸಂಪನ್ಮೂಲ ವ್ಯಕ್ತಿಗಳು, ಶಿಬಿರಾರ್ಥಿಗಳು ಉಪಸ್ಥಿತರಿದ್ದರು. ಶಿಶು ಅಭಿವೃದ್ಧಿ ಯೋಜನೆ ಮೇಲ್ವಿಚಾರಕಿ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು. ಮೇಲ್ವಿಚಾರಕಿ ಶೈಲಾ ವಂದಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.