ADVERTISEMENT

ಮೆಡಿಕಲ್ ಕಾಲೇಜು ಸ್ಥಾಪನೆಗೆ ಮನವಿ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2012, 10:35 IST
Last Updated 9 ಅಕ್ಟೋಬರ್ 2012, 10:35 IST

ಮುಂಡಗೋಡ: `ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಕೂಡಲೇ ನಿಲ್ಲಿಸಬೇಕು ಹಾಗೂ ತಾಲ್ಲೂಕಿನಲ್ಲಿಯೇ ಮೆಡಿಕಲ್ ಕಾಲೇಜು ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು~ ಎಂದು ಆಗ್ರಹಿಸಿ ರೈತ ಸಂಘ ಹಸಿರು ಸೇನೆಯವರು ಪಟ್ಟಣದಲ್ಲಿ ಪ್ರತಿಭಟನೆ ಹಾಗೂ ರಸ್ತೆ ತಡೆ ನಡೆಸಿ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಸೋಮವಾರ ಮನವಿ ಸಲ್ಲಿಸಿದರು.

ಪಟ್ಟಣದ ಪ್ರವಾಸಿ ಮಂದಿರದಿಂದ ಮೆರವಣಿಗೆ ನಡೆಸಿದ ರೈತ ಸಂಘದ ಸದಸ್ಯರು ಇಲ್ಲಿನ ಕೃಷ್ಣ ವಿಲಾಸ ಸರ್ಕಲ್ ಬಳಿ ರಸ್ತೆ ತಡೆ ನಡೆಸಿ ಕಾವೇರಿ ನೀರು ಹರಿಸುತ್ತಿರುವುದನ್ನು ಕೂಡಲೇ ಸ್ಥಗಿತಗೊಳಿಸುವಂತೆ ಆಗ್ರಹಿಸಿದರು. ರಾಜ್ಯವನ್ನು ಪ್ರತಿನಿಧಿಸುತ್ತಿರುವ ಸಂಸದರು ಕೂಡಲೇ ರಾಜೀನಾಮೆ ನೀಡಿ ರೈತರ ಬೆಂಬಲಕ್ಕೆ ಬರಬೇಕೆಂದು ಒತ್ತಾಯಿಸಿದರು.

ತಾಲ್ಲೂಕಿನ ಟಿಬೆಟನ್ ಕ್ಯಾಂಪ್‌ನಲ್ಲಿ ಪಾಳು ಬಿದ್ದಿರುವ ಜಮೀನನ್ನು ವಶಪಡಿಸಿಕೊಂಡು ಜಿಲ್ಲೆಗೆ ಮಂಜೂರಾದ ಮೆಡಿಕಲ್ ಕಾಲೇಜನ್ನು ಅಲ್ಲಿ ಸ್ಥಾಪಿಸಬೇಕು. 2009-12ರವರೆಗೆ ಬೆಳೆ ಹಾಳಾದರೂ ಇಲ್ಲಿಯವರೆಗೆ ರೈತರಿಗೆ ಬೆಳೆವಿಮೆ ಸೇರಿದಂತೆ ಯಾವುದೇ ಸೌಲಭ್ಯಗಳು ದೊರಕಿಲ್ಲ ಕೂಡಲೇ ಬೆಳೆ ವಿಮೆ ಸಿಗುವಂತೆ ಮಾಡಬೇಕು. ಬೆಳೆದ ಬೆಳೆಗೆ ಯೋಗ್ಯ ಬೆಲೆ ನಿಗದಿಪಡಿಸಬೇಕು~ ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶಂಭಣ್ಣ ಕೋಳೂರ, ಕೃಷಿಕ ಸಮಾಜದ ಸಂಗಮೇಶ ಬಿದರಿ, ಮಹೇಶ ಹೊಸಕೊಪ್ಪ, ಗಣಪತಿ ಎಲಿವಾಳ, ಸಾತು ಬನ್ಸೋಡೆ, ಮುಕ್ತುಂಸಾಬ, ಲೋಹಿತ್, ಅಂದಾನಪ್ಪ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮನವಿ
ಕಾರವಾರ: ಗಡಿ ಪ್ರದೇಶವಾದ ತಾಲ್ಲೂಕಿನಲ್ಲಿಯೇ ವೈದ್ಯಕೀಯ ಕಾಲೇಜು ನಿರ್ಮಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ವಿದ್ಯಾರ್ಥಿ ಒಕ್ಕೂಟದ ಮಹಿಳಾ ಘಟಕ ಶುಕ್ರವಾರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಗೆ ಮನವಿ ಪತ್ರ ಸಲ್ಲಿಸಿತು. ತಾಲ್ಲೂಕಿನಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಬೇಕಾದ ಎಲ್ಲ ರೀತಿಯ ಸೌಲಭ್ಯಗಳು ಜಿಲ್ಲಾ ಆಸ್ಪತ್ರೆಯಲ್ಲಿ ಇದೆ. ಹೀಗಾಗಿ ಗಡಿ ಭಾಗದ ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲಾ ಕೇಂದ್ರವಾದ ತಾಲ್ಲೂಕಿನಲ್ಲಿಯೇ ವೈದ್ಯಕೀಯ ಕಾಲೇಜು ನಿರ್ಮಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ರಾಘು ನಾಯ್ಕ, ಮಹಿಳಾ ಘಟಕದ ಅಧ್ಯಕ್ಷೆ ರೋಹಾನಾ ಶೇಖ ಹಾಜರಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.