ಉಡುಪಿ: ಜಿಲ್ಲೆಯಲ್ಲಿ ಡಿ.22 ಹಾಗೂ 27ರಂದು ನಡೆಯುವ ಗ್ರಾಮ ಪಂಚಾಯಿತಿ ಚುನಾವಣೆಗೆ ಮತದಾರರಲ್ಲಿ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಲು ಕರಾವಳಿಯ ಪ್ರಸಿದ್ಧ ಕಲೆ ಯಕ್ಷಗಾನ ಹಾಗೂ ಜನಪದ ಕಾರ್ಯಕ್ರಮಗಳನ್ನು ಬಳಸಿಕೊಳ್ಳಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮುಂದಾಗಿದೆ.
ಉಡುಪಿಯ ಸುಬ್ರಹ್ಮಣ್ಯ ಯಕ್ಷಗಾನ ಕಲಾಮಂಡಳಿ ತಂಡದ ಕಲಾವಿದರು ಜಿಲ್ಲೆಯ ಹಲವು ಗ್ರಾಮಗಳಲ್ಲಿ ಮತದಾನದ ಕುರಿತು ಜಾಗೃತಿ ಹಾಗೂ ಅರಿವು ಮೂಡಿಸುತ್ತಿದ್ದು, ಗ್ರಾಮಸ್ಥರು ಚುನಾವಣಾ ಆಮಿಷಗಳಿಗೆ ಬಲಿಯಾಗದಂತೆ ಅರಿವು ಮೂಡಿಸುತ್ತಿದ್ದಾರೆ. ಗ್ರಾಮದ ಸಮಸ್ಯೆಗಳಿಗೆ ಸ್ಪಂದಿಸುವ ಅರ್ಹ ವ್ಯಕ್ತಿಗೆ ಮತ ಹಾಕುವ ಮೂಲಕ ಸಮರ್ಥರನ್ನು ಚುನಾವಣೆಯಲ್ಲಿ ಆಯ್ಕೆ ಮಾಡುವಂತೆ ಕಲಾವಿದರು ಪ್ರೇರೇಪಿಸುತ್ತಿದ್ದಾರೆ.
ಚುನಾವಣೆಯಲ್ಲಿ ಅನರ್ಹ ವ್ಯಕ್ತಿಗೆ ಮತ ಚಲಾಯಿಸಿದರೆ ಮುಂದಾಗುವ ಸಮಸ್ಯೆಗಳೇನು, ಅರ್ಹ ವ್ಯಕ್ತಿಗೆ ಮತ ಚಲಾಯಿಸುವುದರಿಂದ ಅಗುವ ಪ್ರಯೋಜನಗಳು ಏನು ಎಂಬ ಕುರಿತು ಯಕ್ಷಗಾನ ರೂಪಕದಲ್ಲಿ ಪರಿಣಾಮಕಾರಿಯಾಗಿ ಚಿತ್ರಿಸಿ ಪ್ರದರ್ಶನ ನೀಡಲಾಗುತ್ತಿದೆ. ಜತೆಗೆ, ಗಾನ ಲಹರಿ ಬಳಗ, ಕೋಟೇಶ್ವರ ತಂಡದ ಸದಸ್ಯರೂ ಜನಪದ ಗೀತೆಗಳ ಮೂಲಕ ಮತದಾನ ಜಾಗೃತಿ ಮೂಡಿಸುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.