ಅಂಕೋಲಾ: ತಾಲ್ಲೂಕಿನ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನೆಯ ಮಾಸಿಕ ಕೆ.ಡಿ.ಪಿ. ಸಭೆಯು ತಾ.ಪಂ. ಅಧ್ಯಕ್ಷೆ ಸುಜಾತಾ ಗಾಂವಕರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು.
ತಾಲ್ಲೂಕು ವೈದ್ಯಾಧಿಕಾರಿ ಮಾತನಾಡಿ, ತಾಲ್ಲೂಕಿನಲ್ಲಿ ಕೇವಲ 6 ಸಕ್ರಿಯ ಕೋವಿಡ್ ಪ್ರಕರಣ ಇದ್ದು, ನಿಯಂತ್ರಣದಲ್ಲಿದೆ. ತಾಲ್ಲೂಕು ಆಸ್ಪತ್ರೆಯಲ್ಲಿ ಕಳೆದ ಒಂದು ವರ್ಷದಿಂದ ಸ್ತ್ರೀರೋಗ ತಜ್ಞರು ಇಲ್ಲದ ಕಾರಣ ಆಸ್ಪತ್ರೆಗೆ ಬರುವ ಮಹಿಳೆಯರ ಸಂಖ್ಯೆ ಕಡಿಮೆಯಾಗಿದೆ. ಸುಸಜ್ಜಿತ ಯಂತ್ರಗಳಿದ್ದರೂ ಸಂಬಂಧಪಟ್ಟ ವೈದ್ಯರು ಹಾಗೂ ತಂತ್ರಜ್ಞರು ಇಲ್ಲದಿರುವುದರಿಂದ ಅವುಗಳ ಬಳಕೆಯಾಗುತ್ತಿಲ್ಲ ಎಂದರು.
ತಾಲ್ಲೂಕಿನ ಹಲವು ಕಡೆ ಕುಡಿಯುವ ನೀರಿನ ಪೈಪ್ಲೈನ್ ಕಾಮಗಾರಿ ನಡೆಯುತ್ತಿದ್ದು, ನೀರಿನ ಸಂಪರ್ಕ ಯೋಜನೆಯ ಬಗ್ಗೆ ಅಧಿಕಾರಿಗಳಿಗೆ ಸ್ಪಷ್ಟತೆ ಇಲ್ಲ ಎಂದು ಅಧ್ಯಕ್ಷರುತರಾಟೆಗೆ ತೆಗೆದುಕೊಂಡರು. ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥನಾಯ್ಕ, ಈ ರೀತಿ ಅವೈಜ್ಞಾನಿಕ ಪೈಪ್ಲೈನ್ ಕಾಮಗಾರಿ ನಡೆಸಿ ಸರ್ಕಾರದ ಹಣವನ್ನು ಪೋಲು ಮಾಡಬೇಡಿ ಎಂದು ಗರಂ ಆದರು.
ಆಕಳುಗಳಲ್ಲಿ ಹೊಸ ಕಾಯಿಲೆ ಕಂಡುಬಂದಿರುವ ಬಗ್ಗೆ ಪಶು ವೈದ್ಯಾಧಿಕಾರಿಗಳು ಮಾಹಿತಿ ನೀಡಿದರು. ಅಂಗವಿಕಲರಿಗೆ ನೀಡಿದ ತ್ರಿಚಕ್ರ ವಾಹನಗಳಿಗೆ ಸೂಕ್ತ ದಾಖಲೆ,ಪರವಾನಗಿ ನೀಡದಿರುವ ಬಗ್ಗೆ ಕಂದಾಯ ಇಲಾಖೆ ಅಧಿಕಾರಿಗಳ ಗಮನ ಸೆಳೆಯಲಾಯಿತು. ಸಭೆಯಲ್ಲಿ ತಾ.ಪಂ ಉಪಾಧ್ಯಕ್ಷೆ ತುಳಸಿ ಸುಕ್ರು ಗೌಡ, ಕಾರ್ಯನಿರ್ವಹಣಾ ಅಧಿಕಾರಿ ಪಿ.ವೈ. ಸಾವಂತ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.