ADVERTISEMENT

ಮಾರಾಮಾರಿ ತಾಣವಾದ ವಿದ್ಯಾದೇಗುಲ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2012, 8:50 IST
Last Updated 19 ಏಪ್ರಿಲ್ 2012, 8:50 IST

ಕಾರವಾರ: ಹಳೆ ದ್ವೇಷದ ಹಿನ್ನೆಲೆಯಲ್ಲಿ ಇಲ್ಲಿಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಮತ್ತು ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗಳಿಬ್ಬರು ಜಗಳ ನಡೆದ ಬೆನ್ನಲ್ಲೆ ಮತ್ತೊಬ್ಬ ಎಂಜಿನಿಯರಿಂಗ್ ವಿದ್ಯಾರ್ಥಿ ಮೇಲೆ ಹಲ್ಲೆ ನಡೆದ ಘಟನೆ ನಗರದ ಎಮ್.ಜಿ. ರಸ್ತೆಯಲ್ಲಿರುವ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ ಬುಧವಾರ ನಡೆದಿದೆ.

ಹಲ್ಲೆಗೊಳಗಾದವನನ್ನು ಎಂಜಿನಿಯರಿಂಗ್ ಕಾಲೇಜಿನ ಐದನೇ ಸೆಮಿಸ್ಟರ್ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿ ಅಜರ್ ಮಿರ್ಜಾ ನಾಯಕವಾಡಿ ಎಂದು ಗುರುತಿಸಲಾಗಿದೆ. ಈತ ಇಲ್ಲಿಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹಲ್ಲೆ ನಡೆಸಿದವರ ಪೈಕಿ ಒಬ್ಬ ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿ ಎಂದು ಗೊತ್ತಾಗಿದೆ.

ಘಟನೆಯ ವಿವರ
: ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಟ್ರೆಡಿಷನಲ್ ಡೇ ಕಾರ್ಯಕ್ರಮ ಈಚೆಗೆ ನಡೆದಿತ್ತು. ಆ ಸಂದರ್ಭದಲ್ಲಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳ ಫೋಟೊ ಕ್ಲಿಕ್ಕಿಸಿದ್ದಾನೆ.

ಇದೇ ಕಾರಣಕ್ಕೆ ಪಾಲಿಟೆಕ್ನಿಕ್ ಕಾಲೇಜಿನ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ್ದಾನೆ. ಈ ದ್ವೇಷದ ಹಿನ್ನೆಲೆಯಲ್ಲಿ ಎಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ನಾಲ್ಕನೇ ಸೆಮಿಸ್ಟರ್ ವಿದ್ಯಾರ್ಥಿ ಆ ದಿನ ತನಗೆ ಹೊಡೆದ ವಿದ್ಯಾರ್ಥಿಯ ಮೇಲೆ ಬುಧವಾರ ಹಲ್ಲೆ ನಡೆಸಿದ್ದನು.

ರಜೆಗೆ ತೆರಳಿದ್ದ ಎಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ವಿ.ಎ.ರಾಯ್ಕರ್ ಇಂದು ಕರ್ತವ್ಯಕ್ಕೆ ಹಾಜರಾಗಿದ್ದು ನಿನ್ನೆ ನಡೆದ ಘಟನೆಯ ಬಗ್ಗೆ ಸಂಧಾನಸಭೆ ಏರ್ಪಡಿಸಿದ್ದರು. ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿ ಸಂಘದ ಮುಖಂಡರು ಸಭೆಯಲ್ಲಿ ಹಾಜರಿದ್ದರು.

ಪ್ರಾಂಶುಪಾಲರ ಕೊಠಡಿಯಲ್ಲಿ ಸಭೆ ನಡೆಯುತ್ತಿದ್ದ ಸಂದರ್ಭದಲ್ಲಿ ಕಾಲೇಜಿನ ಕ್ಯಾಂಪಸ್‌ನಲ್ಲಿದ್ದ ಅಜರ್ ನಾಯಕವಾಡಿಯ ಮೇಲೆ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಯೊಬ್ಬ ಸೇರಿದಂತೆ ಹೊರಗಿನವರು ಸೇರಿದಂತೆ ಒಟ್ಟು ನಾಲ್ಕೈದು ಜನ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ಈ ಘಟನೆಯಿಂದಾಗಿ ಕಾಲೇಜಿನಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸಭೆಯಲ್ಲಿದ್ದ ಪೊಲೀಸರು ಮತ್ತು ಮಾಧ್ಯಮದವರು ಓಡಿ ಬರುತ್ತಿದ್ದಂತೆ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ವಿದ್ಯಾರ್ಥಿಗಳು ಸಣ್ಣಪುಟ್ಟ ವಿಷಯಕ್ಕೆ ಜಗಳ ಮಾಡುತ್ತಿರುವುದಕ್ಕೆ ಪ್ರಾಂಶುಪಾಲ ರಾಯ್ಕರ್ ಆಕ್ರೋಶ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳ ಭವಿಷ್ಯ ಹಾಳಾಗದಿರಲಿ ಎನ್ನುವ ದೃಷ್ಟಿಯಿಂದ ನಾವು ಕ್ರಮಕೈಗೊಳ್ಳುವುದಿಲ್ಲ. ಇದನ್ನೆ ವಿದ್ಯಾರ್ಥಿಗಳು ತಪ್ಪಾಗಿ ಭಾವಿಸುತ್ತಿದ್ದಾರೆ. ಇಂತಹ ವರ್ತನೆಗಳು ಮರುಕಳುಹಿಸುತ್ತಿದ್ದರೆ ಕ್ರಮಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಚ್ಚರಿಕೆ ನೀಡಿದರು.

`ನಿಮ್ಮ ಜಗಳ ಬಿಡಿಸುವುದು, ಸಂಧಾನಸಭೆ ನಡೆಸುವುದೇ ನಮ್ಮ ಕೆಲಸವಲ್ಲ ಆಡಳಿತ, ಕಾಲೇಜಿಗೆ ಸಂಬಂಧಿಸಿದಂತೆ ಸಾಕಷ್ಟು ಕೆಲಸ ಕಾರ್ಯಗಳಿವೆ. ನಿಮ್ಮ ಪಾಲಕರು ಕಷ್ಟಪಟ್ಟು ನಿಮಗೆ ಓದಲು ಕಳುಸುಹಿದ್ದಾರೆ. ನೀವು ಇಲ್ಲಿ ಬಂದು ಮಾಡುವುದೇ ಬೇರೆ~ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾಲೇಜಿನಲ್ಲಿ ನಡೆದ ಈ ಘಟನೆಯಿಂದ ಇಂಟರ್‌ನಲ್ ಪರೀಕ್ಷೆ ಎದುರಿಸುತ್ತಿದ್ದ ಎರಡೂ ಕಾಲೇಜಿನ ವಿದ್ಯಾರ್ಥಿಗಳು ತೊಂದರೆ ಅನುಭವಿಸಿದರು. ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಆರ್.ಎಸ್. ಹೆಗಡೆ, ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ, ವಿದ್ಯಾರ್ಥಿ ಒಕ್ಕೂಟ ಅಧ್ಯಕ್ಷ ರಾಘು ನಾಯ್ಕ ಮತ್ತಿತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.