ಭಟ್ಕಳ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಪಟ್ಟಣದಲ್ಲಿ ಏ.26ರಂದು ಸಂಜೆ ಜನಾಶೀರ್ವಾದ ಯಾತ್ರೆ ನಡೆಯಲಿದೆ. ಸಂಜೆ ನಡೆಯಲಿರುವ ಬಹಿರಂಗ ಸಮಾವೇಶಕ್ಕೆ ಪಟ್ಟಣದ ಹನೀಫಾಬಾದ್ ಸಮೀಪದ ಮೈದಾನದಲ್ಲಿ ಬೃಹತ್ ವೇದಿಕೆ ಸಿದ್ಧಗೊಳಿಸಲಾಗಿದೆ.
ದೆಹಲಿಯಿಂದ ಬಂದಿರುವ ವಿಶೇಷ ಭದ್ರತಾ ಅಧಿಕಾರಿಗಳ ತಂಡವು ಕಾರ್ಯಕ್ರಮ ನಡೆಯುವ ಸ್ಥಳದ ನಕ್ಷೆಯನ್ನು ಪಡೆದು ಪರಿಶೀಲನೆ ನಡೆಸಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ್ ಅವರು ಭಟ್ಕಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಪ್ರವೇಶ ದ್ವಾರ, ಗಣ್ಯ ವ್ಯಕ್ತಿಗಳು, ಸಾರ್ವಜನಿಕರು, ಕಾರ್ಯಕರ್ತರು ಯಾವ ಕಡೆಯಿಂದ ಬರಬೇಕು, ಎಂಬುದರ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸ್ಥಳದ ಸುತ್ತಮುತ್ತಲಿನ ಪರಿಸರವನ್ನೂ ವೀಕ್ಷಿಸಿದ ಅವರು, ಮೈದಾನದ ಸನಿಹದಲ್ಲೇ ನಿರ್ಮಾಣವಾಗುತ್ತಿರುವ ಕಟ್ಟಡವನ್ನೂ ಪರಿಶೀಲಿಸಿದರು. ಜನಾಶೀರ್ವಾದ ಯಾತ್ರೆ ನಡೆಯುವ ಸ್ಥಳದ ಸುತ್ತಮುತ್ತಲಿನ ಪ್ರದೇಶದಲ್ಲಿ ಬುಧ
ವಾರದಿಂದಲೇ ಭದ್ರತೆ ಹೆಚ್ಚಿಸಲಾಗಿದೆ. ಅದಕ್ಕಾಗಿ ಜಿಲ್ಲೆಯ ವಿವಿಧೆಡೆಯಿಂದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಬಂದಿದ್ದಾರೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ್, ಡಿವೈಎಸ್ಪಿ ವೇಲಂಟೈನ್ ಡಿಸೋಜ ಅವರೂ ಸ್ಥಳದಲ್ಲೇ ಇದ್ದು ಭದ್ರತೆಯ ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.
ಶಾಸಕ ಮಂಕಾಳ ವೈದ್ಯ ಕಾರ್ಯಕ್ರಮ ನಡೆಯುವ ಸ್ಥಳದಲ್ಲೇ ಇದ್ದು, ವೇದಿಕೆ ನಿರ್ಮಾಣವೂ ಸೇರಿದಂತೆ ಕಾರ್ಯಕ್ರಮದ ಯಶಸ್ಸಿಗಾಗಿ ಮುಖಂಡರಿಗೆ, ಕಾರ್ಯಕರ್ತರಿಗೆ ಸಲಹೆ ಸೂಚನೆಗಳನ್ನು ನೀಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿಠ್ಠಲ ನಾಯ್ಕ, ಚಂದ್ರಶೇಖರ ಗೌಡ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಜಯಶ್ರೀ ಮೊಗೇರ್, ಜಾಲಿ ಪಟ್ಟಣ ಪಂಚಾಯ್ತಿ ಅಧ್ಯಕ್ಷ ಅಬ್ದುಲ್ ರಹೀಮ್ ಅವರೂ ಭೇಟಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.