ADVERTISEMENT

ಜಿಲ್ಲೆಯ ಅಭಿವೃದ್ದಿಯಲ್ಲಿ ಯುವ ಜನತೆ ಪಾತ್ರ ಮಹತ್ವದ್ದು: ಡಿಸಿ ಎಂ.ಕೂರ್ಮಾರಾವ್

ಯುವ ಜನೋತ್ಸವ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2021, 14:32 IST
Last Updated 27 ನವೆಂಬರ್ 2021, 14:32 IST
ನಗರದ ಪುರಭವನದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಉದ್ಘಾಟಿಸಿದರು.
ನಗರದ ಪುರಭವನದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಉದ್ಘಾಟಿಸಿದರು.   

ಉಡುಪಿ: ಜಿಲ್ಲೆಯ ಅಭಿವೃದ್ದಿಗೆ ಯುವ ಜನರ ಸಹಕಾರ ಮಹತ್ವವಾಗಿದ್ದು, ವಿವಿಧ ಯೋಜನೆಗಳ ಪ್ರಗತಿಗೆ ಉತ್ತಮ ಸಹಕಾರ ನೀಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಹೇಳಿದರು.

ನಗರದ ಪುರಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಹಕಾರದೊಂದಿಗೆ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಈಚೆಗೆ ನಡೆದ ಫಿಟ್ ಇಂಡಿಯಾ, ಕ್ಲೀನ್ ಇಂಡಿಯಾ ಸೇರಿದಂತೆ ಹಲವು ಕಾರ್ಯಕ್ರಮಗಳ ಸಂಪೂರ್ಣ ಯಶಸ್ಸಿಗೆ ಜಿಲ್ಲೆಯ ಯುವಜನತೆ ಉತ್ತಮ ಸಹಕಾರ ನೀಡಿದ್ದು, ಜಿಲ್ಲಾಡಳಿತ ಕೂಡ ಯುವ ಜನರ ಸಲಹೆಗಳನ್ನು ಪರಿಗಣಿಸಲು ಆದ್ಯತೆ ನೀಡುತ್ತಿದೆ ಎಂದರು.

ADVERTISEMENT

ಯುವ ಜನರ ಕೋರಿಕೆಯ ಮೇರೆಗೆ ಈಚೆಗೆ ಐಎಎಸ್, ಕೆಎಎಸ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯವಿರುವ ಮಾಹಿತಿ ಮತ್ತು ತರಬೇತಿ ನೀಡಲಾಗುತ್ತಿದೆ. ಸ್ವಚ್ಚತೆ ಕುರಿತು ಜಾಗೃತಿ ಸಂದೇಶ ಹಾಗೂ ಚಿತ್ರಗಳನ್ನು ರಚಿಸಬೇಕು. ಎಲ್ಲ ಕ್ಷೇತ್ರದಲ್ಲೂ ಯುವ ಜನತೆಯ ಶಕ್ತಿ ಹಾಗೂ ಪ್ರತಿಭೆ ಸದ್ಬಳಕೆಯಾಗಬೇಕು ಎಂದು ಕರೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಮಾತನಾಡಿ, ಯುವ ಜನತೆಯ ವ್ಯಕ್ತಿತ್ವ ವಿಕಸನಕ್ಕೆ ಒತ್ತು ನೀಡಬೇಕು, ಪ್ರತಿಭೆಯನ್ನು ಪ್ರೋತ್ಸಾಹಿಸಲು ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಯುವ ಸಂಪತ್ತು ಸದ್ಬಳಕೆಯಾಗಬೇಕು ಎಂದರು.

ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ವಾಣಿ ಬಲ್ಲಾಳ್, ಎನ್.ಎಸ್.ಎಸ್. ಸಂಯೋಜನಾಧಿಕಾರಿ ಡಾ.ರಾಜೆಂದ್ರ ಇದ್ದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಉಪನ್ಯಾಸಕಿ ತ್ರಿವೇಣಿ ಕಾರ್ಯಕ್ರಮ ನಿರೂಪಿಸಿದರು.

ಯುವ ಜನೋತ್ಸವದಲ್ಲಿ ಜಾನಪದ ನೃತ್ಯ, ಹಾಡು, ಏಕಪಾತ್ರಾಭಿನಯ, ಶಾಸ್ತ್ರೀಯ ಸಂಗೀತ, ನೃತ್ಯ, ವಾದ್ಯ, ಹಾರ್ಮೋನಿಯಂ, ಗಿಟಾರ್, ಆಶು ಭಾಷಣ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.