ಅಂಕೋಲಾ: ‘ಗಂಗಾವಳಿ ನದಿಯಲ್ಲಿನ ಮಣ್ಣು ತೆರವಿಗೆ ಅಲ್ಪಾವಧಿ ಟೆಂಡರ್ ಕರೆದು ಶೀಘ್ರದಲ್ಲೇ ಕೆಲಸ ಪ್ರಾರಂಭಿಸಲಾಗುತ್ತದೆ’ ಎಂದು ಶಾಸಕ ಸತೀಶ್ ಸೈಲ್ ಹೇಳಿದರು.
ತಾಲ್ಲೂಕಿನ ಶಿರೂರು ಗುಡ್ಡ ಕುಸಿತಗೊಂಡಿದ್ದ ಸ್ಥಳಕ್ಕೆ ಅಧಿಕಾರಿಗಳ ಜೊತೆ ಸೋಮವಾರ ಭೇಟಿ ನೀಡಿ ಮಾತನಾಡಿದ ಅವರು, ‘₹4.30 ಕೋಟಿ ಮೊತ್ತದ ಟೆಂಡರ್ ಕರೆಯಲು ಬಂದರು ಇಲಾಖೆ ಸಜ್ಜಾಗಿದೆ. ಜಿಲ್ಲಾಧಿಕಾರಿ ಆದೇಶದ ಮೇರೆಗೆ ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ನಡೆಯಲಿದೆ’ ಎಂದರು.
‘ಒಂಬತ್ತು ತಿಂಗಳ ಹಿಂದೆ ಗುಡ್ಡ ಕುಸಿತದ ನಂತರ ಕಾರ್ಯಾಚರಣೆ ನಡೆಯುವ ಸಂದರ್ಭದಲ್ಲೇ ನದಿಯಲ್ಲಿನ ಮಣ್ಣು ಮತ್ತು ಗುಡ್ಡದ ಮೇಲಿನ ಮಣ್ಣನ್ನು ತೆರವುಗೊಳಿಸುವ ಅಗತ್ಯತೆ ಬಗ್ಗೆ ಜಿಲ್ಲಾಡಳಿತದೊಂದಿಗೆ ಚರ್ಚಿಸಿದ್ದೆ. ಸರ್ಕಾರದಿಂದ ಅನುದಾನ ನೀಡುತ್ತೇವೆ’ ಎಂದು ಭರವಸೆ ನೀಡಿದರು.
‘ಮುಷ್ಕರ ನಡೆಸುವುದು ಸರಿಯೇ’ ಎಂದು ಶಾಸಕರು ಗ್ರಾಮ ಪಂಚಾಯಿತಿ ಪ್ರತಿನಿಧಿಗಳನ್ನು ಪ್ರಶ್ನಿಸಿದರು.
ಒಂಬತ್ತು ತಿಂಗಳಿಂದ ರಾಷ್ಟೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಐ.ಆರ್.ಬಿ. ಕಂಪನಿಯವರು ಗುಡ್ಡ ಕುಸಿತ ಪ್ರದೇಶದಲ್ಲಿ ಯಾವುದೇ ರೀತಿಯ ಕಾಮಗಾರಿ ಮಾಡದಿರುವ ಕುರಿತು ಸ್ಥಳದಲ್ಲಿದ್ದ ವಿವಿಧ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಶಾಸಕರ ಗಮನಕ್ಕೆ ತಂದರು. ಮಣ್ಣು ತೆರವು ಕಾಮಗಾರಿ ನಡೆಸುವ ಕುರಿತು ಶಾಸಕರು ಭರವಸೆ ನೀಡಿದ್ದರಿಂದ ಮುಷ್ಕರವನ್ನು ಸ್ವಲ್ಪ ದಿನ ಮುಂದುಡುತ್ತೇವೆ ಎಂದರು.
ತಹಶೀಲ್ದಾರ್ ನಿಶ್ಚಲ್ ನೋರೋನಾ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಾಯಿ ಗಾಂವಕರ , ತಾಲ್ಲೂಕು ಘಟಕದ ಅಧ್ಯಕ್ಷ ಮಂಜೇಶ್ವರ ನಾಯಕ, ವಾಸರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರದೀಪ್ ನಾಯಕ, ಬೆಳಸೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೋಭಾ ನಾಯಕ, ಸಗಡಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರವಣ್ ನಾಯ್ಕ್ ಸೇರಿದಂತೆ ಬಂದರು ಇಲಾಖೆಯ ಅಧಿಕಾರಿಗಳು, ಗ್ರಾಮಸ್ಥರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.