
ವಸಂತ ನಾಯ್ಕ, ಕಮಲಾಕರ ಭಟ್, ಸುಚಿತ್ರಾ ನಾಯ್ಕ
ಕಾರವಾರ: ಸಿದ್ದಾಪುರ ತಾಲ್ಲೂಕಿನ ಅವರಗುಪ್ಪದಲ್ಲಿ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಆರೋಪಿಗಳ ಪೈಕಿ ನಾಲ್ವರನ್ನು ಕೋರ್ಟ್ ಬುಧವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.
ಪ್ರಕರಣದ ಪ್ರಮುಖ ಆರೋಪಿ ಸುಚಿತ್ರಾ ನಾಯ್ಕ, ಆಕೆಯ ತಂದೆ ಲೋಕನಾಥ ನಾಯ್ಕ, ಜ್ಯೋತಿಷಿ ಕಮಲಾಕರ ಹೆಗಡೆ (ಕಮಲಾಕರ ಭಟ್), ಆಕಾಶ್ ಎಂ. ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಉಳಿದ ಮೂವರು ಆರೋಪಿಗಳಾದ ಶಿವಮೊಗ್ಗದ ಮಹಮ್ಮದ್ ಮೈಫೂಜ್, ಫೈಸಲ್ ಜಾನ್ ಮತ್ತು ಇಫ್ರಾನ್ ಅಮಾನುಲ್ಲಾ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದಾರೆ.
‘ಆರೋಪಿಗಳನ್ನು ಸಿದ್ದಾಪುರ ಠಾಣೆಯಲ್ಲೇ ವಿಚಾರಣೆಗೆ ಒಳಪಡಿಸಲಾಯಿತು. ಠಾಣೆಯ ಹೊರಗೆ ನೂರಾರು ಸಂಖ್ಯೆಯಲ್ಲಿ ಜನರು ಸೇರಿದ್ದರು. ಪ್ರತಿಭಟನೆಯಲ್ಲಿ ತೊಡಗಿದ್ದರಿಂದ ಜನರನ್ನು ಚದುರಿಸಿ, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು’ ಎಂದು ಪೊಲೀಸರು ತಿಳಿಸಿದ್ದಾರೆ.
‘ಹತ್ಯೆ ಘಟನೆಗೆ ಸಂಬಂಧಿಸಿದಂತೆ ಸಂಚು ರೂಪಿಸಿಕೊಂಡು ಬಂದಿದ್ದವರು ಕರೆತಂದಿದ್ದ ಯುವಕರನ್ನು ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ಹತ್ಯೆ ಘಟನೆ ದಿನವೇ ಕಿರುಕುಳದ ಬಗ್ಗೆ ಸಿದ್ದಾಪುರ ಠಾಣೆಗೆ ದೂರು ನೀಡಲು ಬಂದಿದ್ದರೂ ನಿರ್ಲಕ್ಷಿಸಿದ ಆರೋಪದ ಮೇಲೆ ಪೊಲೀಸ್ ಸಿಬ್ಬಂದಿಯನ್ನೂ ವಿಚಾರಣೆ ನಡೆಸಲಾಗುತ್ತಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.