ಹಳಿಯಾಳ: ಕ್ಷೇತ್ರದಾದ್ಯಂತ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪ್ರತಿಯೊಬ್ಬ ನಾಗರಿಕನಿಗೂ ಮೂಲ ಸೌಕರ್ಯ ಒದಗಿಸುವಲ್ಲಿ ಅಧಿಕಾರಿಗಳು ಕಾರ್ಯನಿರತರಾಗಬೇಕೆಂದು ರಾಜ್ಯದ ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅಧಿಕಾರಿಗಳಿಗೆ ತಾಕೀತು ನೀಡಿದರು.
ಇಲ್ಲಿಮ ತಾಲ್ಲೂಕು ಪಂಚಾಯ್ತಿ ಸಭಾ ಭವನದಲ್ಲಿ ಮಂಗಳವಾರ ಸಾರ್ವಜನಿಕರ ಅಹವಾಲನ್ನು ಸ್ವೀಕರಿಸುತ್ತಾ ಸಂಬಂಧ ಪಟ್ಟ ಇಲಾಖಾಧಿಕಾರಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸಿ, ನೀರು, ಸ್ವಚ್ಛತೆ, ವಿದ್ಯುತ್ಗೆ ಆದ್ಯತೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮೀಣ ಭಾಗಗಳಲ್ಲಿ ಹಾಗೂ ವಿವಿಧ ಬಡಾವಣೆಗಳಲ್ಲಿ ರಸ್ತೆಗಳು ಹಾಳಾಗಿ ತಗ್ಗು, ಗುಂಡಿಗಳು ಬಿದ್ದಿದ್ದರಿಂದ ರಸ್ತೆಗಳಲ್ಲಿ ವಾಹನ ಹಾಗೂ ಜನ ಸಂಚಾರಕ್ಕೆ ಅಡೆತಡೆ ಉಂಟಾಗುತ್ತಿದೆ ಎಂದು ಸಾರ್ವಜನಿಕರು ದೂರನ್ನು ಸಲ್ಲಿಸಿದಾಗ ಕೂಡಲೇ ಪ್ರತಿಕ್ರಿಯಿಸಿದ ಸಚಿವರು ಜಿಲ್ಲಾ ಪಂಚಾಯ್ತಿ, ಲೋಕೋಪಯೋಗಿ ಮತ್ತಿತರರ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಮಾತನಾಡಿ, ಹದಗೆಟ್ಟ ರಸ್ತೆ ದುರಸ್ತಿ ಮಾಡಿಸಿ ಸಾರ್ವನಿಕ ಹಾಗೂ ಮಳೆಗಾಲದಲ್ಲಿ ವಾಹನಗಳ ಸಂಚಾರಕ್ಕೆ ಅನುವುಮಾಡಿಕೊಡಿ ಎಂದು ಆದೇಶಿಸಿದರು.
ಅತಿವೃಷ್ಟಿಯಿಂದ ಹಾನಿಗೊಳಗಾದ ಸಂತ್ರಸ್ತರನ್ನು ಗುರುತಿಸಿ ಕೂಡಲೇ ಪರಿಹಾರ ವಿತರಣೆ ಮಾಡಿರಿ ಎಂದು ಕಂದಾಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಇದೇ ಸಂದರ್ಭದಲ್ಲಿ ಸಚಿವರಿಗೆ ವಿವಿಧ ಅಭಿವೃದ್ದಿ ಕಾಮಗಾರಿಗಳ ಬಗ್ಗೆ ಸಾರ್ವಜನಿಕರು ತಮ್ಮ ಅಹವಾಲನ್ನು ಸಲ್ಲಿಸಿದರು.
ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಕೃಷ್ಣ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಭಾಷ ಕೋರ್ವೇಕರ, ತಾಲ್ಲೂಕಿನ ಎಲ್ಲ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.