ಉಡುಪಿ: ಯಕ್ಷಗಾನ ಕಲಾರಂಗದ ಪ್ರಶಸ್ತಿ ಪ್ರದಾನ ಸಮಾರಂಭ ನ.17ರಂದು ಸಂಜೆ 4.30ಕ್ಕೆ ಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷದ ‘ಶ್ರೀ ವಿಶ್ವೇಶತೀರ್ಥ ಪ್ರಶಸ್ತಿಯನ್ನು ಮುಂಬೈನ ಪದವೀಧರ ಯಕ್ಷಗಾನ ಸಮಿತಿಗೆ ನೀಡಲಾಗುವುದು. ಪ್ರಶಸ್ತಿಯು ₹ 50,000 ನಗದು ಪುರಸ್ಕಾರ ಒಳಗೊಂಡಿದೆ. ಇದರ ಜತೆಗೆ 17 ಗಣ್ಯರ ಸ್ಮರಣಾರ್ಥ ನೀಡಲಾಗುವ ಪ್ರಶಸ್ತಿ ₹ 20,000 ನಗದು ಪುರಸ್ಕಾರ ಒಳಗೊಂಡಿದೆ. ಸಂಸ್ಥೆಯ ಕಾರ್ಯಕರ್ತರಿಗೆ ನೀಡುವ ಯಕ್ಷಚೇತನ ಪ್ರಶಸ್ತಿಯನ್ನು ರಮೇಶ್ ರಾವ್ ಕೋಟ ಅವರಿಗೆ ನೀಡಲಾಗುವುದು ಎಂದರು.
ಪಲಿಮಾರು ಮಠದ ವಿದ್ಯಾಧೀಶ ತೀರ್ಥರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ವಿಶ್ವಪ್ರಸನ್ನ ತೀರ್ಥರು, ವಿದ್ಯಾರಾಜೇಶ್ವರ ತೀರ್ಥರು ಅನುಗ್ರಹ ಸಂದೇಶ ನೀಡಲಿದ್ದಾರೆ. ಉದ್ಯಮಿ ಜಿ.ಶಂಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ರಘುಪತಿ ಭಟ್ ಕಲಾತರಂಗ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ. ಸಿಂಡಿಕೇಟ್ ಬ್ಯಾಂಕ್ ಜನರಲ್ ಮ್ಯಾನೇಜರ್ ಭಾಸ್ಕರ ಹಂದೆ, ಕರ್ಣಾಟಕ ಬ್ಯಾಂಕ್ ಜನರಲ್ ಮ್ಯಾನೇಜರ್ ಬಿ.ಚಂದ್ರಶೇಖರ್ ರಾವ್, ಪದವೀಧರ ಯಕ್ಷಗಾನ ಸಮಿತಿಯ ಅಧ್ಯಕ್ಷ ಎಚ್.ಬಿ.ಎಲ್.ರಾವ್ ಭಾಗವಹಿಸಲಿದ್ದಾರೆ ಎಂದರು.
ಅಂದು ಮಧ್ಯಾಹ್ನ 2.30ಕ್ಕೆ ಯಕ್ಷಸಿಂಚನ ಟ್ರಸ್ಟ್ನಿಂದ ತಾಮ್ರಧ್ವಜ ಕಾಳಗ ಹಾಗೂ ಸಂಜೆ 7ಕ್ಕೆ ತೆಂಕುತಿಟ್ಟಿನ ಕಲಾವಿದರಿಂದ ಅಹಮಪಿ ಮಾನುಷೀ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದು ಮುರಲಿ ಕಡೆಕಾರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮನೋಹರ್, ನಾರಾಯಣ ಹೆಗಡೆ, ಸುಬ್ರಹ್ಮಣ್ಯ ಬಾಸ್ರಿ, ಅನಂತ ಉಪಾಧ್ಯ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.