ಶಿರಸಿ: ಬಡವರಿಗೆ, ಅಂಗವಿಕಲರಿಗೆ ಅನುಕೂಲವಾಗುವ ಸೂಪರ್ ಸ್ಪೆಷಲ್ ಆಸ್ಪತ್ರೆಯನ್ನು ಜಿಲ್ಲೆಯಲ್ಲಿ ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹೇಳಿದರು.
ಸೋಮವಾರ ಇಲ್ಲಿ ಆಯೋಜಿಸಿದ್ದ ಕೇಂದ್ರ ಸರ್ಕಾರದ ವಿಶೇಷ ಅಡಿಪ್ ಯೋಜನೆಯಡಿ ಅಂಗವಿಕಲರಿಗೆ ಉಚಿತವಾಗಿ ಸಾಧನ ಸಲಕರಣೆಗಳ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಸರ್ಕಾರದ ಸೌಲಭ್ಯ ನೀಡಿಕೆಯೊಂದೇ ಪರಿಹಾರವಲ್ಲ. ಬದಲಾಗಿ ದಿವ್ಯಾಂಗರು ಕೂಡ ಎಲ್ಲರಂತೆ ಜೀವನ ಸಾಗಿಸಲು ಪೂರಕವಾಗಿ ತರಬೇತಿ ನೀಡಬೇಕು. ಆ ಮೂಲಕ ಅವರ ಕೌಶಲ್ಯ ವೃದ್ಧಿಸಬೇಕು. ಅದಕ್ಕಾಗಿ ಸರ್ಕಾರ ಭವಿಷ್ಯದಲ್ಲಿ ಆರೋಗ್ಯ ಇಲಾಖೆ, ಸಾಮಾಜಿಕ ನ್ಯಾಯ ಇಲಾಖೆ ಹಾಗೂ ಕೌಶಲಾಭಿವೃದ್ಧಿ ಇಲಾಖೆ ಸಹಯೋಗದಲ್ಲಿ ತರಬೇತಿ ನೀಡುವ ಕಾರ್ಯ ಮಾಡಲಾಗುವುದು. ಇದರ ಬಗ್ಗೆ ಸೇವಾ ಸಂಸ್ಥೆಗಳು ಮುಂದೆ ಬರಬೇಕಾದ ಅಗತ್ಯವಿದೆ ಎಂದರು.
ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ₹1 ಕೋಟಿವೆಚ್ಚದಲ್ಲಿ 1549 ಜನರಿಗೆ ವಿತರಣೆ ಮಾಡಲಾಗುತ್ತಿದೆ. ಇಂದಿನ ಕಾರ್ಯಕ್ರಮದಲ್ಲಿ 629 ಅಂಗವಿಕಲರಿಗೆ ಉಚಿತ ಸಾಧನ ಸಲಕರಣೆ ವಿತರಿಸಲಾಗುತ್ತಿದೆ ಎಂದು ಹೇಳಿದರು.
ಅಲಿಮ್ಕೊ ಸಂಸ್ಥೆ ಪ್ರಧಾನ ವ್ಯವಸ್ಥಾಪಕ ಪಿ.ಕೆ.ದುಬೆ, ಶಾಸಕರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಿವರಾಮ ಹೆಬ್ಬಾರ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಜಯಶ್ರೀ ಮೊಗೇರ,ಶಿರಸಿ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಶ್ರೀಲತಾ ಕಾಳೇರಮನೆ, ತಾಲ್ಲೂಕು ಪಂಚಾಯ್ತಿ ಅಧ್ಯಕ ಭವ್ಯಾ ಶೆಟ್ಟಿ, ಶಿರಸಿ ಉಪವಿಭಾಗಾಧಿಕಾರಿ ಕೆ.ರಾಜು ಮೊಗವೀರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.