ಮೇಲುಕೋಟೆ: ಆಷಾಢ ಜಾತ್ರೆ ಅಂಗವಾಗಿ ಮಂಗಳವಾರ ರಾತ್ರಿ ಚುಮುಚುಮು ಚಳಿಯ ನಡುವೆ ಚೆಲುವನಾರಾಯಣ ಸ್ವಾಮಿಯ ಐತಿಹಾಸಿಕ ಕೃಷ್ಣರಾಜಮುಡಿ ಉತ್ಸವ ವೈಭವದಿಂದ ನೆರವೇರಿತು.
ಶ್ರೀದೇವಿ ಭೂದೇವಿಯರೊಂದಿಗೆ ಗರುಡಾರೂಢನಾದ ಚೆಲುವನಾರಾಯಣನಿಗೆ ವಜ್ರಖಚಿತ ಕೃಷ್ಣರಾಜಮುಡಿ ಕಿರೀಟ ತೊಡಿಸಲಾಯಿತು. ನಂತರ ಚೆಲುವನಾರಾಯಣಸ್ವಾಮಿಗೆ ಮಹಾಮಂಗಳಾರತಿ ನೆರವೇರಿಸಲಾಯಿತು.
ದಿವ್ಯ ಪ್ರಬಂಧ ಪಾರಾಯಣ ಮತ್ತು ಮಂಗಳವಾದ್ಯದೊಂದಿಗೆ ವೇದಾಂತ ದೇಶಿಕರ ಸನ್ನಿಧಿಯಲ್ಲಿ ಆರಂಭವಾದ ಶ್ರೀಕೃಷ್ಣರಾಜಮುಡಿ ಉತ್ಸವ ಚತುರ್ಬೀದಿಗಳಲ್ಲಿ ನೆರವೇರಿತು. ವಿವಿಧ ಪುಷ್ಪಗಳ ಅಲಂಕಾರದಲ್ಲಿ ಕಂಗೊಳಿಸಿದ ಸ್ವಾಮಿಯನ್ನು ಅಪಾರ ಭಕ್ತರು ಕಣ್ತುಂಬಿಕೊಂಡರು.
ಕಿರೀಟ ಪರಿಶೀಲನೆ: ಮಂಡ್ಯದ ಜಿಲ್ಲಾ ಖಜಾನೆಯಿಂದ ಪೊಲೀಸ್ ಬಂದೋಬಸ್ತ್ನಲ್ಲಿ ಮೇಲುಕೋಟೆಗೆ ಕೃಷ್ಣರಾಜಮುಡಿ ತಿರುವಾಭರಣ ಪೆಟ್ಟಿಗೆ ತರಲಾಯಿತು. ಪಟ್ಟಣದ ಹೊರವಲಯದಲ್ಲಿರುವ ಆಂಜನೇಯಸ್ವಾಮಿ ಸನ್ನಿಧಿಯಲ್ಲಿರಿಸಿ ಪೂಜೆ ನೆರವೇರಿಸಿ ಭದ್ರತಾ ಸಿಬ್ಬಂದಿ ಗೌರವ ಸಮರ್ಪಿಸಿದರು. ನಂತರ ಪಲ್ಲಕ್ಕಿಯಲ್ಲಿರಿಸಿ ಮೆರವಣಿಗೆಯೊಂದಿಗೆ ದೇವಾಲಯಕ್ಕೆ ತರಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.