ADVERTISEMENT

ತ್ಯಾಜ್ಯ ನಿರ್ವಹಣೆಯಿಂದ ಹಾನಿ ಬೇಡ

​ಪ್ರಜಾವಾಣಿ ವಾರ್ತೆ
Published 14 ಜನವರಿ 2011, 11:00 IST
Last Updated 14 ಜನವರಿ 2011, 11:00 IST

ಕಾರವಾರ: ಜಿಲ್ಲೆಯ ಆಸ್ಪತ್ರೆಗಳು ನರ್ಸಿಂಗ್ ಹೋಂ, ಕ್ಲಿನಿಕ್‌ಗಳಲ್ಲಿ ಸಂಗ್ರಹವಾಗುವ ವೈದ್ಯಕೀಯ ತ್ಯಾಜ್ಯಗಳನ್ನು ಪರಿಸರಕ್ಕೆ ಹಾಗೂ ಇತರರಿಗೆ ಹಾನಿ ಮಾಡದ ರೀತಿಯಲ್ಲಿ ಸಂಗ್ರಹಿಸಿ, ಸಂಸ್ಕರಿಸಿ ವಿಲೇವಾರಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಬಿ.ಎನ್.ಕೃಷ್ಣಯ್ಯ ಹೇಳಿದರು.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಗುರುವಾರ ಇಲ್ಲಿಯ ವಿಜ್ಞಾನ ಕೇಂದ್ರದಲ್ಲಿ ಜಿಲ್ಲೆಯ ಆಸ್ಪತ್ರೆ ಸಿಬ್ಬಂದಿಯವರಿಗೆ ಹಮ್ಮಿಕೊಂಡ ಜೀವ ವೈದ್ಯಕೀಯ ತಾಜ್ಯಗಳ ನಿರ್ವಹಣೆ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಆಸ್ಪತ್ರೆಗಳಲ್ಲಿ ಶುಚಿತ್ವ, ಸ್ವಚ್ಛತೆ ಕಾಪಾಡಬೇಕಾದ ಅವಶ್ಯಕತೆಯಿದೆ. ಆಸ್ಪತ್ರೆಗಳಲ್ಲಿ ಉತ್ಪತಿಯಾಗುವ ತ್ಯಾಜ್ಯ ವಸ್ತುಗಳಿಂದ ಇತರರಿಗೆ ಹಾಗೂ ಪರಿಸರಕ್ಕೆ ದುಷ್ಪರಿಣಾಮ ಬೀರದಂತೆ ಸರಿಯಾಗಿ ಸಂಗ್ರಹಿಸಿ ವಿಲೇವಾರಿ ಮಾಡಬೇಕೆಂದು ಅವರು ತಿಳಿಸಿದರು.

ಜೀವ ವೈದ್ಯಕೀಯ ತ್ಯಾಜ್ಯ ವಸ್ತುಗಳ ನಿಯಮಗಳು 1998 ಪ್ರಕಾರ ಈ ತ್ಯಾಜ್ಯ ವಸ್ತುಗಳ ನಿರ್ವಹಣೆ ಮಹತ್ವದ್ದಾಗಿದ್ದು ಇದನ್ನು ಎಲ್ಲರೂ ಪಾಲಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಅಧಿಕಾರಿ ಡಾ ಶಿವಣ್ಣ ರೆಡ್ಡಿ ಮಾತನಾಡಿ, ಭಾರತ ಸರ್ಕಾರ ಪರಿಸರ ಸಂರಕ್ಷಣಾ ಕಾಯ್ದೆಯಡಿ ಜೀವ ವೈದ್ಯಕೀಯ ತ್ಯಾಜ್ಯ ವಸ್ತುಗಳ ನಿಯಮಗಳನ್ನು ಜಾರಿಗೊಳಿಸಿದ್ದು ಆರೋಗ್ಯ ಘಟಕಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿ ಸಂಸ್ಕರಿಸಿ ವಿಲೇವಾರಿಗೊಳಿಸಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕಡ್ಡಾಯವಾಗಿ ಅಧಿಕಾರ ಪತ್ರ ಪಡೆಯಬೇಕು. ಆಸ್ಪತ್ರೆ ಸಿಬ್ಬಂದಿಗೆ ವೈದ್ಯಕೀಯ ತ್ಯಾಜ್ಯ ವಸ್ತುಗಳ ವಿಲೇವಾರಿ ಕುರಿತು ಜ್ಞಾನ ಅವಶ್ಯವ್ಯಾಗಿದೆ ಎಂದರು.

ಜಿಲ್ಲಾ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ವಿ.ಎನ್.ನಾಯ್ಕ ಮಾತನಾಡಿ, ಉತ್ತರ ಕನ್ನಡದಲ್ಲಿ ಸಾಮೂಹಿಕ ಜೀವ ವೈದ್ಯಕೀಯ ತ್ಯಾಜ್ಯ ವಸ್ತುಗಳ ಸಂಸ್ಕರಣಾ ಘಟಕದ ಅವಶ್ಯಕತೆಯಿ ಇದೆ ಎಂದು ಅಭಿಪ್ರಾಯಪಟ್ಟರು. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ರಾಯಣ್ಣವರ, ಕೆ.ವಿ.ಶಿವಕುಮಾರ ಉಪಸ್ಥಿತರಿದ್ದರು. ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿ ಗೋಪಾಲಕೃಷ್ಣ ಸಣತಂಗಿ ಸ್ವಾಗತಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.