ಮುಂಡಗೋಡ: ಸಾಮಾಜಿಕ ನ್ಯಾಯದ ಪರಿಕಲ್ಪನೆಯಡಿ ಬಿಜೆಪಿಯು ಗಣಪತಿ ಉಳ್ವೇಕರ್ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದೆ. ಆರು ಬಾರಿ ವಿಧಾನಪರಿಷತ್ ಚುನಾವಣೆ ನಡೆದಿದೆ. ಆರರಲ್ಲಿಯೂ ಆಡಳಿತ ಪಕ್ಷದ ಅಭ್ಯರ್ಥಿಗಳೇ ಆಯ್ಕೆಯಾಗಿದ್ದಾರೆ. ಈ ಸಲ ಬಿಜೆಪಿ ಆಡಳಿತದಲ್ಲಿದ್ದು, ಗಣಪತಿ ಉಳ್ವೇಕರ್ ಗೆಲ್ಲುವುದು ನಿಶ್ಚಿತ ಎಂದು ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.
ತಾಲ್ಲೂಕಿನ ಕೊಪ್ಪ ಗ್ರಾಮದಲ್ಲಿ ಮಂಗಳವಾರ ನಡೆದ ವಿಧಾನಪರಿಷತ್ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್ ಪರ ಮತಯಾಚನೆ ಸಭೆಯಲ್ಲಿ ಅವರು ಮಾತನಾಡಿದರು. ಇದು ದೇಶಪಾಂಡೆ ಹಾಗೂ ಹೆಬ್ಬಾರ್ ನಡುವಿನ ಚುನಾವಣೆಯಲ್ಲ. ಬದಲಿಗೆ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಿನ ಚುನಾವಣೆ ಅಂತ ಪರಿಗಣಿಸಿದ್ದೇನೆ. ವ್ಯಕ್ತಿಗತವಾಗಿ ಯಾರ ಬಗ್ಗೆಯೂ ಆರೋಪ ಮಾಡುವುದಿಲ್ಲ. ಆದರೆ, ಬಿಜೆಪಿ ಪಕ್ಷದ ಅಭ್ಯರ್ಥಿ ಗಣಪತಿ ಉಳ್ವೇಕರ್ ಅವರನ್ನು ವಿಧಾನಪರಿಷತ್ ನಲ್ಲಿ ಕುಳ್ಳಿರಿಸುವುದಕ್ಕೆ ಆದ್ಯತೆ ನೀಡುತ್ತೇನೆ ಎಂದರು.
ಈ ಸಲದ ವಿಧಾನ ಪರಿಷತ್ ಚುನಾವಣೆಯು ಮುಂದೆ ಬರಲಿರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗೆ ದಿಕ್ಸೂಚಿಯಾಗಲಿದೆ. ವಿಧಾನಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ಅತಿ ಅವಶ್ಯವಾಗಿದೆ. 1876ಕ್ಕಿಂತ ಹೆಚ್ಚಿನ ಬಿಜೆಪಿ ಬೆಂಬಲಿತ ಸದಸ್ಯರು ಸ್ಥಳೀಯ ಸಂಸ್ಥೆಗಳಲ್ಲಿದ್ದಾರೆ. ಅವರಷ್ಟೇ ಮತ ಹಾಕಿದರೂ ಬಿಜೆಪಿ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನಪರಿಷತ್ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ವಿ.ಎಸ್.ಪಾಟೀಲ, ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಎಲ್.ಟಿ.ಪಾಟೀಲ ಮಾತನಾಡಿದರು.
ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ರವಿಗೌಡ ಪಾಟೀಲ, ಯುವಮುಖಂಡ ವಿವೇಕ ಹೆಬ್ಬಾರ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರೇಣುಕಾ ಹಾವೇರಿ, ಉಪಾಧ್ಯಕ್ಷ ಮಂಜುನಾಥ ಹರಮಲಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಷಾ ಹೆಗಡೆ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅನ್ನಪೂರ್ಣ ಬೆಣ್ಣಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾರಕ್ಕ ದುರಮುರ್ಗಿ, ಜಗದೀಶ ಕುರುಬರ್, ಮುಂಡಗೋಡ ಉಸ್ತುವಾರಿ ಸದಾನಂದ ಭಟ್ಟ, ನಿಂಗಜ್ಜ ಕೋಣನಕೇರಿ, ನಾಗಭೂಷಣ ಹಾವಣಗಿ, ಸಂತೋಷ ತಳವಾರ ಇತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.