ಕಾರವಾರ: ಭಾನುವಾರ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾದ ಅಂಕೋಲಾದ ವಿವಿಧ ಪ್ರದೇಶಗಳಿಗೆ ಕುಮಟಾ ಸಹಾಯಕ ಆಯುಕ್ತರಾದ ಲಕ್ಷ್ಮೀಪ್ರಿಯಾ ಅವರು ಮಂಗಳವಾರ ಬೆಳಿಗ್ಗೆ ಭೇಟಿ ನೀಡಿ ಪರೀಶೀಲಿಸಿದರು.
ಮನೆಗಳಿಗೆ ನೀರು ನುಗ್ಗಿ ತೊಂದರೆಯಾಯಿತು ಎಂದು ಕೆಲವು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿತ್ತು. ಹೀಗಾಗಿ ಪರಿಶೀಲನೆ ನಡೆಸಿದ ಅವರು, ಪಟ್ಟಣದ ಕೋಟೆವಾಡ, ಲಿಂಬುಚಾಳ, ಶಿವಾಜಿ ವಾಸ್ಟರ್ವಾಡಾಗಳಿಗೆ ಭೇಟಿ ನೀಡಿದರು. ಪುರಸಭೆ ಮುಖ್ಯಾಧಿಕಾರಿ, ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ ರಸ್ತೆ ಕಾಮಗಾರಿ ನಡೆಸುತ್ತಿರುವ ಐಆರ್ಬಿ ಸಂಸ್ಥೆಯ ಅಧಿಕಾರಿಗಳೂ ಜತೆಗಿದ್ದರು.
ಮನೆಗಳಿಗೆ ನೀರು ನುಗ್ಗಿದ ಪ್ರದೇಶಗಳ ಒಳಚರಂಡಿಯಲ್ಲಿ ಕಸಕಡ್ಡಿ ಕಟ್ಟಿಕೊಂಡಿದೆ. ಹೀಗಾಗಿ ನೀರು ಸರಾಗವಾಗಿ ಹರಿದು ಹೋಗದಿರುವುದು ಗಮನಕ್ಕೆ ಬಂದಿದೆ ಎಂದು ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.
ಒಳಚರಂಡಿಯನ್ನು ಸ್ವಚ್ಛಗೊಳಿಸಿದ್ದು, ನೀರು ಸರಾಗವಾಗಿ ಹರಿಯುತ್ತಿದೆ. ಅಲ್ಲದೇ ಮಾಧ್ಯಮಗಳಲ್ಲಿ ಉಲ್ಲೇಖಿಸಿದಷ್ಟು ಮನೆಗಳು ಈ ಪ್ರದೇಶದಲ್ಲಿಲ್ಲ. ಮಳೆಯಿಂದ ಹಾನಿಯಾಗುವಂತಹ ಯಾವುದೇ ಸಂದರ್ಭ ನಿರ್ಮಾಣವಾಗಿಲ್ಲ ಎಂದು ಅವರು ಹೇಳಿದ್ದಾರೆ. ನಾಗರಿಕರು ತಮ್ಮ ಮನೆಯ ಕಸವನ್ನು ಪುರಸಭೆಯ ವಾಹನಕ್ಕೇ ನೀಡಬೇಕು. ಯಾವುದೇ ಕಾರಣಕ್ಕೂ ಚರಂಡಿಯಲ್ಲಿ ಹಾಕಬಾರದು ಎಂದು ಸ್ಥಳೀಯರಿಗೆ ಮನವರಿಕೆ ಮಾಡಿ ಕೊಟ್ಟಿರುವುದಾಗಿ ಅವರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.