ಕಾರವಾರ: ಹೊನ್ನಾವರ ತಾಲ್ಲೂಕಿನ ಹೊಸಪಟ್ಟಣ ಎಂಬಲ್ಲಿಗುಡ್ಡದ ಮೇಲಿನಿಂದ ಬಂಡೆಗಲ್ಲೊಂದು ಗುರುವಾರ ರಾಷ್ಟ್ರೀಯ ಹೆದ್ದಾರಿ 66ರ ಮೇಲೆ ಉರುಳಿದೆ. ಈ ಸಂದರ್ಭದಲ್ಲಿ ಬೈಕ್ ಸವಾರ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದು, ಬೈಕ್ ಸಂಪೂರ್ಣ ಜಖಂ ಆಗಿದೆ.
ಬೈಕ್ ಸವಾರ ಗಿರೀಶ ಬುಧವಂತ ನಾಯ್ಕ ಅವರ ಕೈ ಮತ್ತು ಕಾಲಿಗೆಗಾಯಗಳಾಗಿವೆ. ಅದೃಷ್ಟವಶಾತ್ ಅವರಿಗೆ ಪ್ರಾಣಾಪಾಯವಾಗಿಲ್ಲ. ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 66ರ ಚತುಷ್ಪಥ ಕಾಮಗಾರಿಗಾಗಿ ಸಮೀಪದ ಗುಡ್ಡವನ್ನು ಕತ್ತರಿಸಲಾಗಿತ್ತು. ಅದರ ಮೇಲಿದ್ದ ಚಿರೆಕಲ್ಲಿನ ಬಂಡೆಯೊಂದು ಉರುಳಿದ್ದರಿಂದ ಈ ಅವಘಡ ನಡೆದಿದೆ.
ಐಡಿಯಲ್ ರೋಡ್ ಬಿಲ್ಡರ್ಸ್ (ಐ.ಆರ್.ಬಿ) ಕಂಪನಿಯು ಗುತ್ತಿಗೆ ಪಡೆದಿದ್ದು, ಅಗತ್ಯ ಮುನ್ನೆಚ್ಚರಿಕೆ ವಹಿಸುತ್ತಿಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಳೆಗಾಲದ ಆರಂಭದಲ್ಲೇ ಇಂತಹ ಘಟನೆ ನಡೆದಿರುವುದು ಜನರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ. ಸ್ಥಳೀಯರ ಮತ್ತು ಪ್ರಯಾಣಿಕರ ಭೀತಿಯನ್ನು ದೂರ ಮಾಡಲು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಮಳೆಗಾಲದಲ್ಲಿ ಮತ್ತಷ್ಟು ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.