ಅಂಕೋಲಾ: `ರಾಜ್ಯ ಸರ್ಕಾರದ ಶೈಕ್ಷಣಿಕ ಮತ್ತು ಭಾಷಾ ನೀತಿ ಕಾರ್ಯಕ್ರಮಗಳು ಕನ್ನಡಕ್ಕೆ ಕಂಟಕಪ್ರಾಯವಾಗಿವೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಆರನೇ ತರಗತಿಯಿಂದ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ನೀಡಲು ಮುಂದಾಗಿರುವುದು ಕನ್ನಡದ ಮರಣ ಶಾಸನಕ್ಕೆ ಮುನ್ನುಡಿ ಬರೆದಂತಾಗಿದೆ~ ಎಂದು ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ರೋಹಿದಾಸ ನಾಯಕ ಹೇಳಿದ್ದಾರೆ.
ಇತ್ತೀಚೆಗೆ ನಗರದಲ್ಲಿ ಏಕರೂಪ ಶಿಕ್ಷಣ ನೀತಿ ಜಾರಿಗೆ ಒತ್ತಾಯಿಸಿ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಅರ್ಪಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು.`ಕನ್ನಡ ಮಾಧ್ಯಮದಲ್ಲಿ ಬೋಧಿಸುವ ಲಿಖಿತ ಭರವಸೆ ನೀಡಿ ಇಂಗ್ಲಿಷ್ ಮಾಧ್ಯಮದಲ್ಲಿ ಪಾಠ ಪ್ರವಚನ ನಡೆಸುತ್ತಿರುವ ಖಾಸಗಿ ಶಾಲೆಗಳ ವಿರುದ್ಧ ನ್ಯಾಯಾಲಯದಲ್ಲಿ ಸರ್ಕಾರ ದಾವೆ ಹೂಡಬೇಕು.
ಇಂಗ್ಲಿಷ್ನ್ನು ಒಂದು ಭಾಷೆಯಾಗಿ ಕಲಿಸಲು ಅಭ್ಯಂತರವಿಲ್ಲ. ಒಂದರಿಂದ 8ನೇ ತರಗತಿಯವರೆಗೆ ಮಾತೃಭಾಷಾ ಮಾಧ್ಯಮದ ಸಮಾನ ಶಿಕ್ಷಣ ಜಾರಿಗೊಳಿಸಬೇಕು~ ಮುಂತಾದ ಬೇಡಿಕೆಗಳ ಮನವಿಯನ್ನು ಶಿರಸ್ತೇದಾರ ಜಿ.ಎನ್. ನಾಯ್ಕ ಸ್ವೀಕರಿಸಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ವಿಷ್ಣು ನಾಯ್ಕ, ಜಿ.ಪಂ. ಮಾಜಿ ಅಧ್ಯಕ್ಷ ರಮಾನಂದ ನಾಯಕ, ಶಾಂತಾರಾಮ ಹಿಚ್ಕಡ, ಬಿ. ಹೊನ್ನಪ್ಪ, ಜೆ. ಪ್ರೇಮಾನಂದ, ರಾಮಕೃಷ್ಣ ನಾಯಕ ಸೂರ್ವೆ, ಜಗದೀಶ ನಾಯಕ, ಜಿ.ಆರ್. ನಾಯಕ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.