
ಅಂಕೋಲಾ: ‘ಹಿಲ್ಲೂರು ಗ್ರಾಮ ಹಿಂದಿನಿಂದಲೂ ಸಂಸ್ಕೃತಿ ಮತ್ತು ಸಂಪ್ರದಾಯವನ್ನು ಉಳಿಸಿಕೊಂಡು ಬಂದ ಗ್ರಾಮ. ಈ ಗ್ರಾಮದಲ್ಲಿ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಿ ಸಂಘಟನೆಗಳ ಆಶ್ರಯದಲ್ಲಿ ಎಲ್ಲರನ್ನೂ ಒಂದು ಕಡೆ ಸೇರಿಸುವ ಪ್ರಯತ್ನ ಮಾದರಿ ನಡೆ. ಪ್ರತಿಯೊಬ್ಬರು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕಾಗಿ ಶಿಕ್ಷಣದ ಜೊತೆಯಲ್ಲಿ ಕ್ರೀಡೆಯಲ್ಲಿ ತೊಡಗಿಕೊಳ್ಳಬೇಕು’ ಎಂದು ಉದ್ಯಮಿ ಹರೀಶ ನಾಯಕ ಹೇಳಿದರು.
ತಾಲ್ಲೂಕಿನ ಹಿಲ್ಲೂರಿನ ಮೈದಾನದಲ್ಲಿ ಶ್ರೀ ಮಾರುತಿ ಸಂಘ ಹಿಲ್ಲೂರು ಮತ್ತು ಹೊಸಕಂಬಿ ಊರ ನಾಗರಿಕರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಪ್ರಥಮ ವರ್ಷದ ಜಿಲ್ಲಾ ಮಟ್ಟದ ಹಾರ್ಡ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಬಾಬು ಸುಂಕೇರಿ, ‘ಸಂಘಟನೆ ಯಶಸ್ವಿಯಾಗಿ ಮುನ್ನಡೆಯಲಿ. ಈ ರೀತಿಯ ಕಾರ್ಯಕ್ರಮವನ್ನು ನಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿರುವುದು ಹೆಮ್ಮೆಯ ವಿಚಾರ. ಇಂತಹ ಕಾರ್ಯಕ್ರಮಗಳಿಗೆ ನನ್ನ ಸಹಕಾರ ಸದಾ ಇದೆ’ ಎಂದರು.
ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಜಗದೀಶ್ ನಾಯಕ ಮಾತನಾಡಿದರು. ಸಚಿತ್ ನಾಯಕ, ಪ್ರವೀಣ ನಾಯಕ, ಮೊಗಟ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹರೀಶ ನಾಯಕ, ಜಯಪ್ರಕಾಶ್ ಗಾಂವ್ಕರ, ಮಧುಕರ ನಾಯಕ, ದೇವರಾಯ ನಾಯಕ, ಶಶಿಕಲಾ ಸಿಂಧೆ, ಬೊಮ್ಮಯ್ಯ ಗಾಂವಕರ, ಗಣೇಶ್, ಆನಂದು ಬರ್ಗಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.