ಕಾರವಾರ: ಅಂಕೋಲಾ ತಾಲ್ಲೂಕಿನ ಅಲಗೇರಿಯಲ್ಲಿ ಪ್ರಸ್ತಾವಿತ ನಾಗರಿಕ ವಿಮಾನ ನಿಲ್ದಾಣಕ್ಕೆ ಭೂಸ್ವಾಧೀನ ಮಾಡದಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಗ್ರಾಮ ರಕ್ಷಣಾ ವೇದಿಕೆ ವತಿಯಿಂದ ಅಂಕೋಲಾದಲ್ಲಿ ಶುಕ್ರವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು. ಭೂಸ್ವಾಧೀನದ ಸರ್ವೆ ಕಾರ್ಯದ ಅಣಕು ಪ್ರದರ್ಶನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ನೂರಾರು ಗ್ರಾಮಸ್ಥರಿದ್ದು, ಮಹಿಳೆಯರು, ಮಕ್ಕಳು ಪಾಲ್ಗೊಂಡರು. ಅಲಗೇರಿ ಗ್ರಾಮದಿಂದ ಅಂಕೋಲಾ ತಹಶೀಲ್ದಾರ್ ಕಚೇರಿಯವರೆಗೆ ಪಾದಯಾತ್ರೆಯಲ್ಲಿ ಸಾಗಿದರು.
ಪ್ರತಿಭಟನೆ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಸೀಬರ್ಡ್ ನೌಕಾನೆಲೆಯ ಎರಡನೇ ಹಂತದ ವಿಸ್ತರಣೆಯ ಭಾಗವಾಗಿ ನೌಕಾಪಡೆಯ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ. ಅದರಲ್ಲೇ ನಾಗರಿಕ ವಿಮಾನ ಸೇವೆಗೂ ಅವಕಾಶ ನೀಡಲು ಉದ್ದೇಶಿಸಲಾಗಿದೆ. ನೌಕಾಪಡೆಯ ವಿಮಾನ ನಿಲ್ದಾಣಕ್ಕೆ ನೌಕಾನೆಲೆಯಲ್ಲೇ ಜಮೀನು ಲಭ್ಯವಿದೆ. ಆದರೆ, ನಾಗರಿಕ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ ಜಮೀನು ಅಗತ್ಯವಿದೆ ಎಂದು ಹೇಳಲಾಗಿತ್ತು. ಇದಕ್ಕೆ ಭೂಸ್ವಾಧೀನ ಮಾಡಬಾರದು ಎಂಬುದು ಗ್ರಾಮಸ್ಥರ ಒತ್ತಾಯವಾಗಿದೆ.
ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ ಜಮೀನು ಅಗತ್ಯವಿಲ್ಲ ಎಂದು ಜಿಲ್ಲಾಡಳಿತ ಈಗಾಗಲೇ ಸ್ಪಷ್ಟಪಡಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.