ADVERTISEMENT

ಕನಿಷ್ಠ ವೇತನ ಹೆಚ್ಚಿಸಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2020, 14:30 IST
Last Updated 11 ನವೆಂಬರ್ 2020, 14:30 IST
ಅಂಗವನಾಡಿ ಕಾರ್ಯಕರ್ತೆಯರು ಕಾರವಾರದಲ್ಲಿ ಬುಧವಾರ ಧರಣಿ ಹಮ್ಮಿಕೊಂಡರು
ಅಂಗವನಾಡಿ ಕಾರ್ಯಕರ್ತೆಯರು ಕಾರವಾರದಲ್ಲಿ ಬುಧವಾರ ಧರಣಿ ಹಮ್ಮಿಕೊಂಡರು   

ಕಾರವಾರ: ಅಂಗನವಾಡಿ ಕಾರ್ಯಕರ್ತೆಯರಿಗೆ ತಿಂಗಳಿಗೆ ₹ 21 ಸಾವಿರ ವೇತನ ನೀಡಬೇಕು. ₹ 10 ಸಾವಿರ ಪಿಂಚಣಿ ಒದಗಿಸಬೇಕು ಎಂದು ರಾಜ್ಯ ಅಂಗನವಾಡಿ ನೌಕರರ ಸಂಘದ ಪ್ರಮುಖರು ಒತ್ತಾಯಿಸಿದ್ದಾರೆ.

ಇದರೊಂದಿಗೆ ವಿವಿಧ ಬೇಡಿಕೆಗಳನ್ನು ಸರ್ಕಾರಕ್ಕೆ ಮಂಡಿಸುವ ಸಲುವಾಗಿ ನ.26ರಂದು ದೇಶದಾದ್ಯಂತ ಮುಷ್ಕರ ಹಮ್ಮಿಕೊಳ್ಳಲಾಗಿದೆ. ಇದರ ಪೂರ್ವಭಾವಿಯಾಗಿ ಬುಧವಾರ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿ.ಐ.ಟಿ.ಯು ಪ್ರಮುಖರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷೆ ಎಸ್.ವರಲಕ್ಷ್ಮಿ, ‘ನೂತನ ಶಿಕ್ಷಣ ನೀತಿಯ ಅ‍ಪಾಯಗಳಿಂದ ಅಂಗನವಾಡಿ ಕೇಂದ್ರಗಳನ್ನು ರಕ್ಷಿಸಬೇಕು. ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಕಡ್ಡಾಯಗೊಳಿಸಬೇಕು. ಹೆಚ್ಚುವರಿ ಕೆಲಸಗಳನ್ನು ನಿರ್ಬಂರ್ಧಿಸಬೇಕು. ಸಮಗ್ರ ಶಿಶು ಅಭಿವೃದ್ಧಿ ಸಂಬಂಧಿಸಿದಂತೆ ಪ್ರತ್ಯೇಕ ನಿರ್ದೇಶನಾಲಯವನ್ನು ರಚಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಕೋವಿಡ್‌ನಿಂದ ಮೃತರಾದ 26 ಮಂದಿ ಕಾರ್ಯಕರ್ತರ ಮಕ್ಕಳಿಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡಬೇಕು. ಕೆಲಸದ ಒತ್ತಡದಿಂದ ಮೃತಪಟ್ಟ 32 ಮಂದಿ ಅಂಗನವಾಡಿ ಕಾರ್ಯಕರ್ತೆಯರ ಕುಟುಂಬಗಳಿಗೆ ತಲಾ ಕನಿಷ್ಠ ₹ 5 ಲಕ್ಷ ಪರಿಹಾರ ನೀಡಬೇಕು. ಅಂಗನವಾಡಿ ಕೇಂದ್ರಗಳಿಗೆ ಇಲಾಖೆಯಿಂದಲೇ ಕೋಳಿ ಮೊಟ್ಟೆ ಪೂರೈಕೆ ಮಾಡಬೇಕು. ಈಗ ಭರಿಸಿರುವ ವ್ಯತ್ಯಾಸದ ಮೊತ್ತವನ್ನು ಇಲಾಖೆ ಮರು ಪಾವತಿಸಬೇಕು ಎಂದು ಆಗ್ರಹಿಸಿದರು.

ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕೆಲಸದ ದಿನಗಳನ್ನು ವರ್ಷಕ್ಕೆ 200ಕ್ಕೆ ಏರಿಸಬೇಕು. ಇದರ ವೇತನವನ್ನು ದಿನಕ್ಕೆ ₹ 600ಕ್ಕೆ ಹೆಚ್ಚಿಸಬೇಕು. ರೈತ ಹಾಗೂ ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಸುನಂದಾ, ಜಿಲ್ಲಾ ಘಟಕದ ಅಧ್ಯಕ್ಷೆ ಯಮುನಾ ಗಾಂವ್ಕರ್, ಖಜಾಂಚಿ ಗೀತಾ ನಾಯ್ಕ, ಸಂಘಟನಾ ಕಾರ್ಯದರ್ಶಿ ವಿದ್ಯಾ ವೈದ್ಯ, ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.