ADVERTISEMENT

ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸಿ

ಸಂಯುಕ್ತ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿ ಸಭೆಯಲ್ಲಿ ಒತ್ತಾಯ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2019, 13:20 IST
Last Updated 22 ಡಿಸೆಂಬರ್ 2019, 13:20 IST
ಕರ್ನಾಟಕ ರಾಜ್ಯ ಸಂಯುಕ್ತ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿ ಸಭೆಯಲ್ಲಿ ಪ್ರತಿಭಟನಾ ಧರಣಿಯ ಕರಪತ್ರ ಬಿಡುಗಡೆಗೊಳಿಸಲಾಯಿತು
ಕರ್ನಾಟಕ ರಾಜ್ಯ ಸಂಯುಕ್ತ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿ ಸಭೆಯಲ್ಲಿ ಪ್ರತಿಭಟನಾ ಧರಣಿಯ ಕರಪತ್ರ ಬಿಡುಗಡೆಗೊಳಿಸಲಾಯಿತು   

ಶಿರಸಿ: ಆಶಾ ಕಾರ್ಯಕರ್ತೆಯರ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ಶೀಘ್ರ ಕ್ರಮವಹಿಸಬೇಕು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿ ಸಲಹೆಗಾರ ಗಂಗಾಧರ ಬಡಿಗೇರ ಹೇಳಿದರು.

ಎಐಯುಟಿಯುಸಿಗೆ ಸೇರಿದ ಸಂಯುಕ್ತ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿ ಭಾನುವಾರ ಇಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು. ಆರ್‌ಸಿಎಚ್ ಪೋರ್ಟಲ್ ಕಾರಣಕ್ಕೆ ಕಳೆದ 16 ತಿಂಗಳುಗಳಿಂದ ಆಶಾ ಕಾರ್ಯಕರ್ತೆಯರು ಮಾಡಿದಷ್ಟು ಕೆಲಸಕ್ಕೆ ವೇತನ ಬಿಡುಗಡೆಯಾಗಿಲ್ಲ. ಆರೋಗ್ಯ ಸಚಿವರು ನೀಡಿದ ಭರವಸೆ ಹಾಗೆಯೇ ಉಳಿದಿದೆ. ಕೇಂದ್ರ, ರಾಜ್ಯ ಸರ್ಕಾರಗಳ ಪ್ರೋತ್ಸಾಹಧನ ಒಟ್ಟಿಗೆ ಸೇರಿಸಿ, ಕನಿಷ್ಠ ಮಾಸಿಕ ಗೌರವ ಧನ ₹ 12ಸಾವಿರ ನೀಡಬೇಕು ಎಂದರು.

ಈಗಾಗಲೇ ನೀಡಿದ ಭರವಸೆಯಂತೆ ಆಶಾ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಿ, ಆಶಾ ಕಾರ್ಯಕರ್ತೆಯರ ಮಾರಣಾಂತಿಕ ಕಾಯಿಲೆ ಚಿಕಿತ್ಸೆಗೆ, ಮರಣ ಹೊಂದಿದಲ್ಲಿ ಕುಟುಂಬಕ್ಕೆ ಪರಿಹಾರ ಒದಗಿಸಬೇಕು. ಪ್ರತಿ ಸರ್ವೆಗೆ ದಿನ ಭತ್ಯೆ ₹ 300 ನಿಗದಿಗೊಳಿಸಿ, ಆಯಾ ದಿನವೇ ನೀಡಬೇಕು. ಆಶಾ ಸುಗಮಗಾರರಿಗೆ ₹ 12ಸಾವಿರ ಮಾಸಿಕ ವೇತನ, ಪ್ರಯಾಣ ಭತ್ಯೆ ನಿಗದಿ ಮಾಡಬೇಕು. ದುಡಿತಕ್ಕೆ ತಕ್ಕ ಪ್ರತಿಫಲ ಪಡೆಯಲು ನ್ಯಾಯಯುತ ಹೋರಾಟಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು.

ADVERTISEMENT

ಜಿಲ್ಲಾ ಘಟಕದ ಅಧ್ಯಕ್ಷೆ ಪದ್ಮಾ ಚಲವಾದಿ ಅಧ್ಯಕ್ಷತೆ ವಹಿಸಿದ್ದರು. ಅನ್ನಪೂರ್ಣಾ, ಕವಿತಾ, ಸುವರ್ಣಾ, ಸುಷ್ಮಾ, ಕಸ್ತೂರಿ, ಜಯಾ, ಜಾನಕಿ ಇದ್ದರು. ಜಿಲ್ಲೆಯ ಎಲ್ಲ ತಾಲ್ಲೂಕುಗಳ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.