ಕಾರವಾರ: ‘ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯವರು ಈ ಬಾರಿಯ ಚುನಾವಣೆಯಲ್ಲಿ ಜಯಶಾಲಿಯಾಗಬೇಕು ಎಂದು ಧರ್ಮಸ್ಥಳದ ಶ್ರೀಮಂಜುನಾಥ ಸ್ವಾಮಿಗೆ ಮುಡಿ ಹರಕೆ ಹೊತ್ತಿದ್ದು, ಅವರು ಮುಖ್ಯಮಂತ್ರಿ ಆಗುವವರೆಗೆ ತಲೆ ಕೂದಲು, ಮೀಸೆ, ಗಡ್ಡವನ್ನು ಮುಂಡನೆ ಮಾಡಿಸಿಕೊಳ್ಳುವುದಿಲ್ಲ’ ಎಂದು ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಅಜಿತ್ ಪೊಕಳೆ ತಿಳಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಿಕ್ಕೆ ಬರಲಿದೆ ಎಂಬ ಸಂಪೂರ್ಣ ವಿಶ್ವಾಸ ಇದೆ. ಮುಖ್ಯಮಂತ್ರಿಯಾಗಿ ಅವರು ಮತ್ತೊಮ್ಮೆ ಆಡಳಿತ ನಡೆಸಲಿದ್ದಾರೆ. ಅವರಿಗಾಗಿ ಈ ಹರಕೆಯನ್ನು ಹೊರಲಾಗಿದೆ. ನನ್ನ ಬೇಡಿಕೆ ಈಡೇರಿದ ಬಳಿಕ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿ, ಹರಕೆ ತೀರಿಸುತ್ತೇನೆ’ ಎಂದರು.
ಶೀಘ್ರವೇ ಅಭ್ಯರ್ಥಿಗಳ ಘೋಷಣೆ: ‘ಜೆಡಿಎಸ್ ರಾಷ್ಟ್ರ ಘಟಕದ ಅಧ್ಯಕ್ಷ ದೇವೆಗೌಡರು ಹಾಗೂ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯವರು ಜಿಲ್ಲಾ ಪ್ರವಾಸದ ನಿಮಿತ್ತ ಇಲ್ಲಿಗೆ ಶೀಘ್ರವೇ ಆಗಮಿಸಲಿದ್ದಾರೆ. ಜಿಲ್ಲೆಯ ವಿವಿಧ ಕ್ಷೇತ್ರಗಳಿಗೆ ಸದ್ಯದಲ್ಲಿಯೇ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗುತ್ತದೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, ಈವರೆಗೂ ಬಗೆಹರಿಸಲಾಗದ ಇಲ್ಲಿನ ಕುಡಿಯುವ ನೀರು, ರಸ್ತೆ ಸೇರಿದಂತೆ ಇನ್ನಿತರ ಸಮ್ಯೆಗಳಿಗೆ ಪರಿಹಾರ ದೊರಕಿಸಿ ಕೊಡಲಾಗುವುದು’ ಎಂದು ಹೇಳಿದರು. ಜೆಡಿಎಸ್ ಮುಖಂಡರಾದ ಪ್ರದೀಪ ಶೇಜವಾಡಕರ್, ಖಲೀಲುಲ್ಲಾ ಶೇಖ್, ಶಂಕರ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.